Get Updates
Get notified of breaking news, exclusive insights, and must-see stories!

ತ್ರಿವಿಧ ದಾಸೋಹಿ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ನಮನ: ಇಲ್ಲಿದೆ ಶ್ರೀಗಳ ಪೂರ್ವಾಶ್ರಮದ ಸಂಗತಿ

ಈ ಭೂಮಿ ಮೇಲೆ ಬಹಳಷ್ಟು ಪುಣ್ಯ ಪುರುಷರು ಜನ್ಮವೆತ್ತಿ ತಮ್ಮ ಜೀವಿತಾವಧಿಯವರೆಗೆ ಮಾನವ ಸಂಕುಲಕ್ಕೆ ಒಳಿತನ್ನೇ ಮಾಡಿ ಸ್ವರ್ಗಸ್ಥರಾಗಿದ್ದಾರೆ. ಅವರು ದೈಹಿಕವಾಗಿ ನಮ್ಮೊಡನೆ ಇಲ್ಲದಿದ್ದರೂ ಅವರು ಮಾಡಿದ ಸೇವಾ ಕಾರ್ಯಗಳು ಇವತ್ತಿಗೂ ನಮ್ಮೊಂದಿಗಿವೆ. ಇಂತಹ ಮಹಾಯೋಗಿಗಳ ನಡುವೆ ಪುಣ್ಯ ಪುರುಷ ಡಾ. ಶಿವಕುಮಾರ ಸ್ವಾಮೀಜಿ ಒಬ್ಬರಾಗಿದ್ದಾರೆ.

ಯಾರು ಬೇಕಾದರೂ ಯೋಗಿಗಳಾಗಬಹುದು ಆದರೆ ಮಹಾಯೋಗಿಗಳಾಗುವುದು ಕಷ್ಟವೇ.. ಅದು ಸಿದ್ದಿಸಬೇಕಾದರೆ ಕಠಿಣ ಪರಿಶ್ರಮ ಬೇಕಾಗುತ್ತದೆ. ಅದನ್ನು ಮಾಡಿ ತೋರಿಸಿ ನಮ್ಮೊಡನೆ ಅಮರರಾಗಿ ಉಳಿದವರು ಡಾ. ಶಿವಕುಮಾರ ಸ್ವಾಮೀಜಿ. ಇವರ ಜನ್ಮದಿನವನ್ನು ಏಪ್ರಿಲ್‌ 01ರಂದು ದಾಸೋಹದಿನವನ್ನಾಗಿ ಆಚರಿಸಲಾಗುತ್ತಿದೆ.

Siddaganga Shivakumara Swamiji Birth Anniversary

1907ರ ಏಪ್ರಿಲ್ 1ರಂದು ಜನಿಸಿದ ಅವರು 2019 ಜನವರಿ 21ರಂದು ಸ್ವರ್ಗಸ್ಥರಾದರು. ಸುಮಾರು 111 ವರ್ಷಗಳ ಕಾಲ ಬದುಕಿ ಬಾಳಿದ ಅವರು ತ್ರಿದಾಸೋಹದ ಮೂಲಕ ಮನುಕುಲಕ್ಕೆ ಒಳಿತನ್ನು ಮಾಡಿದವರು. ಮತ್ತು ಆ ಮೂಲಕವೇ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡವರಾಗಿದ್ದಾರೆ. ಇನ್ನು ಅವರ ಪೂರ್ವಾಶ್ರಮ ಮತ್ತು ಧೀಕ್ಷೆ ಪಡೆದ ಬಳಿಕದ ಬಗ್ಗೆ ತಿಳಿಯುತ್ತಾ ಹೋದರೆ ಅವರನ್ನೇಕೆ ಮಹಾಯೋಗಿ, ತ್ರಿವಿಧದಾಸೋಹಿ ಎಂದು ಕರೆಯುತ್ತಾರೆ ಎಂಬುದಕ್ಕೆ ಉತ್ತರಗಳು ಸಿಕ್ಕಿ ಬಿಡುತ್ತವೆ.

