ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದರ್ಬಾರ್ ಹಾಲ್ ನ ರತ್ನಖಚಿತ ಸಿಂಹಾಸನ

By * ಬಿ.ಎಂ.ಲವಕುಮಾರ್, ಮೈಸೂರು
|
Google Oneindia Kannada News

ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರು, ಅರಮನೆ ನಗರಿ ಕೂಡಾ ಹೌದು. ವಿಶ್ವವಿಖ್ಯಾತ ದಸರಾ ಸಂಭ್ರಮದಲ್ಲಿ ಜಂಬೂ ಸವಾರಿ ಆಕರ್ಷಣೆ ಒಂದು ಬಗೆಯದಾದರೆ, ಮೈಸೂರು ಒಡೆಯರ ವೈಭವ ಸಾರುವ ಅರಮನೆ ರತ್ನಖಚಿತ ಚಿನ್ನದ ಸಿಂಹಾಸನ ನೋಡುವುದೇ ಒಂದು ರೀತಿ ಖುಷಿ.

ರತ್ನಖಚಿತ ಸಿಂಹಾಸನ: ಅರಮನೆಯ ದರ್ಬಾರ್ ಹಾಲ್‌ನಲ್ಲಿರುವ ರತ್ನ ಖಚಿತ ಸಿಂಹಾಸನವು ಆಕರ್ಷಕವಾಗಿದ್ದು, ಇದನ್ನು ದಸರಾ ಸಂದರ್ಭ ಮಾತ್ರ ಜೋಡಿಸಲಾಗುತ್ತದೆ. ಈ ಕಾರ್ಯಕ್ಕೆ ಮೈಸೂರಿಗೆ ಸಮೀಪದ ಗೆಜ್ಜಗಳ್ಳಿ ಗ್ರಾಮದಿಂದ ಆಯ್ದ ಕೆಲವರನ್ನು ಮಾತ್ರ ಕರೆತರಲಾಗುತ್ತದೆ.

ಇದು ತಲತಲಾಂತರದಿಂದ ನಡೆದು ಬಂದಿದೆ. ನವರಾತ್ರಿಯ ದಿನಗಳಲ್ಲಿ ಶ್ರೀಕಂಠದತ್ತನರಸಿಂಹರಾಜ ಒಡೆಯರ್ ಆರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸುತ್ತಾರೆ. ಈ ಸಂದರ್ಭ ಹಿಂದಿನ ಕಾಲದ ರಾಜವೈಭವ ಮರುಕಳಿಸಿದ ಅನುಭವವಾಗಿ ಬಿಡುತ್ತದೆ.

ಈ ಸಿಂಹಾಸನವು ಪುರಾತನವಾದದ್ದೆಂದು ಹೇಳಲಾಗಿದೆ. ಇದಕ್ಕೊಂದು ಚರಿತ್ರೆಯೂ ಇದೆ. ಪಾಂಡವರ ಕಾಲದೆನ್ನಲಾಗಿದ್ದು, ಆ ಕಾಲದಲ್ಲಿ ಕಂಪುಲ ರಾಜನು ಇದನ್ನು ತಂದು ಪೆನಗೊಂಡದಲ್ಲಿ ಹೂತಿಟ್ಟಿದ್ದನು ಎನ್ನಲಾಗಿದೆ.

1338ರಲ್ಲಿ ಮಹರ್ಷಿ ವಿದ್ಯಾರಣ್ಯರು ಧ್ಯಾನದೃಷ್ಠಿಯಿಂದ ಇದನ್ನು ಅರಿತು ವಿಜಯನಗರದ ಚಕ್ರಾಧಿಪತ್ಯದ ಸ್ಥಾಪಕ ಹರಿಹರನಿಗೆ ತಿಳಿಸಿದರೆಂದು ಅದರಂತೆ ಹೊರತೆಗೆದು 150 ವರ್ಷಗಳ ಕಾಲ ಆನೆಗೊಂದಿಯಲ್ಲಿ ಅಲಂಕರಿಸಿದರೆಂದೂ ಬಳಿಕ ವಿಜಯನಗರದ ಅವನತಿಯ ವೇಳೆಗೆ ಶ್ರೀರಂಗಪಟ್ಟಣದಲ್ಲಿದ್ದ ವಿಜಯನಗರದ ರಾಯಭಾರಿಯ ಅರಮನೆಗೆ ಸಾಗಿಸಲಾಯಿತೆಂದು ಹೇಳಲಾಗಿದೆ.

