Infographics: ಬದಲಾದ ವೇಳಾಪಟ್ಟಿ, ಚುನಾವಣೆ ಎಲ್ಲಿ? ಯಾವಾಗ?
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆ, ಅನರ್ಹತೆಯಿಂದ ತೆರವಾಗಿದ್ದ 17 ವಿಧಾನಸಭೆ ಕ್ಷೇತ್ರದಲ್ಲಿ 15 ಕ್ಷೇತ್ರಕ್ಕೆ ಚುನಾವಣೆ ದಿನಾಂಕವನ್ನು ಮತ್ತೊಮ್ಮೆ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಹೊಸ ವೇಳಾಪಟ್ಟಿಯಂತೆ ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿ 11ರ ಒಳಗೆ ಫಲಿತಾಂಶ ಪ್ರಕಟವಾಗಲಿದೆ.
ಚುನಾವಣಾ ಆಯೋಗವು ಸೆ. 2ರಂದು ನೀಡಿದ ಪ್ರಕಟಣೆಯಂತೆ ಅ. 21ರಂದು ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳ ಚುನಾವಣೆಯ ಜತೆಗೆ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದು, ಅ.24ರಂದು ಫಲಿತಾಂಶ ಪ್ರಕಟವಾಗಬೇಕಿತ್ತು. ಆದರೆ ಶಾಸಕರ ಅನರ್ಹತೆ ಕುರಿತಂತೆ ಸುಪ್ರೀಂಕೋರ್ಟಿನಲ್ಲಿ ವಿಚಾರಣೆ ನಡೆಸಿದ ನ್ಯಾಯಪೀಠವು ಚುನಾವಣೆಯನ್ನು ಮುಂದೂಡುವಂತೆ ಸೂಚನೆ ನೀಡಿದೆ ಜೊತೆಗೆ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.
ನವೆಂಬರ್ 11 ಕ್ಕೆ ಅಧಿಸೂಚನೆ ಪ್ರಕಟವಾಗಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನವೆಂಬರ್ 21 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಡಿಸೆಂಬರ್ 11ರೊಳಗೆ ಚುನಾವಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಕೆಆರ್ ಪುರ, ಹುಣಸೂರು, ಯಲ್ಲಾಪುರ, ಕೆಆರ್ ಪೇಟೆ, ಮಹಾಲಕ್ಷ್ಮೀ ಲೇಔಟ್, ಹೊಸಕೋಟೆ, ಶಿವಾಜಿನಗರ, ವಿಜಯನಗರ, ಯಶವಂತಪುರ, ರಾಣೆಬೆನ್ನೂರು, ಹಿರೇಕೆರೂರು, ಗೋಕಾಕ್, ಅಥಣಿ, ಕಾಗವಾಡ, ಚಿಕ್ಕಬಳ್ಳಾಪುರ ಈ ಎಲ್ಲಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಕರ್ನಾಟಕದಲ್ಲಿ ಆರ್.ಆರ್.ನಗರ ಮತ್ತು ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿಲ್ಲ. ನ್ಯಾಯಾಲಯದ ತಡೆಯಾಜ್ಞೆ ಇರುವ ಕಾರಣ ಈ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿಲ್ಲ.