ವರ್ಷದ ವಿಶೇಷ : 2017ರ ಪ್ರಮುಖ ರಾಜಕೀಯ ಬೆಳವಣಿಗೆಗಳು
ಬೆಂಗಳೂರು, ಡಿಸೆಂಬರ್ 25 : 2017 ಮುಗಿಯುತ್ತಾ ಬಂದಿದೆ, ಮುಂದಿನ ವರ್ಷ ಕರ್ನಾಟಕಕ್ಕೆ ಚುನಾವಣೆಯ ಹರ್ಷ. ರಾಜ್ಯದಲ್ಲಿ ಹಲವಾರು ರಾಜಕೀಯ ಬದಲಾವಣೆಗಳು ಆಗುತ್ತಿವೆ. ಚುನಾವಣೆ ಎದುರಾಗುತ್ತಿರುವುದರಿಂದ ಹಲವು ಬದಲಾವಣೆಳು ಆಗುವ ನಿರೀಕ್ಷೆಯೂ ಇದೆ.
ಈ ವರ್ಷ ಕರ್ನಾಟಕ ಹಲವಾರು ರಾಜಕೀಯ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ಹಲವು ನಾಯಕರು ಪಕ್ಷ ಬದಲಾವಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಹೊಸ ಸಚಿವರ ಆಗಮನವಾಗಿದೆ. ಕೆಲವು ನಾಯಕರು ಅಕಾಲಿಕವಾಗಿ ಮರಣ ಹೊಂದಿದ್ದಾರೆ.
ವರ್ಷಾಂತ್ಯಕ್ಕೆ ಕರ್ನಾಟಕದ 5 ವಿಶಿಷ್ಟ ಪ್ರವಾಸಿ ತಾಣಗಳು
ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. 2018ರ ವಿಧಾನಸಭೆ ಚುನಾವಣೆಗೆ ಪಕ್ಷಗಳು ತಯಾರಿ ಆರಂಭಿಸಿವೆ. ನೂತನ ವರ್ಷದ ಆರು ತಿಂಗಳ ಕಾಲ ಪಕ್ಷಗಳ ವಿವಿಧ ನಾಯಕರು ಚುನಾವಣೆ, ಫಲಿತಾಂಶ ಎಂದೂ ಬ್ಯುಸಿಯಾಗಲಿದ್ದಾರೆ.
ಹೊಸ ವರ್ಷಕ್ಕೆ ನಿಮ್ಮ ಸಂಕಲ್ಪವೇನು? ನಮ್ಮ 5 ಸಲಹೆ
2017ರಲ್ಲಿ ಕರ್ನಾಟಕದಲ್ಲಿ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಗಳ ಹಿನ್ನೋಟ ಇಲ್ಲಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷದಲ್ಲಿನ ಬೆಳವಣಿಗೆಗಳು, ಹೊಸ ರಾಜಕೀಯ ಪಕ್ಷಗಳ ಉದಯ ಸೇರಿದಂತೆ ವಿವಿಧ ವಿಚಾರಗಳ ಹಿನ್ನೋಟವನ್ನು ಗಮನಿಸುತ್ತಾ ಮುಂದಿನವರ್ಷದತ್ತ ಹೆಜ್ಜೆ ಹಾಕೋಣ...
ಬಿಜೆಪಿ ಸೇರಿದ ಶ್ರೀನಿವಾಸ ಪ್ರಸಾದ್
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ನಂಜನಗೂಡು ಕ್ಷೇತ್ರದ ಶಾಸಕ ವಿ.ಶ್ರೀನಿವಾಸ ಪ್ರಸಾದ್ ಸಂಪುಟ ವಿಸ್ತರಣೆ ಸಮಯದಲ್ಲಿ ಸಚಿವ ಸ್ಥಾನ ಕಳೆದುಕೊಂಡರು. ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡ ಅವರು ಕಾಂಗ್ರೆಸ್ ಪಕ್ಷ ತೊರೆದರು, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದರು. ಜನವರಿ 2ರಂದು ಅವರು ಬಿಜೆಪಿಗೆ ಸೇರ್ಪಡೆಗೊಂಡರು.
ಸಚಿವ ಎಚ್.ಎಸ್.ಮಹದೇವ ಪ್ರಸಾದ್ ನಿಧನ
ಗುಂಡ್ಲುಪೇಟೆ ಶಾಸಕ ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಸಕ್ಕರೆ ಮತ್ತು ಸಹಕಾರ ಸಚಿವರಾಗಿದ್ದ ಎಚ್.ಎಸ್ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನರಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿದ್ದ ಮಹದೇವ ಪ್ರಸಾದ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜನವರಿ 3ರಂದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದರು. ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು ಅಲ್ಲಿಯೇ ಕೊನೆಯುಸಿರೆಳೆದರು.
ಕಾಂಗ್ರೆಸ್ ತೊರೆದ ಎಸ್.ಎಂ.ಕೃಷ್ಣ
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಸುಮಾರು 48 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್.ಎಂ.ಕೃಷ್ಣ ಅವರು ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ ಪಕ್ಷ ತೊರೆದರು. ಜನವರಿ 28ರಂದು ಅವರು ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದರು. ಹಲವು ಕಾಂಗ್ರೆಸ್ ನಾಯಕರಿಗೆ ಈ ನಿರ್ಧಾರ ಅಚ್ಚರಿ ಉಂಟು ಮಾಡಿತು.
