ಉತ್ತರ ಕರ್ನಾಟಕದ ನಾಗರ ಪಂಚಮಿಯ ವಿಶೇಷತೆ ಏನು?
ರಾಯಚೂರು ಆಗಸ್ಟ್, 02: ನಾಗರ ಪಂಚಮಿ ಹಬ್ಬದ ಅಂಗವಾಗಿ ರಾಯಚೂರು ಜಿಲ್ಲೆಯಲ್ಲಿ ಮಹಿಳೆಯರು ನಾಗರ ಮೂರ್ತಿಗಳಿಗೆ ಹಾಗೂ ಹುತ್ತಕ್ಕೆ ಹಾಲು ಎರೆಯುವ ಮೂಲಕ ಸಂಭ್ರಮಿಸಿದರು. ಇನ್ನು ಇಲ್ಲಿ ಹಳೆ ಸಂಪ್ರಾದಾಯದಂತೆ ನಾಗರ ಪಂಚಮಿಯಯನ್ನು ಆಚರಣೆ ಮಾಡಿರುವುದು ವಿಶೇಷವಾಗಿದೆ.
ಗ್ರಾಮೀಣ ಪ್ರದೇಶದ ಮನೆ-ಮನೆಗಳಲ್ಲಿ ಬೆಳಗ್ಗೆಯಿಂದ ಮುತ್ತೈದೆಯರು ಮಕ್ಕಳೊಂದಿಗೆ ಹೊಸ ಬಟ್ಟೆ ತೊಟ್ಟು, ನಾಗದೇವತೆ ದೇವಸ್ಥಾನ, ಕಲ್ಲುನಾಗರಮೂರ್ತಿ, ಹುತ್ತಗಳಿರುವ ಪ್ರದೇಶಗಳಿಗೆ ತೆರಳಿ ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು. ಪಂಚಮಿ ವಿಶೇಷವಾಗಿ ಕಡ್ಲೆ, ಗೋಧಿ, ಶೇಂಗಾ, ರವೆ, ಹೀಗೆ ನಾನಾ ತರಹದ ಉಂಡಿಗಳು, ಕಡುಬುಗಳನ್ನು ತಯಾರಿಸಿ ನೈವೇದ್ಯ ಮಾಡಿ ತಿಂದು ಸಂಭ್ರಮಿಸಿದರು.
ಮಕ್ಕಳು ಸಂಭ್ರಮಿಸುವುದರ ಜೊತೆಗೆ ಒಣಕೊಬ್ಬರಿ ಬಟ್ಟಲುಗಳಲ್ಲಿ ದಾರ ಕಟ್ಟಿಕೊಂಡು ಬುಗರಿಯಂತೆ ತಿರುಗಿಸಿ ಆಟವಾಡಿದರು. ನೂಲು ತುಂಡಾದ ಬಳಿಕ ಒಣಕೊಬ್ಬರಿ ತಿಂದು ಸಂತೋಷಪಟ್ಟರು. ಶ್ರಾವಣ ಮಾಸ ಹಾಗೂ ಪಂಚಮಿ ಹಿನ್ನೆಲೆಯಲ್ಲಿ ವಿವಿಧ ದೇವಸ್ಥಾನಗಳಿಗೆ ಭಕ್ತರು ತೆರಳಿ ದೇವರ ದರ್ಶನ ಪಡೆದರು.
ಚಿಕ್ಕ ಮಕ್ಕಳು ಮನೆಗಳಲ್ಲಿ ಕಟ್ಟಿದ ಜೋಕಾಲಿ ಆಡಿದರೆ, ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ಸಂಭ್ರಮದಿಂದ ತವರು ಮನೆಗೆ ಆಗಮಿಸಿ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ.
ಉತ್ತರ ಕರ್ನಾಟಕದಲ್ಲಿ ಪಂಚಮಿ ವಿಶೇಷತೆ
ಈ ಹಬ್ಬದಲ್ಲಿ ಹೆಚ್ಚಾಗಿ ಹೆಣ್ಣು ಮಕ್ಕಳು ಸಂಭ್ರಮಿಸುತ್ತಾರೆ. ನಾಗರಪಂಚಮಿಯ ಹಿಂದಿನ ದಿನ ಸಹೋದರಿ ನಾಗದೇವತೆಗೆ ಬೇಡಿಕೊಂಡರೆ ಸಹೋದರನಿಗೆ ಲಾಭ ಹಾಗೂ ರಕ್ಷಣೆ ಸಿಗುತ್ತದೆ ಎನ್ನುವ ವಾಡಿಕೆ ಇದೆ. ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ಇನ್ನು ಹಲವು ವಿಶೇಷತೆಗಳಿಂದ ಕೂಡಿರುತ್ತದೆ. 'ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ' ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.
ನಮ್ಮ ಪೂರ್ವಜರ ಕಾಲದಿಂದಲೂ ನಾಗಪೂಜೆ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಸಿಂಧೂ ಸಂಸ್ಕೃತಿಯ ಉತ್ಕನನ ತಾಣಗಳಲ್ಲಿ ಸಿಕ್ಕಿರುವ ಅನೇಕ ಅವಶೇಷಗಳನ್ನು ಅಲ್ಲಿನ ಜನರು ಪೂಜೆ ಮಾಡುತ್ತಿದ್ದರು ಎನ್ನುವ ಸಂಪ್ರಾದಾಯ ಮೊದಲಿನಿಂದಲೂ ಇದೆ. ನಂತರ ಬಂದಿರುವ ಅನೇಕ ರಾಜಮನೆತನಗಳು ಸರ್ಪವನ್ನು ವಿಶೇಷವಾಗಿ ಪೂಜಿಸುತ್ತಿದ್ದರು. ಈ ಬಗ್ಗೆ ಇತಿಹಾಸದ ಪುಟಗಳಲ್ಲಿ ಉಲ್ಲೇಖವಿದೆ. ಮಾನವ ಜನಾಂಗದವರು ಆದಿಕಾಲದಿಂದಲೂ ಈ ನಾಗಾರಾಧನೆ ನಡೆಸಿಕೊಂಡು ಬಂದಿದ್ದಾರೆ.
