Yathindra Siddaramaiah profile; ಡಾ. ಯತೀಂದ್ರ ಸಿದ್ದರಾಮಯ್ಯ : ರಾಜಕೀಯ ಆರಂಭಿಸಿದ ಡಾಕ್ಟರ್!
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಾಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ವೈದ್ಯರಾಗಿರುವ ಡಾ. ಯತೀಂದ್ರ ಸಿದ್ದರಾಮಯ್ಯ ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ ಮತ್ತು ಅನಿವಾರ್ಯವಾಗಿ.
ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರಿನ ವರುಣ ಕ್ಷೇತ್ರದ ಕಾಂಗ್ರೆಸ್ ಶಾಸಕ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಾಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ. ವೈದ್ಯರಾಗಿರುವ ಯತೀಂದ್ರ ಸಿದ್ದರಾಮಯ್ಯ ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ ಮತ್ತು ಅನಿವಾರ್ಯವಾಗಿ. ಈ ಬಾರಿಯ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಹಾಕಿರುವ ನಾಯಕ ಇವರೊಬ್ಬರೇ.
27/6/1980ರಂದು ಜನಿಸಿದ ಯತೀಂದ್ರ ಸಿದ್ದರಾಮಯ್ಯ ಎಂಬಿಬಿಎಸ್, ಎಂಡಿ ಪದವಿ ಪಡೆದಿದ್ದಾರೆ. ರಾಜಕೀಯದಲ್ಲಿ ಸಿದ್ದರಾಮಯ್ಯರ ಎರಡನೇ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯಗೆ ಆಸಕ್ತಿಯೇ ಇರಲಿಲ್ಲ. ಆದರೆ ರಾಜಕೀಯಕ್ಕೆ ಬಂದಿದ್ದು ಅನಿವಾರ್ಯವಾಗಿ. ರಾಕೇಶ್ ಸಿದ್ದರಾಮಯ್ಯ ಅಕಾಲಿಕ ಸಾವಿನ ಬಳಿಕ ಸಿದ್ದರಾಮಯ್ಯ ಉತ್ತರಾಧಿಕಾರಿ ಯಾರು? ಎಂಬ ಪ್ರಶ್ನೆ ಎದ್ದಿತು. ಅದಕ್ಕೆ ಉತ್ತರ ಯತೀಂದ್ರ ಸಿದ್ದರಾಮಯ್ಯ.

ರಾಕೇಶ್ ಸಿದ್ದರಾಮಯ್ಯಗೆ ರಾಜಕೀಯದಲ್ಲಿ ಆಸಕ್ತಿ ಇತ್ತು. ತಂದೆಯ ಅನುಪಸ್ಥಿತಿಯಲ್ಲಿ ವರುಣ ಕ್ಷೇತ್ರದಲ್ಲಿನ ಕಾರ್ಯಗಳನ್ನು ಅವರೇ ನೋಡಿಕೊಳ್ಳುತ್ತಿದ್ದರು. ಸಿದ್ದರಾಮಯ್ಯಗೆ ಅವರೇ ಉತ್ತರಾಧಿಕಾರಿ ಎಂಬ ಮಾತು ಇತ್ತು. 2013ರ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಗೆದ್ದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆಗ ಅವರ ಕ್ಷೇತ್ರದ ಕೆಲಸಗಳನ್ನು ರಾಕೇಶ್ ಸಿದ್ದರಾಮಯ್ಯ ನೋಡಿಕೊಳ್ಳುತ್ತಿದ್ದರು.
ಡಾ. ಯತೀಂದ್ರ ಸಿದ್ದರಾಮಯ್ಯ 2016ರ ಜುಲೈನಲ್ಲಿ ರಾಕೇಶ್ ಸಿದ್ದರಾಮಯ್ಯರ ಅಕಾಲಿಕ ಸಾವಿನ ಬಳಿಕ ರಾಜಕೀಯಕ್ಕೆ ಬಂದರು. ಕ್ಷೇತ್ರದ ಕೆಲಸಗಳನ್ನು ನೋಡಿಕೊಳ್ಳಲು ಆರಂಭಿಸಿದರು. 2018 ವಿಧಾನಸಭೆ ಚುನಾವಣೆ ಎದುರಾದಾಗ ಸಿದ್ದರಾಮಯ್ಯ ಡಾ. ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಮತ್ತು ಬಾದಾಮಿಯಲ್ಲಿ ಕಣಕ್ಕಿಳಿದರು. ಡಾ. ಯತೀಂದ್ರ ಸಿದ್ದರಾಮಯ್ಯ ವರುಣದ ಕಾಂಗ್ರೆಸ್ ಅಭ್ಯರ್ಥಿಯಾದರು. ಮೊದಲ ಚುನಾವಣೆಯಲ್ಲಿಯೇ ಗೆದ್ದು ವಿಧಾನಸಭೆ ಪ್ರವೇಶ ಮಾಡಿದರು.

