ಮುಂಗಾರಿನ ಆರಂಭದ ಹಬ್ಬ: ಮಣ್ಣಿನ ಎತ್ತುಗಳಿಗೆ ಪೂಜಿಸುವ ಮಣ್ಣೆತ್ತಿನ ಅಮಾವಾಸ್ಯೆ

ರಾಯಚೂರು, ಜೂ28: ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಂಪ್ರದಾಯಿಕ ಹಬ್ಬ ಮಣ್ಣೆತ್ತಿನ ಅಮವಾಸ್ಯೆ. ಇದು ಮುಂಗಾರಿನ ಆರಂಭದ ಹಬ್ಬ ಕೂಡ. ತಮ್ಮ ಬದುಕಿಗೆ ಆಸರೆಯಾಗಿರುವ ಎತ್ತುಗಳನ್ನು ರೈತರು ಪೂಜಿಸಿ ಸಂಭ್ರಮಪಡುವ ಈ ಹಬ್ಬ ಕಾರಹುಣ್ಣಿಮೆಯ ನಂತರ ಬರುತ್ತದೆ. ಭೂತಾಯಿಯನ್ನು ಉಳುವ ಸಂಕೇತವಾದ ಎತ್ತುಗಳನ್ನು ಸಣ್ಣ ದೊಡ್ಡ ಆಕಾರಗಳಲ್ಲಿ ಕೆಲವರು ಮನೆಯಲ್ಲಿಯೇ ತಯಾರಿಸಿ ಕೊಳ್ಳುತ್ತಾರೆ. ಇಲ್ಲವೇ ಊರ ಕುಂಬಾರ ಮನೆಗಳಿಂದಲೂ ಮಣ್ಣಿನಿಂದ ತಯಾರಿಸಿದ ಜೋಡಿ ಎತ್ತು , ಹುಲ್ಲು ತಿನ್ನಲು ಗ್ವಾದಲಿ ತರುತ್ತಾರೆ. ರೈತನ ಬಲದ ನೆಲೆಯಿಂದ ಎತ್ತುಗಳನ್ನು ಗಣಪನಂತೆ ಮಣ್ಣಿನಿಂದ ಮಾಡಿ ಪೂಜಿಸಿ ಎತ್ತುಗಳಿಗೆ ದೈವಿ ಸ್ವರೂಪ ಕೊಡುವುದು ನಮ್ಮ ಸಂಪ್ರದಾಯ. ಅದರಂತೆ ದೇವರ ಜಗುಲಿಯ ಮೇಲಿಟ್ಟು ಪೂಜೆ ಮಾಡುತ್ತಾರೆ.

ರೈತಾಪಿ ಜನರು ತಮ್ಮ ಬದುಕಿಗೆ ಆಸರೆಯಾಗಿರುವ ಎತ್ತು ಗಳನ್ನು ಪೂಜಿಸಿ ಸಂಭ್ರಮ ಪಡುವ ಹಬ್ಬ, ಮಣ್ಣು ಒಕ್ಕಲು ಮಕ್ಕಳಿಗೆ ಅತ್ಯಂತ ಪವಿತ್ರವಾದುದು.ವರ್ಷಾರಂಭದಿಂದ ಐದು ಮುಖ್ಯ ಮಣ್ಣಿನ ಪೂಜೆಯನ್ನು ನೆರವೇರಿಸುವ ಸಂಪ್ರದಾಯವಿದೆ. ಆಷಾಢ, ಶ್ರಾವಣ ಮತ್ತು ಭಾದ್ರಪದ ಮಾಸಗಳು ಮಣ್ಣು ಪೂಜೆಯ ದ್ಯೋತಕವಾಗಿವೆ, ಮಣ್ಣೆತ್ತು, ಗುಳ್ಳವ್ವ, ಹುತ್ತಪ್ಪ, ಗಣಪ್ಪ ಹಾಗೂ ಜೋಕುಮಾರ ಈ ಐದೂ ಮಣ್ಣಿನಿಂದ ಮಾಡಿದ ದೈವಗಳನ್ನು ಮೂರು ಮಾಸಗಳಲ್ಲಿ ಪೂಜಿಸುತ್ತಾರೆ.