ನಾಗಪಂಚಮಿಯನ್ನು ಅನುಸರಿಸುವ ದೇಶಗಳು
ಭಾರತದ ಇತಿಹಾಸದ ಪುಟಗಳಲ್ಲಿ ನಾಗವಂಶಗಳ ಕುರಿತಾಗಿ ಉಲ್ಲೇಖವಿದೆ. ಈಗಲೂ ಕೇರಳ, ಅಸ್ಸಾಂ, ನಾಗಾಲ್ಯಾಂಡ್ಗಳಲ್ಲಿ ನಾಗಾ ಜನಾಂಗದವರು ಇದ್ದಾರೆ. ಭಾರತಕ್ಕಷ್ಟೇ ನಾಗ ಪೂಜೆ ಸೀಮಿತವಾಗಿಲ್ಲ. ಗ್ರೀಕ್, ಜಪಾನ್, ಚೀನಾ, ಈಜಿಪ್ಟ್ ಸೇರಿದಂತೆ ಮುಂತಾದ ಪುರಾತನ ಸಂಸ್ಕೃತಿಯುಳ್ಳ ಜನರು ಅನುಸರಿಸುತ್ತಿದ್ದಾರೆ. ನಮ್ಮ ನೆರೆಯ ರಾಜ್ಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬತ್ತೀಸ ಶಿರಾಳ್ ಗ್ರಾಮದಲ್ಲಿ ನಾಗರಪಂಚಮಿ ದಿನ ಜೀವಂತ ನಾಗರಹಾವುಗಳನ್ನು ಪೂಜಿಸಲಾಗುತ್ತದೆ.
ಎಷ್ಟು ಬಗೆಯ ನಾಗಗಳಿಗೆ ಆರಾಧನೆ?
"ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್ ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ" ಎಂಬ ಶ್ಲೋಕವು ನಾಗ ದೇವನ ವಿವಿಧ ಹೆಸರುಗಳನ್ನು ಹೇಳುತ್ತದೆ. ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆ ಮಾಡಲಾಗುತ್ತದೆ. ಸರ್ಪಭಯ ಮತ್ತು ವಿಷದಿಂದ ತೊಂದರೆಯಾಗದೇ ಇರಲು ಹಲವು ಕಡೆ ನಾಗನ ಕಲ್ಲುಗಳಿಗೆ ಕ್ಷೀರಾಭಿಷೇಕ ಮಾಡುವ ಪದ್ಧತಿಯಿದೆ.
ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಶ್ರಾವಣ ಶುದ್ಧ ಪಂಚಮಿಯ ದಿನ, ಗೋಮಯ (ಸಗಣಿ) ಯಿಂದ ಬಾಗಿಲು ಸಾರಿಸಿ, ರಂಗೋಲಿ, ಇಲ್ಲವೇ ಅರಿಶಿಣ, ಕುಂಕುಮದಿಂದ ನಾಗರ ಚಿತ್ರಗಳನ್ನು ಬರೆದು ನಿಷ್ಠೆಯಿಂದ ಪೂಜೆ ಮಾಡುತ್ತಾರೆ.ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು 'ಸರ್ಪಯಜ್ಞ'ವನ್ನು ಆರಂಭಿಸುತ್ತಾನೆ.
ಸರ್ಪಗಳ ಇತಿಹಾಸ ಸಾರುವ ಹಬ್ಬ
ಋತ್ವಿಜರು ಹೋಮಮಾಡಲು ಆರಂಭಿಸಿದಾಗ ಸರ್ಪಗಳು ಒಂದರ ಹಿಂದೆ ಒಂದರಂತೆ ಬಂದು ಅಗ್ನಿಕುಂಡಕ್ಕೆ ಬಿದ್ದು ಬೂದಿಯಾಗತೊಡಗಿತು ಎಂದು ಉಲ್ಲೇಖಿಸಿದ್ದಾರೆ. ಇದನ್ನು ಕಂಡ ಉಳಿದ ಸರ್ಪಗಳು ಸರ್ಪರಾಜ ವಾಸುಕಿಯ ತಂಗಿಯಾದ ಜರತ್ಕಾರು ಬಳಿ ಹೋಗಿ ದಯವಿಟ್ಟು ನಮ್ಮನ್ನು ಆ ರಾಜನ ಹೋಮದಿಂದ ರಕ್ಷಿಸು ಎಂದು ಬೇಡಿಕೊಳ್ಳುತ್ತವೆ. ಸರ್ಪಗಳ ಮನವಿಗೆ ಜರತ್ಕಾರು ಒಪ್ಪಿ ತನ್ನ ಮಗನಾದ ಆಸ್ತಿಕನಿಗೆ ಯಜ್ಞವನ್ನು ನಿಲ್ಲಿಸಿ ಬರುವಂತೆ ಸೂಚನೆ ನೀಡುತ್ತಾಳೆ. ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನ ಯಜ್ಞಶಾಲೆಯನ್ನು ಪ್ರವೇಶಿಸಿ ತನ್ನ ವಿದ್ಯಾಬಲದಿಂದ ಪ್ರಾಣಿ ಹಿಂಸೆ ಮಹಾಪಾಪ, ನೀನು ಈಗಾಗಲೇ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂದು ಬೋಧಿಸಿದ. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿಯಾಗಿದೆಯಂತೆ.