ರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ
ಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು.
ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ದಸರಾ ಉದ್ಘಾಟನೆಗೆ ಮಾಜಿ ರಾಷ್ಟ್ರಪತಿ ಅಬ್ಧುಲ್ ಕಲಾಂ ಅವರನ್ನು ಆಹ್ವಾನಿಸಲು ಸರಕಾರ ಯತ್ನಿಸಿತ್ತು. ಆದರೆ, ಕಲಾಂ ದಸರಾ ಆರಂಭದ ದಿನವೇ ವಿದೇಶ ಪ್ರಯಾಣ ಕೈಗೊಳ್ಳಲಿದ್ದಾರೆ. ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಇನ್ನೂ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡುವುದು ಮಾತ್ರ ಬಾಕಿ ಇದೆ ಎಂದು ಕರಂದ್ಲಾಜೆ ಹೇಳಿದರು.
ಹಿಂದಿಗಿಂತ ಈ ವರ್ಷ ದಸರಾ ಹಬ್ಬವನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸಲಿ ನಿರ್ಧರಿಸಲಾಗಿದ್ದು, ಈಗಾಗಲೇ ಉಪಸಮಿತಿಗಳು ಕಾರ್ಯೋನ್ಮುಖವಾಗಿವೆ. ಕಾರ್ಯಕ್ರಮಗಳ ವಿವರಗಳನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುವುದು. ಕರ್ನಾಟಕ ಮತ್ತು ಭಾರತದ ಸಂಸ್ಕೃತಿಯನ್ನು ಬಿಂಬಿಸುವಂತ ಕಾರ್ಯಕ್ರಮ ಮಾಡಬೇಕು ಎಂಬುದು ನಮ್ಮ ಅಶಯವಾಗಿದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)