ಬುದ್ಧ ಪೂರ್ಣಿಮಾ: ಆ ವಿರಾಗಿಗೆ ನಮೋ ನಮಃ
ಇಂದು ಬೌದ್ಧ ಮತೀಯರಿಗೆ ಬಹಳ ಪವಿತ್ರವಾದ ದಿನ. ವೈಶಾಖ ಶುದ್ಧ ಪೌರ್ಣಿಮೆ (ಈ ವರ್ಷ ಮೇ, 10) ಬುದ್ಧನ ಜನ್ಮ ದಿನ ಮತ್ತು ಬುದ್ಧನಿಗೆ ಜ್ಞಾನೋದಯವಾದ ದಿನ.
ಇಂದು ಬೌದ್ಧ ಮತೀಯರಿಗೆ ಬಹಳ ಪವಿತ್ರವಾದ ದಿನ. ವೈಶಾಖ ಶುದ್ಧ ಪೌರ್ಣಿಮೆ ಬುದ್ಧನ ಜನ್ಮ ದಿನ ಮತ್ತು ಬುದ್ಧನಿಗೆ ಜ್ಞಾನೋದಯವಾದ ದಿನ. ಶ್ರೀ ವಿಷ್ಣುವಿನ ದಶಾವತಾರದಲ್ಲಿ 9 ನೇ ಅವತಾರ ಎಂದೇ ಪೂಜಿಸಲ್ಪಡುವ "ಬುದ್ಧ" ಎಂದರೆ 'ಜ್ಞಾನ ಪಡೆದವನು' ಎಂದರ್ಥ.
ಶುದ್ಧೋಧನ ಮತ್ತು ಮಾಯಾದೇವಿಯರ ಪುತ್ರನಾಗಿ ಹುಟ್ಟಿದ ರಾಜಕುಮಾರನೇ ಸಿದ್ದಾರ್ಥ. 16ನೇ ವಯಸ್ಸಿನಲ್ಲೇ ಯಶೋಧರೆ ಎಂಬ ಕನ್ಯೆಯೊಂದಿಗೆ ವಿವಾಹವಾಗಿ, ತಮಗೆ ಹುಟ್ಟಿದ ಮುದ್ದಿನ ಮಗನಿಗೆ ರಾಹುಲ ಎಂದು ಹೆಸರನಿಟ್ಟು ರಾಜ್ಯ, ಸಂಪತ್ತು, ಅಧಿಕಾರ, ಪತ್ನಿ, ಮಗು ಎನ್ನುತ್ತ ನೆಮ್ಮದಿಯಿಂದ ಕಾಲಕಳೆಯುತ್ತಿದ್ದ. ಒಮ್ಮೆ ನಗರ ಸಂಚಾರ ಮಾಡುತ್ತಿದ್ದ ರಾಜ ಸಿದ್ಧಾರ್ಥನಿಗೆ ಶವ, ರೋಗಿ ಮತ್ತು ವೃದ್ಧನನ್ನು ಕಂಡು, ಬದುಕಿನಲ್ಲಿ ಕಾಯಿಲೆ, ವೃದ್ಧಾಪ್ಯ, ಸಾವು ಎಲ್ಲರಿಗೂ ಅನಿವಾರ್ಯವೇ ಎಂಬ ಪ್ರಶ್ನೆ ಹುಟ್ಟುತ್ತದೆ.[ಮಹಾನ್ ವಿರಾಗಿ ಬುದ್ಧನನ್ನು ಸ್ಮರಿಸಿ, ಕೊಂಡಾಡುವ ಸುದಿನ]

ಈ ಕುರಿತು ಸನ್ಯಾಸಿ ಒಬ್ಬರನ್ನು ಪ್ರಶ್ನಿಸಿದಾಗ ನಿನಗೆ ಈ ಬಗ್ಗೆ ತಿಳಿಯಬೇಕೆಂದರೆ ಮೊದಲು ಎಲ್ಲವನ್ನೂ ತೊರೆದು ವಿರಾಗಿಯಾಗು, ಜ್ಞಾನಗಳಿಸಿದ ಮೇಲೆ ನಿನಗೆ ಈ ಪ್ರಶ್ನೆಯ ಉತ್ತರ ದೊರಕುತ್ತದೆ ಎಂದು ಸಾಧು ಉತ್ತರಿಸುತ್ತಾರೆ.