ಸಿದ್ಧಗಂಗಾಶ್ರೀಗಳ ಪೂರ್ವಾಶ್ರಮದ ಹೆಸರು ಶಿವಣ್ಣ

ಪೂರ್ವಾಶ್ರಮದ ಬಗ್ಗೆ ಹೇಳುವುದಾದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲೂರು ಹೋಬಳಿಯ ವೀರಾಪುರದ ಸುಸಂಸ್ಕೃತ ಮನೆತನದ ಹೊನ್ನೇಗೌಡ ಮತ್ತು ಗಂಗಮ್ಮ ದಂಪತಿಗಳ ಹದಿಮೂರು ಮಂದಿ ಮಕ್ಕಳಲ್ಲಿ ಕಿರಿಯವರಾಗಿ ಜನಿಸಿದವರು ಡಾ.ಶಿವಕುಮಾರಸ್ವಾಮೀಜಿ. ಇವರ ಹುಟ್ಟು ಹೆಸರು ಶಿವಣ್ಣ.

ಹುಟ್ಟುವಾಗಲೇ ಏನೋ ಒಂದು ತೇಜಸ್ಸು ಹೊಂದಿದ ಇವರು ಮುಂದೆ ಈ ಭರತಭೂಮಿಯಲ್ಲಿ ಶಾಶ್ವತವಾಗಿ ನೆಲೆಯೂರುವಂತಹ ಮಹಾನ್ ವ್ಯಕ್ತಿಯಾಗಿ ನೆಲೆಯೂರುತ್ತಾರೆ ಎಂದು ಯಾರೂ ಭಾವಿಸಿರಲಿಲ್ಲ. ಆದರೆ ಅವರಲ್ಲಿದ್ದ ದೈವತ್ವ ಅವರಿಂದ ಹತ್ತಾರು ಪುಣ್ಯ ಕಾರ್ಯಗಳನ್ನು ಮಾಡುವಂತೆ ಮಾಡಿತ್ತಲ್ಲದೆ, ಇವತ್ತು ಮಹಾ ಯೋಗಿಯಾಗಿ ನಡೆದಾಡುವ ದೇವರಾಗಿ, ಅನ್ನ, ಜ್ಞಾನ ದಾಸೋಹದ ಸ್ವರ್ಗವಾಗಿರುವ ಸಿದ್ಧಗಂಗ ಮಠದ ಮಠಾಧೀಶರಾಗಿ ಕಾರ್ಯನಿರ್ವಹಿಸುತ್ತಾ ಅವರು ಮಾಡಿರುವ ಸಾಧನೆಗಳು ಇಡೀ ಜಗತ್ತೇ ನೆನಪಿಸಿಕೊಳ್ಳುತ್ತಿದೆ.

ಆಶ್ರಯ ನೀಡಿದ ಉದ್ಧಾನ ಶಿವಯೋಗಿಗಳು

ಅಂದಿನ ಶಿವಣ್ಣ ಬಳಿಕ ಡಾ.ಶಿವಕುಮಾರಸ್ವಾಮಿಯಾಗಿ ಬೆಳೆದಿದ್ದರ ಹಿಂದೆ ಒಂದು ತಿರುವಿದೆ. ಇವರು ತುಮಕೂರಿನಲ್ಲಿ ಹೈಸ್ಕೂಲ್ ವ್ಯಾಸಂಗ ಮಾಡುತ್ತಿದ್ದಾಗ ಅಲ್ಲಿ ಭಯಂಕರ ಪ್ಲೇಗ್ ರೋಗ ಬಂದು ಜನರು ಜೀವಭಯದಿಂದ ತತ್ತರಿಸುವಂತೆ ಮಾಡಿತ್ತು. ಇಂತಹ ಸಂದರ್ಭದಲ್ಲಿ ಓದುವುದಾದರೂ ಹೇಗೆಂಬ ಆತಂಕ ಕಾಡತೊಡಗಿತು. ಓದಿನಲ್ಲಿ ವಿಪರೀತ ಆಸಕ್ತಿ ಇದ್ದ ಅವರು ಓದನ್ನು ಅರ್ಧಕ್ಕೆ ನಿಲ್ಲಿಸದೆ ಹೇಗಾದರೂ ಮಾಡಿ ಮುಂದೆ ಓದಬೇಕೆಂದು ಆಲೋಚಿಸ ತೊಡಗಿದರು.