ಆ ಬಳಿಕ 1609ರಲ್ಲಿ ಆಗಿನ ಮೈಸೂರು ಅರಸರಾದ ರಾಜಒಡೆಯರ್ ಶ್ರೀರಂಗರಾಜುಲುರನ್ನು ತಲಕಾಡಿಗೆ ಓಡಿಸಿ ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡರು. 1610ರಲ್ಲಿ ತಮ್ಮ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಬದಲಾಯಿಸಿದಾಗ ಸಿಂಹಾಸನವನ್ನು ಮೈಸೂರಿನ ಅರಮನೆಗೆ ಸಾಗಿಸಲಾಯಿತು.

ಸಿಂಹಾಸನವು ಚಿನ್ನದ ಬಾಳೆಯ ಕಂಬ ಮತ್ತು ಚಿನ್ನದ ಮಾವಿನ ಎಲೆಗಳಿಂದ ಅಲಂಕರಿಸಲ್ಪಟ್ಟಿದೆ. ಛತ್ರಿಯ ತುದಿಯಲ್ಲಿ ಒಡವೆಗಳಿಂದ ಅಲಂಕರಿಸಿದ ಪಕ್ಷಿಯನ್ನು ಕೂರಿಸಲಾಗಿದೆ. ಸಿಂಹಾಸನವನ್ನು ಹತ್ತುವ ಎರಡು ಕಡೆಗಳಲ್ಲೂ ಸ್ತ್ರೀಪುತ್ಥಳಿಯನ್ನು ನಿರ್ಮಿಸಲಾಗಿದೆ.

ಜೊತೆಗೆ ಛತ್ರಿಯ ಸುತ್ತಲೂ ಮುತ್ತಿನ ಕುಚ್ಚುಗಳನ್ನು ಕಟ್ಟಲಾಗಿದೆ. ಅಲ್ಲದೆ ಸಿಂಹಾಸನಕ್ಕೆ ಕೂರ್ಮರೂಪದ ಆಸನವನ್ನು ಒದಗಿಸಲಾಗಿದೆ. ಉಭಯ ಪಾಶ್ವಗಳಲ್ಲಿ ಯಾಳಿಗಳನ್ನು ಮತ್ತು ನಾಲ್ಕು ಕಡೆಗಳಲ್ಲಿ ಬಳ್ಳಿ ಲತೆಗಳನ್ನು ಕೆತ್ತಲಾಗಿದೆ.

ಸಿಂಹಾಸನದ ದಕ್ಷಿಣದಲ್ಲಿ ಬ್ರಹ್ಮ, ಉತ್ತರದಲ್ಲಿ ಶಿವ, ಮಧ್ಯದಲ್ಲಿ ವಿಷ್ಣುವನ್ನು ನಿಲ್ಲಿಸಲಾಗಿದೆ. ವಿಜಯ ಸೂಚಕ ನಾಲ್ಕು ಸಿಂಹಗಳನ್ನು ಇಡಲಾಗಿದೆ. ಮೂರು ಕೋನಗಳಲ್ಲೂ ರಾಕ್ಷಸ ಶರೀರ, ಎರಡು ಕುದುರೆಗಳು ಮತ್ತು ನಾಲ್ಕು ಹಂಸಪಕ್ಷಿಗಳನ್ನಿಡಲಾಗಿದೆ.

ನಾಗದೇವತೆಗಳ ಚಿತ್ರಗಳು, ಸ್ವಾಸ್ತಿಕ ಆಕೃತಿ ಮತ್ತು ಮುತ್ತಿನ ಹಡಗು ಮೇಲಿನ ಗುಡಾರಗಳ ಚಿತ್ರಣಗಳಿವೆ. ಸಿಂಹಾಸನವನ್ನು ನಾಲ್ಕು ದಿಕ್ಕುಗಳಲ್ಲಿ ತೆರೆಯಲಾಗಿದೆ. ಸಿಂಹಾಸನದ ಛತ್ರಿಯ ಮೇಲೆ ಸಂಸ್ಕೃತದ 96 ಸಾಲುಗಳ ಶ್ಲೋಕಗಳಿವೆ.

<strong>ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ</strong>ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X