ಮಣ್ಣೆತ್ತುಗಳಿಗೆ ಹೂವಿನಿಂದ ಪೂಜಿಸಿ, ಸಿಹಿ ನೈವೇದ್ಯ

ಮಣ್ಣೆತ್ತುಗಳಿಗೆ ಹೂವಿನಿಂದ ಪೂಜಿಸಿ, ಸಿಹಿ ನೈವೇದ್ಯ

"ಮಣ್ಣೆತ್ತುಗಳಿಗೆ ಹೂವಿನಿಂದ ಪೂಜಿಸಿ ಕಾಯಿ ಕರ್ಪೂರ, ಲೋಭಾನ ಆರತಿ ಮಾಡಿ ವಿವಿಧ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ ಒಟ್ಟಾಗಿ ಕುಳಿತು ಊಟ ಮಾಡುತ್ತಾರೆ. ಸಂಜೆ ವೇಳೆಗೆ ಹೊಳೆ , ಕೆರೆ, ಹರಿಯುವ ನೀರಿನ ದಂಡೆಗೆ ಹೋಗಿ ಮಣ್ಣೆತ್ತುಗಳ ಮುಖ ತೊಳೆದು ವಿಭೂತಿ ಕುಂಕುಮ ಹಚ್ಚಿ ಆರತಿ ಬೆಳೆಗಿ , ಮಳೆ ಬೆಳೆ ಸಮೃದ್ಧಿಗೆ ಬೇಡಿ ಕೊಂಡು ಎತ್ತುಗಳನ್ನು ನೀರಿಗೆ ಬಿಡುವುದು ಪೂರ್ವಜರ ಕಾಲದಿಂದಲೂ ನಡೆದು ಬಂದಿದೆ. ಪೂರ್ವಜರ ಕಾಲದಿಂದಲೂ ಮಣ್ಣೆತ್ತಿನ ಅಮಾವಾಸ್ಯೆ ಪೂಜೆ ಆಚರಿಸಿಕೊಂಡು ಬಂದಿದ್ದೇವೆ. ಈ ಆಚರಣೆಯಿಂದ ಭೂಮಿ ಮತ್ತು ರೈತನಿಗೆ ಬಲ ನೀಡುವ ಅಮಾವಾಸ್ಯೆ. ಎತ್ತುಗಳನ್ನು ಗೌರವಿಸಿದಂತಾಗಿದೆ," ಶಕ್ತಿನಗರದ ಶಾಂತಾ ಹೇಳುತ್ತಾರೆ.

ಸಿಂಗರಿಸಿದ ಜೋಡೆತ್ತುಗಳನ್ನು ನೋಡುವುದೇ ಒಂದು ಸೊಗಸು

ಸಿಂಗರಿಸಿದ ಜೋಡೆತ್ತುಗಳನ್ನು ನೋಡುವುದೇ ಒಂದು ಸೊಗಸು

ದನಕರುಗಳನ್ನು ಮನಬಂದಂತೆ ಓಡಾಡಿಸುವ ಮೂಲಕ ತಿಂಗಳೊಪ್ಪತ್ತಿನಿಂದ ವಿಶ್ರಾಂತಿಗೆ ಸರಿದಿದ್ದ ಅವುಗಳನ್ನು ಮತ್ತೆ ಕೃಷಿ ಕಾಯಕಕ್ಕೆ ಸಜ್ಜು ಮಾಡುತ್ತಾರೆ. ಕಾರ ಹುಣ್ಣಿಮೆ ಮುಗಿದು ಬರುವ ಅಮಾವಾಸ್ಯೆಯೇ ಮಣ್ಣೆತ್ತಿನ ಅಮಾವಾಸ್ಯೆ. ಹೊಲಗಳಿಗೆ ಹೋಗಿ ಜಿಗುಟಿನಿಂದ ಕೂಡಿದ ಮಣ್ಣನ್ನು ತಂದು ಎತ್ತುಗಳನ್ನು ತಯಾರಿಸುತ್ತಾರೆ. ಭೂತಾಯಿಯನ್ನು ಉಳುವ ಸಂಕೇತವಾದ ಎತ್ತುಗಳನ್ನು ದೊಡ್ಡ, ಸಣ್ಣ ಆಕಾರಗಳಲ್ಲಿ ತಯಾರಿಸಿಕೊಳ್ಳುತ್ತಾರೆ. ಇಲ್ಲವೇ ಊರ ಕುಂಬಾರ ಮನೆಗಳಿಂದಲೂ ತಯಾರಿಸಿ ಜೋಡಿ ಎತ್ತುಗಳನ್ನು ಜೋಳ, ಕಾಳು, ಹಣಕೊಟ್ಟು ಖರೀದಿಸಿ ತರುತ್ತಾರೆ. ಕುಂಬಾರರು ಎತ್ತುಗಳೊಂದಿಗೆ ಒಂದಿಷ್ಟು ಹಸಿ ಮಣ್ಣನ್ನೂ ಕೊಡುತ್ತಾರೆ. ಈ ಹಸಿ ಮಣ್ಣಲ್ಲಿ ದನಗಳಿಗೆ ಹುಲ್ಲು ತಿನ್ನಲು ಗ್ವಾದಲಿ ಮಾಡುತ್ತಾರೆ. ಬಣ್ಣಗಳ ಬ್ಯಾಗಡಿ ಚೂರು, ಬಣ್ಣದಲ್ಲಿ ತೊಯಿಸಿದ ಜೋಳ. ಕುಸುಬಿ ಕಾಳುಗಳಿಂದ ಎತ್ತುಗಳಿಗೆ ಕೊಂಬಣಸು, ಇಣಿಗವಚ, ಜೂಲು, ತೋಡೆ, ಗಂಟೆ ಸರಗಳಿಂದ ಸಿಂಗರಿಸುತ್ತಾರೆ. ಸಿಂಗರಿಸಿದ ಜೋಡೆತ್ತುಗಳನ್ನು ನೋಡುವುದೇ ಒಂದು ಸೊಗಸು.

