ಸಚಿತ್ರ : 3 ಲೋಕಸಭೆ, 2 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ
ನವದೆಹಲಿ, ಅಕ್ಟೋಬರ್ 07: ಕರ್ನಾಟಕದ 3 ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣಾ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶಿಕಾರಿಪುರದ ಶಾಸಕರಾಗಿ ಆಯ್ಕೆಯಾದ ಬಳಿಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನ ರಾಜೀನಾಮೆ ನೀಡಿದರು. ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗಕ್ಕೆ ಚುನಾವಣೆ ನಡೆಸಬೇಕಿದೆ.
ಇದೇ ರೀತಿ ಮೊಳಕಾಲ್ಮೂರು ಹಾಗೂ ಬಾದಾಮಿಯಿಂದ ವಿಧಾನಸಭೆ ಸ್ಪರ್ಧಿಸಿದ್ದ ಶಾಸಕ ಶ್ರೀರಾಮುಲು ಅವರು ಮೊಳಕಾಲ್ಮೂರಿನಲ್ಲಿ ಜಯಗಳಿಸಿ ಶಾಸಕರಾದರು. ಬಳ್ಳಾರಿಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇವರ ರಾಜೀನಾಮೆಯಿಂದ ತೆರವಾಗಿರುವ ಬಳ್ಳಾರಿಗೆ ಉಪ ಚುನಾವಣೆ ನಡೆಯಲಿದೆ.

ಮೇಲುಕೋಟೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ ಸಚಿವರಾಗಿರುವ ಸಿ.ಎಸ್. ಪುಟ್ಟರಾಜು ಅವರು ಮಂಡ್ಯ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದದರೆ. ಇವರ ರಾಜೀನಾಮೆಯಿಂದ ತೆರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದೆ.
ವಿಧಾನಸಭೆ ಉಪ ಚುನಾವಣೆ 2018: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ಹಾಗೂ ರಾಮನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡು ರಾಮನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿದ್ದು ನಾಮಗೌಡ ಅವರ ನಿಧನದಿಂದ ತೆರವಾಗಿರುವ ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಕ್ಕೂ ನವೆಂಬರ್ 03 ರಂದು ಮುಹೂರ್ತ ನಿಗದಿಯಾಗಿದೆ. ಎಲ್ಲಾ ಕ್ಷೇತ್ರಗಳ ಮತ ಎಣಿಕೆ ನವೆಂಬರ್ 6 ರಂದು ನಡೆಯಲಿದೆ.












Click it and Unblock the Notifications