Infographics: ಕರ್ನಾಟಕದಲ್ಲಿ ಜುಲೈ 20ರವರೆಗೂ ಮಳೆ ಆರ್ಭಟ
ಬೆಂಗಳೂರು, ಜುಲೈ 19: ಕರ್ನಾಟಕದ ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಅತಿಭಾರಿ ಮಳೆಯಾಗಿದೆ. ಮುಂದಿನ ಜುಲೈ 20ರವರೆಗೂ ರಾಜ್ಯದಲ್ಲಿ ಮಳೆ ಹೆಚ್ಚಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಮಳೆಯ ಕೋಪಕ್ಕೆ ಸಿಲಿಕಾನ್ ಸಿಟಿ ಜನರು ಕೂಡ ತತ್ತರಿಸಿ ಹೋಗಿದ್ದಾರೆ. ಹನಿ ಹನಿ ಮಳೆಯ ಹನಿಯ ಮಧ್ಯೆ ತಣ್ಣಗೆ ಬೀಸುವ ಗಾಳಿಯು ಜನರನ್ನು ಮನೆಗಳಿಂದ ಹೊರ ಬಾರದಂತೆ ಮಾಡಿ ಬಿಟ್ಟಿದೆ. ಮಂಗಳವಾರ ಬೆಳಗ್ಗೆಯಿಂದಲೂ ನಗರದಲ್ಲಿ ಮೋಡ ಕವಿದ ವಾತಾವರಣವಿದೆ. ಆಗಾಗ ಮಳೆ ಸುರಿಯುತ್ತಿದ್ದು, ಗರಿಷ್ಠ ತಾಪಮಾನ ಪ್ರಮಾಣ 27 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಆಗಿದೆ. ಮುಂದಿನ 48 ಗಂಟೆಗಳವರೆಗೂ ಬೆಂಗಳೂರಿನಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರುನಾಡಿನಲ್ಲಿ ಜುಲೈ 20ರವರೆಗೂ ವರುಣನದ್ದೇ ಖೇಲ್
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿದೆ. ಈ ಹಿನ್ನೆಲೆ ಕರಾವಳಿ ಬಹುತೇಕ ಕಡೆ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಜುಲೈ 20ರವರೆಗೂ ಮಳೆ ಮುಂದುವರಿಯಲಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ರೀತಿಯ ಗಮನಾರ್ಹ ಬದಲಾವಣೆಗಳಿಲ್ಲ ಎಂದು ಭಾರತೀಯ ಹವಾಮಾನ (IMD) ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿಯಿಂದ ಅತಿಭಾರಿ ಮಳೆಯಾಗುವ ನಿರೀಕ್ಷೆಯಿದೆ. ಒಂದೆರೆಡು ಕಡೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಹೊರತಾಗಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಒಂದೆರೆಡು ಕೆಡಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಕರಾವಳಿ ತೀರ ಮಂಗಳೂರಿನಿಂದ ಕಾರವಾರದವರೆಗೂ ಜುಲೈ 20ರ ರಾತ್ರಿ 11.30ರ ತನಕ 3.0 ರಿಂದ 3.4 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಏಳುವ ನಿರೀಕ್ಷೆಯಿದೆ. ಈ ಅಲೆಗಳ ಪ್ರಸ್ತುತ ವೇಗ 37 ರಿಂದ 62 ಕಿಲೋ ಮೀಟರ್ ಆಗಿದೆ. ಇದರ ಜೊತೆಗೆ ಕರಾವಳಿಯಲ್ಲಿ ಬಿರುಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ಆಗಿದ್ದು, ಅದು 60 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 64ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 34 ಕಿ.ಮೀ ಆಗಿದೆ. ಬಾಗಲಕೋಟೆ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 62ರಷ್ಟು ತೇವಾಂಶ, ಮಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 83ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 66ರಷ್ಟು ತೇವಾಂಶ ಇದೆ. ಮೈಸೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 61ರಷ್ಟು ತೇವಾಂಶ, ಬಳ್ಳಾರಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 52ರಷ್ಟು ತೇವಾಂಶ ದಾಖಲಾಗಿದೆ. ರಾಯಚೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 51ರಷ್ಟು ತೇವಾಂಶ, ಚಿತ್ರದುರ್ಗ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 70ರಷ್ಟು ತೇವಾಂಶ, ಕಲಬುರಗಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 56ರಷ್ಟು ತೇವಾಂಶ, ಚಿಕ್ಕಮಗಳೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಶೇ. 59ರಷ್ಟು ತೇವಾಂಶ ದಾಖಲಾಗಿದೆ.