ಈ ಬಾರಿಯ ಚುನಾವಣೆಯಲ್ಲಿ ವರುಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿವಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರಜಾಧ್ವನಿ ಯಾತ್ರೆ ಮಾಡುವಾಗಲೇ ವರುಣದಿಂದ ಯತೀಂದ್ರ ಒಬ್ಬರು ಮಾತ್ರ ಕ್ಷೇತ್ರದಿಂದ ಟಿಕೆಟ್ಗೆ ಅರ್ಜಿ ಹಾಕಿದ್ದಾರೆ ಎಂದು ಹೇಳಿದ್ದಾರೆ. ಆ ಮೂಲಕ ಅವರೇ ಅಭ್ಯರ್ಥಿ ಎಂದು ಸುಳಿವು ನೀಡಿದ್ದಾರೆ. ಆದರೆ ಕೋಲಾರದಿಂದ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿರುವ ಸಿದ್ದರಾಮಯ್ಯ ಕೊನೆ ಕ್ಷಣದಲ್ಲಿ ವರುಣಕ್ಕೆ ಬರಲಿದ್ದಾರೆಯೇ? ಕಾದು ನೋಡಬೇಕು.
ಡಾ. ಯತೀಂದ್ರ ಸಿದ್ದರಾಮಯ್ಯ ಜನರ ಜೊತೆ ಆತ್ಮೀಯವಾಗಿ ಬೆರೆಯುತ್ತಾರೆ. ಕ್ಷೇತ್ರದ ಜನರ ಸಮಸ್ಯೆ ಆಲಿಸುತ್ತಾರೆ. ವಿಧಾನಸಭೆಯಲ್ಲಿಯೂ ಚೆನ್ನಾಗಿ ಮಾತನಾಡಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಮೆಚ್ಚುಗೆಯನ್ನು ಸಹ ಪಡೆದಿದ್ದಾರೆ. ಅನಿವಾರ್ಯವಾಗಿ ರಾಜಕೀಯಕ್ಕೆ ಬಂದರೂ ಬಹುಬೇಗನೆ ಅದಕ್ಕೆ ಹೊಂದಿಕೊಂಡಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ರಾಜಕೀಯವನ್ನು ಕರಗತ ಮಾಡಿಕೊಂಡಿರುವ ತಂದೆ ಸಿದ್ದರಾಮಯ್ಯರ ಮಾರ್ಗದರ್ಶನ ನಿರಂತರವಾಗಿ ಸಿಗುತ್ತಿದೆ.
ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾರೀ ಹಿಡಿತ ಹೊಂದಿದ್ದಾರೆ. 2008, 2013ರಲ್ಲಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ. 2013ರಲ್ಲಿ ಗೆದ್ದ ಬಳಿಕ ಅವರು ಮುಖ್ಯಮಂತ್ರಿಯಾದರು. 2018ರ ಚುನಾವಣೆಯಲ್ಲಿ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯಗೆ ಕ್ಷೇತ್ರ ಬಿಟ್ಟುಕೊಟ್ಟರು. ಮೊದಲ ಚುನಾವಣೆಯಲ್ಲಿಯೇ ಯತೀಂದ್ರ 96,435 ಮತಗಳನ್ನು ಪಡೆದು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮೊದಲ ಬಾರಿಗೆ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯರನ್ನು ವಿಧಾನಸಭೆಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಮತ್ತೊಂದು ಕಡೆ ಕಾಂಗ್ರೆಸ್ ಪಕ್ಷ ಅವರನ್ನು ಮೈಸೂರು ವಿಭಾಗದ ಕೆಪಿಸಿಸಿ ಪ್ರಚಾರ ಸಮಿತಿಗೆ ನೇಮಕ ಮಾಡಿದೆ.
ಡಾ. ಯತೀಂದ್ರ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ.
DrYathindraSiddaramaiahOfficial ಫೇಸ್ಬುಕ್ ಪುಟ ಮತ್ತು https://twitter.com/Dr_Yathindra_S ಟ್ವಿಟರ್ ಖಾತೆ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸಕ್ರಿಯರಾಗಿದ್ದಾರೆ.












Click it and Unblock the Notifications