ಹಿರಿಯೂರಿನ ತಿಪ್ಪೇಸ್ವಾಮಿ ಅವರಿಗೆ ರಂಗಭೂಮಿ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ
ಚಿತ್ರದುರ್ಗ, ಅಕ್ಟೋಬರ್ 28: 2020ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಪ್ಪಳಗೆರೆ ಗ್ರಾಮದ ಸಂಗೀತ ಪ್ರಾಂಶುಪಾಲ ಆರ್. ತಿಪ್ಪೇಸ್ವಾಮಿ ಅವರಿಗೆ ರಂಗಭೂಮಿ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
26 ವರ್ಷಗಳಿಂದ ಸಂಗೀತ ಶಿಕ್ಷಕ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿಕೊಂಡಿರುವ ತಿಪ್ಪೇಸ್ವಾಮಿ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ, ಜನಪದ ಸಂಗೀತ, ಸುಗಮ ಸಂಗೀತ ಹಾಗೂ ವಚನ ಗಾಯನದ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ರಾಜ್ಯಮಟ್ಟದ ಹಂಪಿ ಉತ್ಸವ, ದುರ್ಗೋತ್ಸವ, 75ನೇ ವಿಶ್ವ ಕನ್ನಡ ಸಮ್ಮೇಳನ ಮುಂತಾದ ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉಪನ್ಯಾಸ ಕಾರ್ಯಕ್ರಮ, ಗಡಿನಾಡ ಜಾಗೃತಿ ಸಮಾವೇಶ, ಸಂಗೀತೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಪರಿಣತಿ ಹೊಂದಿರುವ ಇವರು, ಏಕನಾಥೇಶ್ವರಿ ಸಂಗೀತ ವಿದ್ಯಾಲಯದಲ್ಲಿ ಸಂಗೀತ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಪುರಸ್ಕೃತರ ಪಟ್ಟಿ
ಇವರ ತಂದೆ ರಾಜಣ್ಣ ಪ್ರಸಿದ್ಧ ಸಂಗೀತ ಹಾಗೂ ರಂಗ ಕಲಾವಿದರು. ತಾಯಿ ನಿಂಗಮ್ಮ ಜಾನಪದ ಕಲಾವಿದೆ. ಮಾಜಿ ಕರ್ನಾಟಕ ಸಂಗೀತ ಅಕಾಡೆಮಿ ಸದಸ್ಯರಾದ ಎಚ್.ಎನ್. ನಾರಾಯಣಪ್ಪ ಇವರ ಸಂಗೀತ ಗುರುಗಳಾಗಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದಕ್ಕೆ ಜಿಲ್ಲೆಯ ಜನರು ಶುಭ ಕೋರಿದ್ದಾರೆ. ಇದೇ ನವೆಂಬರ್ 7ರಂದು ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.