ಪ್ರತ್ಯೇಕ ಲಿಂಗಾಯತ ಧರ್ಮ; ಮಾಜಿ ಸಚಿವ ಎಂ.ಬಿ. ಪಾಟೀಲ್ ಯುಟರ್ನ್!
ಬೆಂಗಳೂರು, ಸೆ. 04: ಕಳೆದ ವಿಧಾಸಭಾ ಚುನಾವಣೆ ಸಂದರ್ಭದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಪ್ರಮುಖವಾಗಿ ಚರ್ಚೆಯಲ್ಲಿತ್ತು. ಇದೇ ವಿಚಾರವನ್ನುಟ್ಟುಕೊಂಡು ಕಾಂಗ್ರೆಸ್ ಪಕ್ಷದ ಲಿಂಗಾಯತ ಸಮುದಾಯದ ನಾಯಕರು, ಅದರಲ್ಲಿಯೂ ಮಾಜಿ ಸಚಿವ ಎಂ.ಬಿ. ಪಾಟೀಲ್ ಹೋರಾಟ ಆರಂಭಿಸಿದ್ದರು. ಆದರೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಲಾಭಕ್ಕಿಂತ ಹೆಚ್ಚು ನಷ್ಠವನ್ನುಂಟು ಮಾಡಿತು. ಇದೇ ವಿಚಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎಂಬ ವಿಶ್ಲೇಷಣೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಪ್ರಕಟವಾಗಿದ್ದವು. ಆದರೂ ಇದೇ ವಿಚಾರದ ಮೇಲೆ ಕಳೆದೆರಡು ದಿನಗಳ ಹಿಂದೆ ಮತ್ತೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದರು.
ಆದರೆ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್ ತಮ್ಮ ನಿಲುವು ಬದಲಿಸಿದ್ದಾರೆ. ಪ್ರತ್ಯೇಕ ಮಾತನ್ನು ಬಿಟ್ಟು, ಎಲ್ಲರೂ ಜೊತೆಯಾಗಿ ಹೋಗೋಣ ಎಂಬ ಮಾತನ್ನು ಅವರು ಆಡಿದ್ದಾರೆ. ಆ ಮೂಲಕ ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಆರಂಭವಾಗಿದ್ದ ಬೆಳವಣಿಗೆ ಮುಗಿದಂತಾಗಿದೆ. ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ನಿಲುವಿನಲ್ಲಿ ಬದಲಾವಣೆ ಬರಲು ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ನಾಯಕರ ಸೂಚನೆ ಕಾರಣ ಎನ್ನಲಾಗಿದೆ.
ನಾವು ಒಂದಾದರೆ ಯಾರಿಗೆ ಸಮಸ್ಯೆ?
ಈ ಹಿಂದೆ ನಾವು ವೀರಶೈವ ಒಳಗೊಂಡಂತೆ 99 ಉಪಪಂಗಡಗಳನ್ನು ಸೇರಿಸಿ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಕೇಳಿದ್ದೇವು. ಮುಂದಿನ ಚುನಾವಣೆ ನಂತರ ನಾವೆಲ್ಲ ಒಗ್ಗೂಡಿ ಮುನ್ನೆಡೆಯುತ್ತೇವೆ ಎಂದು ಹೇಳಿದ್ದೆ. ಇಲ್ಲಿ ಹೋರಾಟ ಕೂಗು ಪ್ರತ್ಯೇಕ ಈ ಶಬ್ದಗಳನ್ನು ನಾನು ಬಳಸಿಯೇ ಇಲ್ಲ.
ಚುನಾವಣೆ ಮುಂಚೆ ಮಾಡಿದರೆ ಇದಕ್ಕೆ ಮತ್ತೆ ರಾಜಕೀಯ ಬಣ್ಣ ನೀಡಿ, ಅಪಪ್ರಚಾರ ಮಾಡುತ್ತಾರೆ ಎಂಬ ಕಾರಣಕ್ಕೆ ಬರುವ ಚುನಾವಣೆ ನಂತರದಲ್ಲಿ ನಾವು ಪಂಚಪೀಠಾಧಿಶರು, ವೀರಕ್ತಮಠಗಳು, ವೀರಶೈವ ಮಹಾಸಭಾ, ಜಾಗತೀಕ ಲಿಂಗಾಯತ ಮಹಾಸಭಾ ಕೂಡಿ ಚರ್ಚೆ ಮಾಡಿ ಸಮಾಜಕ್ಕೆ ಒಳಿತಾಗುವ ನಿಟ್ಟಿನಲ್ಲಿ ಮುಂದುವರೆಯುತ್ತೇವೆ ಎಂದು ಬೆಂಗಳೂರಿನಲ್ಲಿ ಹೇಳಿದ್ದೆ. ಈಗ ನಾವು ಒಂದಾಗುವಾಗ ಹಾಗೂ ನಾವೆಲ್ಲರೂ ಒಂದಾದರೆ ಯಾರಿಗೆ ಮತ್ತು ಏಕೆ ಸಮಸ್ಯೆ? ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಪ್ರಶ್ನೆ ಮಾಡಿದ್ದಾರೆ.
ನಾನು ನಾಯಕತ್ವ ವಹಿಸುವುದಿಲ್ಲ!
