ಕರ್ನಾಟಕ ತಾಪಮಾನ: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು ಜೋರು?
ಕರ್ನಾಟಕದಲ್ಲಿ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳು ಸೇರಿದಂತೆ ಒಟ್ಟು 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಏಪ್ರಿಲ್ 8 ರಿಂದ 12ರ ತನಕ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸತತವಾಗಿ ಮಳೆಯಾಗುವ ಲಕ್ಷಣಗಳಿವೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 19.5 ಮಿಮೀ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪುದುವೆಟ್ಟು ಎಂಬಲ್ಲಿ ದಾಖಲಾಗಿದೆ.
ಆದರೆ, ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ
ಎಲ್ಲೆಲ್ಲಿ ಮಳೆ ಸಾಧ್ಯತೆ?
ಮಳೆ ಮುನ್ಸೂಚನೆ: ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ಮೈಸೂರು ಮತ್ತ ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 11ರಿಂದ ಎರಡು ದಿನಗಳ ಕಾಲ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.
ಗರಿಷ್ಠ ಹಾಗೂ ಕನಿಷ್ಠ ತಾಪಮಾನ
ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದೆಲ್ಲೆಡೆ ಬಹುತೇಕ ಸರಾಸರಿ 24 ರಿಂದ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಯಾದಗಿರಿಯಲ್ಲಿ ಕಳೆದ 24 ಗಂಟೆಗಳಲ್ಲಿ 47 ಮಿಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.
ರಾಜ್ಯದ ಹಲವೆಡೆ ಒಣಹವೆ
ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಮಾರ್ಚ್ ತಿಂಗಳ ಕೊನೆಯಲ್ಲಿ ಸತತವಾಗಿ ನಾಲ್ಕನೇ ಬಾರಿ 35 ಪ್ಲಸ್ ಗರಿಷ್ಠ ತಾಪಮಾನ ದಾಖಲಾಗಿತ್ತು. ಏಪ್ರಿಲ್ ಮೊದಲ ವಾರದಲ್ಲೂ ಉಷ್ಣಾಂಶ ಅಧಿಕವಾಗಿದೆ, ಏಪ್ರಿಲ್ 8ರ ನಂತರ ಕೆಲವೆಡೆ ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಸುರಿಯಲಿದೆ. ವಿಮಾನ ನಿಲ್ದಾಣ ಪ್ರದೇಶದಲ್ಲಿ ಬೆಳಗ್ಗೆ ವೇಳೆ ಮಾತ್ರ ಕೆಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ.