ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪರಿಚಯ
Recommended Video
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ. ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರ ಒಡಲಿನಲ್ಲಿ ಹೊಂದಿದೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುವ ಕರ್ನಾಟಕದ ಜಿಲ್ಲೆಗಳಲ್ಲಿ ಶಿವಮೊಗ್ಗವೂ ಒಂದು. ವಿಶ್ವವಿಖ್ಯಾತ ಜೋಗ ಜಲಪಾತ ಜಿಲ್ಲೆಯ ಹೆಗ್ಗಳಿಕೆ.
ಶಿವಮೊಗ್ಗ ರಾಜ್ಯ ರಾಜಕಾರಣಕ್ಕೆ ಹಲವು ಕೊಡುಗೆಗಳನ್ನು ನೀಡಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆ ಇದು. ಪ್ರತಿ ಬಾರಿ ಲೋಕಸಭಾ, ವಿಧಾನಸಭಾ ಚುನಾವಣೆ ಎದುರಾದಾಗ ಜಿಲ್ಲೆ ರಾಜ್ಯದ ಗಮನ ಸೆಳೆಯುತ್ತದೆ.
ಕಾಂಗ್ರೆಸ್ ಅಧಿಪತ್ಯವಿರುವ ಕಲಬುರಗಿ ಲೋಕಸಭಾ ಕ್ಷೇತ್ರದ ಪರಿಚಯ
2009, 2014, 2018ರ ಉಪ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರು ಸಂಸದರಾಗಿ ಆಯ್ಕೆಯಾಗುತ್ತಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು 3,63,305 ಮತಗಳ ಭಾರೀ ಅಂತರದಲ್ಲಿ ಕಾಂಗ್ರೆಸ್ನ ಮಂಜುನಾಥ ಭಂಡಾರಿ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದರು. ಮಂಜುನಾಥ ಭಂಡಾರಿ ಅವರು 2,42,911 ಮತಗಳನ್ನು ಮಾತ್ರ ಪಡೆದಿದ್ದರು.
2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಯಡಿಯೂರಪ್ಪ ಅವರು ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2018ರ ನವೆಂಬರ್ 3ರಂದು ನಡೆದ ಉಪ ಚುನಾವಣೆಯಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರು ಜಯಗಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸ್ಥೂಲ ಪರಿಚಯ
ಯಡಿಯೂರಪ್ಪ ಅವರು ಶಿವಮೊಗ್ಗದ ಸಂಸದರಾಗಿದ್ದಾಗ ಕೇಂದ್ರ ಸರ್ಕಾರ ಕ್ಷೇತ್ರಕ್ಕೆ 17.5 ಕೋಟಿ ರೂ. ಅನುದಾನವನ್ನು ನೀಡಿತ್ತು. ಜಿಲ್ಲಾಡಳಿತ 15.7 ಕೋಟಿ ಅನುದಾನ ಬಿಡುಗಡೆ ಮಾಡಿದೆ. 14.47 ಕೋಟಿ ಅನುದಾನವನ್ನು ವಿವಿಧ ಯೋಜನೆಗಳಿಗೆ ಖರ್ಚು ಮಾಡಲಾಗಿದೆ.
ಯಡಿಯೂರಪ್ಪ ಅವರು ಸಂಸತ್ತಿನಲ್ಲಿ ನಡೆದ 14 ಚರ್ಚೆಗಳಲ್ಲಿ ಪಾಲ್ಗೊಂಡಿದ್ದಾರೆ. ಸಂಸತ್ತಿನಲ್ಲಿ ಶೇ 69ರಷ್ಟು ಹಾಜರಾತಿ ಇತ್ತು. ತಮ್ಮ ಲೋಕಸಭಾ ಅವಧಿ ಮುಗಿಯುವ ಮೊದಲೇ ಅವರು ರಾಜೀನಾಮೆ ನೀಡಿದ್ದು, ಉಪ ಚುನಾವಣೆ ನಡೆಯಿತು.
ಎಂಟು ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ 16,45.059 ಮತದಾರರು ಕ್ಷೇತ್ರದಲ್ಲಿದ್ದಾರೆ. 8,27,111 ಮಹಿಳೆಯರು, 8,17,948 ಪುರುಷ ಮತದಾರರಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಸಾಗರ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರಗಳಿವೆ.
ಭದ್ರಾವತಿ ಹೊರತುಪಡಿಸಿ ಬೇರೆ ಯಾವುದೇ ಕ್ಷೇತ್ರದಲ್ಲಿ ಬಿಜೆಪಿ ಬಿಟ್ಟು ಬೇರೆ ಯಾವುದೇ ಪಕ್ಷದ ಶಾಸಕರು ಆಯ್ಕೆಯಾಗಿಲ್ಲ.