"ಈ ವಿಚಾರದಲ್ಲಿ ನಾನು ನಾಯಕತ್ವ ವಹಿಸುವುದಿಲ್ಲ. ನಾನು ಎರಡು ಹೆಜ್ಜೆ ಹಿಂದಿಟ್ಟು, ಸಾಮೂಹಿಕ ನಾಯಕತ್ವದಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆಯೂ ಗೊತ್ತಿಲ್ಲ. ಆದರೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ' ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
ನಾವು ಹಿಂದೆ ಹೋರಾಟ ಮಾಡಿದ್ದಾಗ ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ, ಅಲ್ಪಸಂಖ್ಯಾತರ ಸ್ಥಾನಮಾನ, ಇತರೆ ಸೌಲಭ್ಯಗಳು ಸಿಗುತ್ತಿದ್ದವು. ಎಂಜಿನಿಯರಿಂಗ್, ಮೆಡಿಕಲ್ ಮತ್ತು ಡೆಂಟಲ್ ಶಿಕ್ಷಣದಲ್ಲಿ ಶೇ.50ರಷ್ಟು ಮೀಸಲಾತಿ ಸಿಗುತ್ತಿತ್ತು. ಯುಪಿಎಸ್ಸಿ ಯಿಂದ ಕೆಪಿಎಸ್ಸಿ ಯವರಿಗೆ ಕೇಂದ್ರದಿಂದ ರಾಜ್ಯದವರೆಗೆ ಉದ್ಯೋಗಗಳಲ್ಲಿ ಮೀಸಲಾತಿ ದೊರಕುತಿತ್ತು. ಆದರೆ ಅಂದು ಸಮಯದ ಅಭಾವದಿಂದ ಮತ್ತು ಗಡಿಬಿಡಿಯಲ್ಲಿ ನಮ್ಮಿಂದಲೂ ಸಣ್ಣ ಪುಟ್ಟ ಲೋಪದೋಷದಿಂದ ಆ ಕೆಲಸ ಆಗಲಿಲ್ಲ. ಅಂದು ಚುನಾವಣೆ ಹತ್ತಿರವಿದ್ದ ಸಂದರ್ಭದಲ್ಲಿ ಇದಕ್ಕೆ ರಾಜಕೀಯ ಬಣ್ಣ ನೀಡಿದರು ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ವಿವರಿಸಿದ್ದಾರೆ.
ನಾನು ಆರಂಭಿಸಿದ್ದ ಹೋರಾಟವಲ್ಲ ಎಂದ ಎಂಬಿಪಿ!
ಈ ಹಿಂದೆ ವೀರಶೈವ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡುವಂತೆ ವೀರಶೈವ ಮಹಾಸಭೆಯವರು ಮನವಿ ಸಲ್ಲಿಸಿದ್ದರು. ಆದರೆ ಶಬ್ದದ ತಾಂತ್ರಿಕ ಬಳಕೆಯ ತೊಂದರೆಯಿಂದಾಗಿ ಆ ಬೇಡಿಕೆ ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ನಾವು ಲಿಂಗಾಯತ ಸ್ವತಂತ್ರ ಧರ್ಮದ ಬೇಡಿಕೆ ಇಟ್ಟುಕೊಂಡು ಹೋರಾಟ ಮಾಡಿದ್ದೇವು. ಈ ಹೋರಾಟವನ್ನು ಮೊದಲು ಬೀದರ ಮತ್ತು ಬೆಳಗಾವಿಯಲ್ಲಿ ಆರಂಭ ಮಾಡಲಾಗಿತ್ತು. ಅದರ ನಂತರ ನಾನು ಹೋರಾಟದಲ್ಲಿ ಪಾಲ್ಗೊಂಡಿದ್ದೆ ಹೊರತು ನಾನು ಈ ಹೋರಾಟವನ್ನು ಆರಂಭಿಸಿರಲಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ವಿವರಿಸಿದ್ದಾರೆ.
ನಾನು ನನ್ನ ತಂದೆ–ತಾಯಿ ಬಿಟ್ಟು ಯಾರಿಗೂ ಹೆದರಲ್ಲ!
ತಾವು ಹೋರಾಟದಿಂದ ಹೆದರಿ ಹಿಂದೆ ಸರಿಯುತ್ತಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನನ್ನ ತಂದೆ-ತಾಯಿ ಬಿಟ್ಟು ಯಾರಿಗೂ ಹೆದರಲ್ಲ. ನಾನು ಈ ಹಿಂದೆಯೂ ತಪ್ಪು ಮಾಡಿಲ್ಲ, ಇಂದು ಮಾಡಿಲ್ಲ, ಮುಂದೆಯೂ ಮಾಡಲ್ಲ. ಬೀದರ್ನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮನದಾಳದ ಮಾತನ್ನು ಹೇಳಿದ್ದೇನೆ. ಕಳೆದ ಹೋರಾಟದ ಸಂದರ್ಭದಲ್ಲಿ ಎದುರಾದ ಸಮಸ್ಯೆಗಳಿಂದ ಪೆಟ್ಟು ತಿಂದಿದ್ದೇನೆ. ಅಧಿಕಾರ ಕಳೆದುಕೊಂಡಿದ್ದೇನೆ ಎಂದು ಅಂದು ಮನದಾಳದ ಮಾತನ್ನು ಹೇಳಿದ್ದೇನೆ. ಇದರಲ್ಲಿ ನನಗೆ ಯಾವುದೇ ರಾಜಕೀಯ ಅಜಂಡಾ ಇಲ್ಲ ಎಂದು ಎಂ.ಬಿ. ಪಾಟೀಲ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಅಗತ್ಯ ಬಿದ್ದರೆ ಮಾತನಾಡುತ್ತೇನೆ. ಸದ್ಯಕ್ಕೆ ಆ ವಿಚಾರವಿಲ್ಲ. ಆದ್ಯಾಗ್ಯೂ ಯಡಿಯೂರಪ್ಪನವರು ನಮ್ಮ ಸಮಾಜದ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳು. ಚುನಾವಣೆ ನಂತರ ಆ ಸಂದರ್ಭ ಬಂದಾಗ ಈ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.