ಹೊಸ ಬಟ್ಟೆಗಳನ್ನು ತೊಟ್ಟು ಊರಲ್ಲಿ ದೇವರುಗಳಿಗೆ ಪೂಜೆ

ಹೊಸ ಬಟ್ಟೆಗಳನ್ನು ತೊಟ್ಟು ಊರಲ್ಲಿ ದೇವರುಗಳಿಗೆ ಪೂಜೆ

ನಂತರ ದೇವರ ಜಗುಲಿಯ ಮೇಲಿಟ್ಟು ಪೂಜೆಗೆ ಅಣಿಯಾಗುವ ಹೊತ್ತಿಗೆ ಮನೆ ಹೆಣ್ಣು ಮಕ್ಕಳು ಹೋಳಿಗೆ, ಕಡಬು ಸೇರಿದಂತೆ ಹಲವು ಸವಿಯಾದ ಅಡುಗೆ ಸಿದ್ಧಪಡಿಸುತ್ತಾರೆ. ಮನೆಯ ದನಕರುಗಳನ್ನೂ ಮೈತೊಳೆದು ಪೂಜೆಗೆ ಸಿಂಗರಿಸುತ್ತಾರೆ. ಮಣ್ಣೆತ್ತುಗಳಿಗೆ ಕಾಯಿ, ಕರ್ಪೂರ, ಊದುಬತ್ತಿ, ಲೋಬಾನ ಹಾಕಿ ಎಡೆ ಹಿಡಿದು ಪೂಜೆ ಮಾಡುತ್ತಾರೆ. ಸಕಲ ಜೀವ ರಾಶಿಗಳಿಗೆ ಅನ್ನ ಹಾಕುವ ಭೂತಾಯಿಗೆ ಈ ಮೂಲಕ ಪೂಜೆ ಸಲ್ಲಿಸಿ ಕೃತಜ್ಞತೆ ಅರ್ಪಿಸುತ್ತಾರೆ.

ಹೊಸ ಬಟ್ಟೆಗಳನ್ನು ತೊಟ್ಟು ಊರಲ್ಲಿ ದೇವರುಗಳಿಗೆ ಕಾಯಿ, ಕರ್ಪೂರದೊಂದಿಗೆ ಹೋಗಿ ಎಡೆ ಹಿಡಿದು ಬಂದು ಒಟ್ಟಾಗಿ ಕುಳಿತು ಊಟ ಮಾಡುತ್ತಾರೆ. ಸಂಜೆ ಆರತಿ ಹಿಡಿದ ಹೆಣ್ಣುಮಕ್ಕಳು ಮನೆ ಮನೆ ತೆರಳಿ ಪೂಜಿತ ಎತ್ತುಗಳಿಗೆ ಆರತಿ ಬೆಳಗಿ ಸಂಭ್ರಮಿಸುತ್ತಾರೆ.ಕೃಷಿಕರ ಅತ್ಯಂತ ಒಡನಾಡಿಯಾಗಿರುವ ದನಕರುಗಳನ್ನು ಕಾರ ಹುಣ್ಣಿಮೆಯಲ್ಲಿ ವಿಶೇಷವಾಗಿ ಮೈ ತೊಳೆದು, ಬಣ್ಣ ಹಚ್ಚಿ, ವಿವಿಧ ಪರಿಕರ ಗಳಿಂದ ಸಿಂಗಾರ ಮಾಡಿ, ಹೋಳಿಗೆ, ಕಡಬು ಮುಂತಾದ ಸಿಹಿ ತಿನಿಸುಗಳನ್ನು ಮಾಡಿ ಎಡೆ ಹಿಡಿದು ಸಂಜೆಗೆ ಕರಿ ಹರಿಯುವ ಸಂಭ್ರಮ ಹೇಳತೀರದು.

