ಕರ್ನಾಟಕ ಹವಾಮಾನ ವರದಿ: ಮಲೆನಾಡು, ಕರಾವಳಿಯಲ್ಲಿ ಮಳೆ
ಬೆಂಗಳೂರು, ಜೂನ್ 19: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯ ಕರಾವಳಿ, ಮಲೆನಾಡು ಭಾಗಗಳು ಸೇರಿದಂತೆ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ.
ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಧಗೆ ಹೋಗಿ ತಂಪಾದ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಕಳೆದ ಒಂದು ವಾರದಿಂದ ಬಿಡದೇ ಮಳೆಯಾಗುತ್ತಿದೆ. ಇದರಿಂದ ಅನೇಕ ಕಡೆ ಗುಡ್ಡ ಕುಸಿದಿದ್ದು, ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಸಂಪರ್ಕವಿಲ್ಲದೆ ಜನರು ಪರದಾಡುವಂತಾಗಿದೆ.
ಳೆದ ನಾಲ್ಕು ದಿನಗಳಿಂದ ಸತತ ಮಳೆಯಿಂದಾಗಿ ಬಣಕಲ್, ಕೊಟ್ಟಿಗೆಹಾರ, ಬಾಲೂರು ಮತ್ತು ಚಾರ್ಮಾಡಿ ಘಾಟಿಗಳ ಸುತ್ತಮುತ್ತ 39.58 ಸೆಂಟಿ ಮೀಟರ್ ಮಳೆಯಾಗಿದೆ.
ಬಾಲೂರು, ಬಣಕಲ್, ದೇವಗನೂಲ್, ಜರ್ಗಲ್ ಮತ್ತು ಚಕಮಕಿ ಸುತ್ತಮುತ್ತ ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಇಲ್ಲದಾಗಿದೆ. ಪರೀಕ್ಷೆಗೆ ತಯಾರಾಗುತ್ತಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗಿದೆ. ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದಾಗಿ ಆನ್ ಲೈನ್ ತರಗತಿಗಳಿಗೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ.
ಮಹಾರಾಷ್ಟ್ರದ ಅಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವುದರಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗುತ್ತದೆ. ಮಾನ್ಸೂನ್ ಸನ್ನದ್ಧತೆ ಮತ್ತು ತೆಗೆದುಕೊಳ್ಳಬೇಕಾದ ತಡೆಗಟ್ಟುವ ಕ್ರಮಗಳ ಕುರಿತು ಇಂದು ಮುಖ್ಯಮಂತ್ರಿಗಳು 20 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಲಿದ್ದಾರೆ.
ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ.
cಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.