2018ರಲ್ಲಿ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು 52,148 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕ್ಷೇತ್ರದ ಸಮಸ್ಯೆಗಳು : ಸಾಗರ ಕ್ಷೇತ್ರದ ತುಮರಿ ಸೇತುವೆ ವಿವಾದ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದೆ. ನಿತಿನ್ ಗಡ್ಕರಿ ಅವರು ಯಡಿಯೂರಪ್ಪ ಸಂಸದರಾಗಿದ್ದಾರೆ ಯೋಜನೆಗೆ ಶಂಕುಸ್ಥಾಪನೆ ಮಾಡಿದರು. ಆದರೆ, ಕಾಮಗಾರಿ ಇನ್ನೂ ಆರಂಭವಾಗಿಲ್ಲ.
ಭದ್ರಾವತಿಯಲ್ಲಿ ವಿಎಸ್ಐಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನಶ್ಚೇತನ ಕೇವಲ ಚುನಾವಣಾ ಭರವಸೆಯಾಗಿ ಉಳಿದಿದೆ. ನೂರಾರು ಕಾರ್ಮಿಕರಿಗೆ ಧೈರ್ಯ ತುಂಬುವಂತಹ ಯಾವುದೇ ಕೆಲಸಗಳು ಆಗುತ್ತಿಲ್ಲ.
ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ಭಾಗದಲ್ಲಿ ಬಗರ್ ಹುಕ್ಕುಂ ಸಮಸ್ಯೆ ಇದೆ. ಕಾಡನ್ನು ಕಡಿದು ಮನೆ ಮಾಡಿಕೊಂಡ, ಜಮೀನು ಮಾಡಿದ ಲಕ್ಷಾಂತರ ಜನರು ಇನ್ನೂ ಸರಿಯಾದ ದಾಖಲಾತಿಗಳು ತಮ್ಮ ಹೆಸರಿಗೆ ಸಿಕ್ಕಿಲ್ಲ ಎಂದು ಪರದಾಡುತ್ತಿದ್ದಾರೆ.
ಅರಣ್ಯ ಇಲಾಖೆ ಒತ್ತುವರಿಯನ್ನು ತೆರವುಗೊಳಿಸಲಿದೆ ಎಂಬ ಆತಂಕ ತೀರ್ಥಹಳ್ಳಿ, ಸಾಗರ, ಹೊಸನಗರ ಭಾಗದ ಜನರಲ್ಲಿ ಇದೆ. ಜನಪ್ರತಿನಿಧಿಗಳು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಜನರಿಗೆ ಅಭಯವನ್ನು ನೀಡುವಂತಹ ಕಾರ್ಯ ಇನ್ನೂ ನಡೆದಿಲ್ಲ.
ಸೊರಬ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ರಸ್ತೆ, ಕುಡಿಯುವ ನೀರು, ಸಾರಿಗೆ ಸಮಸ್ಯೆಗಳು ಪ್ರಮುಖವಾದವು. ತಾಲೂಕಿಗೆ ಪೂರ್ಣಮಟ್ಟದ ಕುಡಿಯುವ ನೀರಿನ ಯೋಜನೆ ಇನ್ನೂ ಜಾರಿಯಾಗಿಲ್ಲ.
ಶಿವಮೊಗ್ಗ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರ ಆಯ್ಕೆಯಾಗಿದ್ದು, ಇನ್ನೂ ಅಭಿವೃದ್ಧಿಯಾಗಬೇಕಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶಿವವೊಗ್ಗ ವಿಮಾನ ನಿಲ್ದಾಣದ ಯೋಜನೆ ರೂಪಿಸಲಾಯಿತು. ಆದರೆ, ಯೋಜನೆ ಇನ್ನೂ ಪೂರ್ಣಗೊಂಡಿಲ್ಲ.
ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಪ್ರವಾಸಿ ಸ್ಥಳಗಳಿವೆ. ಅವುಗಳನ್ನು ಅಭಿವೃದ್ಧಿಗೊಳಿಸಿ ಪ್ರವಾಸೋದ್ಯಮವನ್ನು ಲಾಭದಾಯಕವಾಗಿ ಮಾಡುವ ಪ್ರಯತ್ನಗಳು ತೃಪ್ತಿದಾಯಕವಾಗಿ ನಡೆದಿಲ್ಲ. ಶಿವಮೊಗ್ಗ-ಹರಿಹರ ರೈಲು ಮಾರ್ಗದ ಸಮೀಕ್ಷೆಗೆ ಒಪ್ಪಿಗೆ ಸಿಕ್ಕಿದೆ, ಯೋಜನೆಗೆ ಯಾವಾಗ ಒಪ್ಪಿಗೆ ಸಿಗಲಿದೆ? ಕಾದು ನೋಡಬೇಕು.