ಊರ ಸಮೃದ್ಧಿಗೆ ಬೇಡಿಕೊಂಡು ಎತ್ತುಗಳನ್ನು ಹೊಳೆಗೆ ಬಿಡುತ್ತಾರೆ

ಊರ ಸಮೃದ್ಧಿಗೆ ಬೇಡಿಕೊಂಡು ಎತ್ತುಗಳನ್ನು ಹೊಳೆಗೆ ಬಿಡುತ್ತಾರೆ

ಮರುದಿನ ಮಕ್ಕಳು ಎತ್ತುಗಳನ್ನು ತೆಗೆದುಕೊಂಡು ಅದರಲ್ಲಿ ಒಂದು ಎತ್ತಿನ ಕಾಲು ಮುರಿದು ತಟ್ಟೆಯಲ್ಲಿಟ್ಟುಕೊಂಡು ಮನೆ ಮನೆಗೆ ತೆರಳಿ 'ಎಂಟತ್ತಿನ್ಯಾಗ ಒಂದ ಕುಂಟೆತ್ತ ಬಂದೈತಿ ಜ್ವಾಳಾ ನೀಡಿರಿ' ಎಂದು ತಿರುಗುತ್ತಾರೆ. ಮನೆಯವರು ಜೋಳ, ಗೋದಿ, ಸಜ್ಜೆ , ಅಕ್ಕಿ , ಹಣ ನೀಡಿ ಕಳುಹಿಸುತ್ತಾರೆ. ಸಂಗ್ರಹಿಸಿದ ದವಸ ಧಾನ್ಯಗಳನ್ನು ಊರ ಅಂಗಡಿಗೆ ಹಾಕಿ ಪಂಚ ಪಳಾರ, ಊದಬತ್ತಿ, ಕುಂಕುಮ, ವಿಭೂತಿ, ತೆಂಗಿನಕಾಯಿ, ಬೆಲ್ಲ, ಚುರಮುರಿ ಖರೀದಿಸುತ್ತಾರೆ. ಎತ್ತುಗಳನ್ನು ತೆಗೆದುಕೊಂಡು ಹೊಳೆ, ಕೆರೆ, ಹಳ್ಳದ ದಂಡೆಗೆ ಹೋಗಿ ಅಲ್ಲಿ ಎಲ್ಲ ಮಣ್ಣೆತ್ತುಗಳ ಮುಖ ತೊಳೆದು ವಿಭೂತಿ, ಕುಂಕುಮ ಹಚ್ಚಿ ಉದುಬತ್ತಿ ಬೆಳಗಿ ಪಂಚ ಪಳಾರು ಹಾಕಿ, ಕಾಯಿ ಒಡೆದು ಕಾಲು ಮುಗಿದು ಊರ ಸಮೃದ್ಧಿಗೆ ಬೇಡಿಕೊಂಡು ಎತ್ತುಗಳನ್ನು ಹೊಳೆಗೆ ಬಿಡುತ್ತಾರೆ.

ನಂತರ ದಾರಿಯಲ್ಲಿ ಸಿಕ್ಕವರಿಗೆ ಪಳಾರು ಹಂಚುತ್ತಾರೆ. ಇದು ಹಳ್ಳಿಯ ಮಕ್ಕಳ ಮಣ್ಣೆತ್ತಿನ ಅಮವಾಸ್ಯೆಯ ಸಂಭ್ರಮ. ಭೂತಾಯಿಗೆ ರೈತಾಪಿ ಜನ ಮಳೆ, ಬೆಳೆ ಚೆನ್ನಾಗಿ ಆಗಲೆಂದು ಕೃಷಿ ವರ್ಷಾರಂಭದಲ್ಲಿ ಬೇಡಿಕೊಳ್ಳುವ ಹಬ್ಬವಾಗಿದೆ.

Recommended Video

      ಯಾರು ಇಲ್ಲದಿದ್ದರೂ ನಗುಮುಖದಲ್ಲಿ ನಮಸ್ಕಾರ ಮಾಡುತ್ತಿರುವ ರಾಜಕಾರಣಿ! | *Politics | OneIndia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+