ಅದಕ್ಕಾಗಿ ತಮಗೆ ತೋಚಿದ ಮಾರ್ಗದಲ್ಲಿ ಹುಡುಕಾಟ ನಡೆಸಿದರು. ಆಗ ಅವರ ಕಣ್ಣಮುಂದೆ ಬಂದಿದ್ದು ಶ್ರೀ ಸಿದ್ಧಗಂಗ ಮಠ. ಅಲ್ಲಿಗೆ ತೆರಳಿದ ಅವರು ಆಗಿನ ಮಠಾಧೀಶರಾಗಿದ್ದ ಶ್ರೀ ಉದ್ಧಾನ ಶಿವಯೋಗಿಗಳಲ್ಲಿ ತನ್ನ ಸಂಕಷ್ಟವನ್ನು ಹೇಳಿಕೊಂಡು ಆಶ್ರಯ ಕೋರಿದರು. ಬಾಲಕನಲ್ಲಿದ್ದ ಜ್ಞಾನದಾಹವನ್ನು ಹತ್ತಿರದಿಂದ ನೋಡಿದ ಉದ್ಧಾನ ಶಿವಯೋಗಿಗಳು ಈ ಬಾಲಕನಲ್ಲಿ ಏನೋ ಒಂದು ಶಕ್ತಿಯಿದೆ ಎಂಬುದನ್ನು ಅರಿತುಕೊಂಡರಲ್ಲದೆ, ಈತನಿಗೆ ಆಶ್ರಯ ನೀಡಿದರೆ ಮುಂದೆ ಈತ ಮಹಾಯೋಗಿಯಾಗುವುದರಲ್ಲಿ ಸಂಶಯವಿಲ್ಲ ಎಂಬುದು ಗೊತ್ತಾಗಿ ಅವರು ಆಶ್ರಯ ನೀಡಿದರು.

Siddaganga Shivakumara Swamiji Birth Anniversary

1930ರಲ್ಲಿ ಕಿರಿಯ ಶ್ರೀಗಳಾಗಿ ನೇಮಕ

ಸಿದ್ಧಗಂಗಾ ಮಠದಲ್ಲಿದ್ದುಕೊಂಡೇ ಹೈಸ್ಕೂಲ್ ವ್ಯಾಸಂಗ ಮುಗಿಸಿದ ಶಿವಕುಮಾರ ಸ್ವಾಮೀಜಿ ಅವರು ಆಗಲೇ ಆಧ್ಯಾತ್ಮ ಹಾಗೂ ಸಮಾಜಸೇವೆಯ ಬಗ್ಗೆ ವಿಶೇಷ ಆಸಕ್ತಿ ಬೆಳೆಸಿಕೊಂಡಿದ್ದರು. ಅವರಲ್ಲಿನ ಈ ಆದರ್ಶಗುಣ ಉದ್ಧಾನ ಶಿವಯೋಗಿಗಳಲ್ಲಿ ಇವರ ಬಗ್ಗೆ ಇನ್ನಷ್ಟು ಹೆಚ್ಚಿನ ಪ್ರೀತಿ ಮೂಡಲು ಕಾರಣವಾಗಿತ್ತು. ಈ ಅಭಿಮಾನದ ಪ್ರೀತಿಯಿಂದಲೇ ಶಿವಕುಮಾರ ಸ್ವಾಮೀಜಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ. ಆನರ್ಸ್ ಪದವಿ ಪಡೆಯುತ್ತಿದ್ದಂತೆಯೇ 1930ರ ಮಾರ್ಚ್ 3 ರಂದು ಉದ್ಧಾನ ಶ್ರೀಗಳು ಇವರನ್ನು ಸಿದ್ಧಗಂಗಾ ಮಠದ ಕಿರಿಯ ಶ್ರೀಗಳನ್ನಾಗಿ ನೇಮಿಸಿದರು.

ನಂತರದ ದಿನಗಳಲ್ಲಿ ಉದ್ದಾನ ಶಿವಯೋಗಿಗಳು ಕಾಲವಾದ ನಂತರ 1941 ರಲ್ಲಿ ಶಿವಕುಮಾರ ಸ್ವಾಮೀಜಿ ಸಿದ್ಧಗಂಗಾ ಮಠದ ಪೀಠವನ್ನೇರಿದರು. ಮುಂದೆ ಶ್ರೀ ಮಠದ ಅಭಿವೃದ್ಧಿಗಾಗಿ ಕಾಲಿಗೆ ಚಕ್ರ ಕಟ್ಟಕೊಂಡವರಂತೆ ಊರೂರು ಅಲೆದು ಸಾತ್ವಿಕ ಮನಸ್ಸಿನಿಂದ ಬೊಗಸೆಯೊಡ್ಡಿ ಬೇಡಿ ಮಠವನ್ನು ಮಹಾನ್ ಮಠವಾಗಿ ಬೆಳೆಸಿದರು. ತ್ರಿವಿಧ ದಾಸೋಹದ ಮೂಲಕ ಎಲ್ಲರೂ ಇತ್ತ ತಿರುಗಿ ನೋಡುವಂತೆ ಮಾಡಿದರು.