ಸಿದ್ಧಾರ್ಥನ ಮನಸ್ಸು ಬುದ್ಧನಾಗುವುದಕ್ಕೆ ಹಾತೊರೆಯುತ್ತಿದ್ದ ದಿನ ಕೊನೆಗೂ ಬಂತು. ತನ್ನ 26 ನೇ ವಯಸ್ಸಿನಲ್ಲೇ ಮನೆ - ಮಠ, ಹೆಂಡತಿ - ಮಗುವನ್ನು ತೊರೆದ ಸಿದ್ಧಾರ್ಥ ಗಯಾಗೆ ತೆರಳಿ, ಅರಳಿ ಮರದಕೆಳಗೆ ಕುಳಿತು ಧ್ಯಾನಾಸಕ್ತನಾದ. ಅನವರತ ಬಿಡದೇ 47 ದಿವಸಗಳ ಕಠಿಣ ತಪಸ್ಸುಮಾಡಿದಾಗ ಇದೇ ವೈಶಾಖ ಶುದ್ಧ ಹುಣ್ಣಿಮೆಯಂದು ಸಿದ್ಧಾರ್ಥನಿಗೆ ಜ್ಞಾನೋದಯವಾಯಿತು. ಅಂದಿನಿಂದ ಸಿದ್ಧಾರ್ಥ ಬುದ್ಧನಾದ.[ಮಂಗಳನ ಅಂಗಳದಲ್ಲಿ ಬುದ್ಧನ ವಿಗ್ರಹ ಇಟ್ಟವರು ಯಾರು?]
ಸತ್ಯ, ಅಹಿಂಹೆ, ಸುಳ್ಳು ಹೇಳದಿರುವುದು, ಕಳ್ಳತನಮಾಡಬಾರದು ಆತನ ಮಹತ್ವದ ಉಪದೇಶ. ಸಕಲ ಪ್ರಾಣಿಗಳಲ್ಲಿ ದಯೆಯಿರಲಿ, ಪ್ರಾಣಿಹಿಂಸೆ ಮಾಡಬೇಡಿ, ಆಸೆಯೇ ದುಃಖಕ್ಕೆ ಕಾರಣ, ಹಿಂಸೆ ದ್ವೇಷವೇ ದುಃಖದ ಮೂಲ, ಎಲ್ಲರನ್ನೂ ಪ್ರೀತಿಸಿ, ಎಂದು ಸಾರುತ್ತಾ ಬೌದ್ಧ ಧರ್ಮವನ್ನು ಪ್ರಸಾರ ಮಾಡುತ್ತಾ ಪ್ರಪಂಚದ ಉದ್ದಗಲಕ್ಕೂ ಸಂಚರಿಸಿ 80 ವರ್ಷಗಳಷ್ಟು ದೀರ್ಘ ಕಾಲ ಎಲ್ಲೆಡೆಯೂ ಧರ್ಮಪ್ರಚಾರಮಾಡಿದ ಮಹಾಪುರುಷ " ಗೌತಮ ಬುದ್ಧ ".
ಪ್ರಪಂಚದೆಲ್ಲೆಡೆಯೂ ಗೌತಮ ಬುದ್ಧನ ಮಂದಿರಗಳಿವೆ , ಅನೇಕ ದೊಡ್ಡ ದೊಡ್ಡ ಧ್ಯಾನಾಸಕ್ತ ಬುದ್ಧನ ಅನೇಕ ಬಗೆಯ ಮೂರ್ತಿಗಳಿವೆ , ಹಾಂಗ್ ಕಾಂಗ್, ಥೈಲ್ಯಾಂಡ್, ಬರ್ಮಾ, ಶ್ರೀಲಂಕಾ ದೇಶಗಳಲ್ಲಿ ಇವತ್ತಿಗೂ ಗೌತಮ ಬುದ್ಧನ ಅನುನಾಯಿಗಳೇ ಹೆಚ್ಚಾಗಿದ್ದಾರೆ. ಬುದ್ಧಪೂರ್ಣಿಮೆಯಂದು ಶ್ರೀ ವಿಷ್ಣುವಿನ ಅವತಾರಿ, ಸತ್ಯ ಅಹಿಂಸೆಯ ಸಾಕಾರಮೂರ್ತಿ ಗೌತಮ ಬುದ್ಧನಿಗೆ ನಮ್ಮ ನಮನವಿರಲಿ...












Click it and Unblock the Notifications