ಎಸ್.ಎಂ.ಕೃಷ್ಣ ಬಿಜೆಪಿಗೆ
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ನಾಯಕರು ಪಕ್ಷಕ್ಕೆ ಆಹ್ವಾನಿಸಿದ್ದರು. ಮಾರ್ಚ್ 22ರಂದು ಎಸ್.ಎಂ.ಕೃಷ್ಣ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ದೆಹಲಿಯಲ್ಲಿ ಬಿಜೆಪಿ ಸೇರಿದರು. ಈ ಮೂಲಕ ಇಳಿ ವಯಸ್ಸಿನಲ್ಲಿ ಎಸ್.ಎಂ.ಕೃಷ್ಣರ ಹೊಸ ರಾಜಕೀಯ ಇನ್ನಿಂಗ್ಸ್ ಆರಂಭವಾಯಿತು.
ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು
ನಂಜನಗೂಡಿನಲ್ಲಿ ಬಿಜೆಪಿಯ ಸ್ವಾಭಿಮಾನಕ್ಕೆ ಗೆಲುವು ಸಿಗಲಿಲ್ಲ. ಗುಂಡ್ಲುಪೇಟೆಯಲ್ಲಿ ಅನುಕಂಪದ ಅಲೆಯಲ್ಲಿ ಬಿಜೆಪಿಗೆ ಸೋಲು ಉಂಟಾಯಿತು. ವಿ.ಶ್ರೀನಿವಾಸ ಪ್ರಸಾದ್ ಅವರ ರಾಜೀನಾಮೆಯಿಂದ, ಎಚ್.ಎಸ್.ಮಹದೇವ ಪ್ರಸಾದ್ ಅವರ ಅಕಾಲಿಕ ಮರಣದಿಂದಾಗಿ ತೆರವಾಗಿದ್ದ ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲು ಅನುಭವಿಸಿದರು. ನಂಜನಗೂಡಿನಲ್ಲಿ ಕಳಲೆ ಕೇಶವಮೂರ್ತಿ, ಗುಂಡ್ಲುಪೇಟೆಯಲ್ಲಿ ಗೀತಾ ಮಹದೇವ ಪ್ರಸಾದ್ ಗೆಲುವು ಸಾಧಿಸಿದರು.
ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ
ಕಾಂಗ್ರೆಸ್ ಪಕ್ಷ ತೊರೆದಿದ್ದ ಮಾಜಿ ಸಚಿವ, ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಎಚ್.ವಿಶ್ವನಾಥ್ ಜುಲೈ 4ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರಿದರು.
ಅಜಾತಶತ್ರು ಕಣ್ಮರೆ
ಕರ್ನಾಟಕದ 17ನೇ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ಮುಖಂಡ ಎನ್.ಧರಂ ಸಿಂಗ್ ಅವರು ಜುಲೈ 27ರಂದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದಾಗಿ ನಿಧನರಾದರು, ಅವರಿಗೆ 80 ವರ್ಷ ವಯಸ್ಸಾಗಿತ್ತು.
ರಾಜಕೀಯಕ್ಕೆ ರಿಯಲ್ ಸ್ಟಾರ್
ನಟ, ನಿರ್ದೇಶಕ ಉಪೇಂದ್ರ ಅವರು ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ ಎಂಬ ಪ್ರಾದೇಶಿಕ ಪಕ್ಷವನ್ನು ನವೆಂಬರ್ 1ರಂದು ಆರಂಭಿಸಿದರು. ಜನ ಸಾಮಾನ್ಯರ ಜೊತೆ ಸೇರಿ ರಾಜಕಾರಣ ಮಾಡುವುದೇ ಪಕ್ಷದ ಗುರಿ ಎಂದು ಘೋಷಣೆ ಮಾಡಿದರು.
ಅನುಪಮಾ ಶೆಣೈ ಹೊಸ ಪಕ್ಷ ಸ್ಥಾಪನೆ
ಕೂಡ್ಲಿಗಿಯ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಅವರು ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ 1ರಂದು ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದರು. 'ಭಾರತೀಯ ಜನಶಕ್ತಿ ಕಾಂಗ್ರೆಸ್' ಹೆಸರಿನ ಹೊಸ ಪಕ್ಷವೊಂದನ್ನು ಅವರು ಸ್ಥಾಪಿಸಿದರು.
ಸಿ.ಪಿ.ಯೋಗೇಶ್ವರ ಬಿಜೆಪಿ ಸೇರ್ಪಡೆ
ನವೆಂಬರ್ 2ರಂದು ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ ಅವರು ಬಿಜೆಪಿ ಸೇರಿದರು. 2008ರಲ್ಲಿ ಕಾಂಗ್ರೆಸ್ನಿಂದ ಗೆದ್ದಿದ್ದ ಸಿ.ಪಿ.ಯೋಗೇಶ್ವರ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಸಚಿವರಾಗಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿ ಗೆದ್ದು ಬಂದಿದ್ದರು. ಮತ್ತೆ ಸಮಾಜವಾದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ನವೆಂಬರ್ 27ರಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಯಿತು. ಈ ಮೂಲಕ ಪ್ರಜ್ವಲ್ ರೇವಣ್ಣ ಅವರು ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಅಧಿಕೃತ ಸ್ಥಾನ ಸಿಕ್ಕಿತು.
ಸಿದ್ದರಾಮಯ್ಯ ಸಂಪುಟ ವಿಸ್ತರಣೆ
ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್, ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಹಾಗೂ ಆರ್.ಬಿ. ತಿಮ್ಮಾಪುರ ಅವರು ಸೆಪ್ಟೆಂಬರ್ 1ರಂದು ಸಚಿವರಾಗಿ ಸಿದ್ದರಾಮಯ್ಯ ಸಂಪುಟ ಸೇರಿದರು.