ಮಠವನ್ನು ಜಗದೆತ್ತರಕ್ಕೆ ಕೊಂಡೊಯ್ದ ಶ್ರೀಗಳು

ಶ್ರೀ ಸಿದ್ಧಗಂಗಾ ಮಠಾಧೀಶರಾದ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಅವರು ಅನ್ನ, ಆಶ್ರಯ, ಅಕ್ಷರ ಈ ಮೂರನ್ನೂ ದೀನದಲಿತರಿಗೆ, ಬಡಬಗ್ಗರಿಗೆ, ಅಸಹಾಯಕರಿಗೆ ಧಾರೆಯೆರೆಯುತ್ತಾ ತ್ರಿವಿಧ ದಾಸೋಹದಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದರು. ಮಠದಲ್ಲಿ. ಜ್ಞಾನ ಪಡೆದು ಹೊರಗೆ ಹೋಗಿ ಬದುಕು ಕಟ್ಟಿಕೊಂಡವರಲ್ಲಿ ಎಲ್ಲ ಜಾತಿ, ಧರ್ಮದವರು ಇದ್ದಾರೆ.

ಸಿದ್ದಗಂಗಾಶ್ರೀಗಳು ಯಾವುದೋ ಒಂದು ಜನಾಂಗಕ್ಕೆ, ಜಾತಿಗೆ ಮಾತ್ರ ಸೀಮಿತವಾಗದೆ ಜಾತಿ, ಮತ, ಪಂಥ, ಧರ್ಮಗಳ ಭೇದಭಾವ ಮಾಡದೆ ಎಲ್ಲರನ್ನೂ ಸಮಾನವಾಗಿ ನೋಡುತ್ತಾ ಮಹಾಮಾನವತಾವಾದಿಯಾಗಿದ್ದಾರೆ. ಮಹಾಜ್ಞಾನಿಗಳೂ, ಮಹಾಯೋಗಿಗಳೂ ಆಗಿರುವ ಇವರು ಕ್ರಿಸ್ತ, ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ, ಪೈಗಂಬರ್, ಪ್ಲೇಟೋ, ಅರಿಸ್ಟಾಟಲ್, ರಾಮಕೃಷ್ಣ ಪರಮಹಂಸ, ವಿವೇಕಾನಂದ, ಮಹಾವೀರ ಮುಂತಾದ ವಿಶ್ವದ ನೂರಾರು ಚಿಂತಕರ ವಿಚಾರಧಾರೆಯನ್ನು ತಮ್ಮಲ್ಲಿ ಅಳವಡಿಸಿಕೊಂಡು ಶ್ರೀ ಸಿದ್ಧಗಂಗಾ ಮಠವನ್ನು ಜಗದೆತ್ತರಕ್ಕೆ ಕೊಂಡೊಯ್ದಿದ್ದಾರೆ.

ಅವತ್ತು ಹಚ್ಚಿದ ಒಲೆ ಉರಿಯುತ್ತಲೇ ಇದೆ

ಇವತ್ತಿಗೂ ಅನ್ನಕ್ಕಾಗಿ ಸಿದ್ಧಗಂಗೆಯಲ್ಲಿ ಇವರು ಹಚ್ಚಿದ ಒಲೆ ಉರಿಯುತ್ತಲೇ ಇದೆ. ಆಶ್ರಯಕ್ಕಾಗಿ ಇವರು ಅಡಿಗಲ್ಲಿಟ್ಟ ತಾಣ ಸೇವಾಸೌಧವಾಗಿ ಬೆಳೆಯುತ್ತಲೇ ಇರುವುದನ್ನು ನಾವು ಕಾಣಬಹುದಾಗಿದೆ. ಇಷ್ಟೇ ಅಲ್ಲದೆ ಇವರು ವಿದ್ಯಾರ್ಥಿಗಳು ಜ್ಞಾನ ಪಡೆಯಲೆಂದು ಉರಿಸಿದ ಜ್ಞಾನದ ದೀಪ ಬೃಹದಾಕಾರವಾಗಿ ಬೆಳೆದಿದ್ದು, ಇಲ್ಲಿಂದ ಜ್ಞಾನ ಪಡೆದೆವರು ದೇಶ ಮಾತ್ರವಲ್ಲದೆ, ವಿಶ್ವದೇಗುಲಕ್ಕೆ ಜ್ಞಾನವನ್ನು ಬೆಳಗುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+