504 ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ
ಬೆಂಗಳೂರು, ಡಿಸೆಂಬರ್ 15; ಕರ್ನಾಟಕ ನಾಗರಿಕ ಸೇವೆ (ಕೆಎಎಸ್)ಗೆ ಸೇರಬೇಕು ಎಂದು ಹಲವರು ಆಕಾಂಕ್ಷೆ ಹೊಂದಿರುತ್ತಾರೆ. ರಾಜ್ಯ ಸರ್ಕಾರ ಕಾಲ ಕಾಲಕ್ಕೆ ಕೆಎಎಸ್ ಅಧಿಕಾರಿಗಳ ನೇಮಕಾತಿ ಮಾಡುತ್ತದೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್ನಲ್ಲಿ ನಿರಾಣಿ ಹಣಮಂತ್ ರುದ್ರಪ್ಪ ಕೆಎಎಸ್ ಅಧಿಕಾರಿಗಳ ನೇಮಕಾತಿ ಕುರಿತು ಪ್ರಶ್ನೆ ಮಾಡಿದ್ದಾರೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಆಡಳಿತ ಇಲಾಖೆಯು ಭರ್ತಿ ಮಾಡಿಕೊಳ್ಳಲು ಕೋರಲಾದ ಕೆಎಎಸ್ ಹುದ್ದೆಗಳ ಸಂಖ್ಯೆ 656 ಆಗಿದೆ. ಆರ್ಥಿಕ ಇಲಾಖೆಯು ಭರ್ತಿ ಮಾಡಲು ಒಪ್ಪಿಗೆ ನೀಡಿದ ಕೆಎಎಸ್ ಹುದ್ದೆಗಳ ಸಂಖ್ಯೆ 504 ಎಂದು ಮುಖ್ಯಮಂತ್ರಿಗಳು ಉತ್ತರ ಕೊಟ್ಟಿದ್ದಾರೆ.
ಸದಸ್ಯರು ರಾಜ್ಯದ ಯಾವ-ಯಾವ ಇಲಾಖೆಗಳಿಂದ ಖಾಲಿ ಇರುವ ಕೆ.ಎ.ಎಸ್ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಸಲ್ಲಿಕೆಯಾಗಿವೆ? ಎಂದು ಪ್ರಶ್ನಿಸಿದ್ದರು.
ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಕಾರಾಗೃಹ ಇಲಾಖೆ, ವಾಣಿಜ್ಯ ತೆರಿಗೆಗಳ ಇಲಾಖೆ, ಖಜಾನೆ ಇಲಾಖೆ, ಅಬಕಾರಿ ಇಲಾಖೆ, ಸಹಕಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳಿಂದ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳು ಸಲ್ಲಿಕೆಯಾಗಿರುತ್ತವೆ ಎಂದು ಹೇಳಿದ್ದಾರೆ.
ಸದಸ್ಯರು ಎಷ್ಟು ಕೆಎಎಸ್ ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಅವುಗಳಲ್ಲಿ ಎಷ್ಟು ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿದೆ? ಎಂದು ಪ್ರಶ್ನಿಸಿದ್ದರು.
ಉತ್ತರದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿ ನೀಡಿದೆ. ಅವರ ವಿವರಗಳು ಹೀಗಿವೆ ಎಂದು ಉತ್ತರಿಸಿದ್ದಾರೆ.
ಯಾವ-ಯಾವ ಇಲಾಖೆ, ಹುದ್ದೆಗಳು; ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 85, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 55, ಕಂದಾಯ ಇಲಾಖೆ 76, ಪೊಲೀಸ್ ಇಲಾಖೆ 10, ಕಾರಾಗೃಹ ಇಲಾಖೆ 3, ವಾಣಿಜ್ಯ ತೆರಿಗೆಗಳ ಇಲಾಖೆ 140, ಖಜಾನೆ ಇಲಾಖೆ 48 ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಿದೆ.
ಅಬಕಾರಿ ಇಲಾಖೆಯಲ್ಲಿ 10, ಸಹಕಾರ ಇಲಾಖೆ 21, ಸಮಾಜ ಕಲ್ಯಾಣ ಇಲಾಖೆ 27, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 7, ಕಾರ್ಮಿಕ ಇಲಾಖೆ 4, ಕೌಶಲ್ಯಾಭಿವೃದ್ಧಿ ಇಲಾಖೆ 3, ಪ್ರವಾಸೋದ್ಯಮ ಇಲಾಖೆ 2, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ 9 ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ 4 ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ಸಿಕ್ಕಿದೆ.
ಗುರುವಾರದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶಾಸಕರು ಭಾಗಿಯಾಗಿ ಹಲವಾರು ಸಲಹೆಗಳನ್ನು ನೀಡಿದರು. ಆಳಂದ ಶಾಸಕ ಬಿ. ಆರ್. ಪಾಟೀಲ್ ಮಾತನಾಡಿ ಉತ್ತರ ಕರ್ನಾಟಕದ ಭಾಗದ ಖಾಲಿ ಹುದ್ದೆಗಳ ಬಗ್ಗೆ ಗಮನ ಸೆಳೆದರು.
"ಉತ್ತರ ಕರ್ನಾಟಕವು ರಾಜ್ಯದ ರಾಜಧಾನಿಯಿಂದ ದೂರ ಇರುವುದರಿಂದ ಶಾಸಕರು ಸೇರಿದಂತೆ ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ತೆರಳಲು ಸಾಧ್ಯವಾಗದೇ ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ" ಎಂದರು.
"ಬೆಂಗಳೂರಿನಲ್ಲಿ ಸಚಿವಾಲಯ ಮತ್ತು ನಿರ್ದೇಶನಾಲಯಗಳಲ್ಲಿ ನಮ್ಮ ಅಧಿಕಾರಿಗಳು, ಸಿಬ್ಬಂದಿ ಇಲ್ಲದ ಕಾರಣ ನಮಗೆ ಸೌಲಭ್ಯಗಳು ದೊರೆಯುತ್ತಿಲ್ಲ. ಹೀಗಾಗಿ ಈ ಎರಡು ಕಚೇರಿಗಳಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಭಾಗದ ಸಿಬ್ಬಂದಿ/ ಅಧಿಕಾರಿಗಳನ್ನು ಮೀಸಲು ಸೌಲಭ್ಯದ ಮೇಲೆ ನೇಮಕಾತಿ ಮಾಡಬೇಕು" ಎಂದು ಸಲಹೆ ನೀಡಿದರು.












Click it and Unblock the Notifications