ಕೊಪ್ಪಳ; ನರೇಗಾ ಯೋಜನೆಯಡಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, ಜನವರಿ 03; ಕೊಪ್ಪಳ ಜಿಲ್ಲಾ ಪಂಚಾಯತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ನೆರವು ನೀಡಲು ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದಲ್ಲಿ ಮಾನವ ಸಂಪನ್ಮೂಲ ಸಂಸ್ಥೆಗಳ ಮೂಲಕ ಪಡೆಯಲಾಗುತ್ತಿದೆ.
ತಾಂತ್ರಿಕ ಸಹಾಯಕರ ಹುದ್ದೆಗಳಾದ ಕೃಷಿ-5 ಅರಣ್ಯ-7 ಮತ್ತು ರೇಷ್ಮೆ 1 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಎನ್ಐಸಿ ಜಿಲ್ಲಾ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜನವರಿ 9 ಕೊನೆಯ ದಿನವಾಗಿದ್ದು, ಹುದ್ದೆಗಳ ವಿವರ ವಿದ್ಯಾರ್ಹತೆ ಹಾಗೂ ಅನುಭವ, ವಯೋಮಿತಿ, ಮಾಸಿಕ ಸಂಭಾವನೆ, ಹೆಚ್ಚಿನ ವಿವರಗಳಿಗಾಗಿ ಎನ್ಐಸಿ ಜಿಲ್ಲಾ ವೆಬ್ಸೈಟ್ www.koppal.nic.in ವೆಬ್ಸೈಟ್ಗೆ ಭೇಟಿ ನೀಡಬಹುದು.
ಕೊಪ್ಪಳ ಜಿಲ್ಲಾ ಪಂಚಾಯಿತಿ ಕಾರ್ಯಾಲಯವನ್ನು ಸಹ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಜನವರಿ 12 ರಂದು ಜಿಲ್ಲಾ ಪಂಚಾಯತಿ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಅರ್ಜಿಗಳು ಸಲ್ಲಿಕೆಯಾದ ಬಳಿಕ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಈ ತಾತ್ಕಾಲಿಕ ಮೆರಿಟ್ ಪಟ್ಟಿಗಳಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸುವ ಜ.18 ರಿಂದ ಜ. 24 ರವರೆಗೆ (ತದನಂತರದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ) ಅವಕಾಶವಿದೆ.
ಆಕ್ಷೇಪಣೆಗಳನ್ನು ಪರಿಶೀಲನೆ ಮಾಡಿ ಅಂತಿಮ ಆಯ್ಕೆ ಪಟ್ಟಿಯನ್ನು ಜನವರಿ 30ರಂದು ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ನೇರ ಸಂದರ್ಶನ; ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲಿಲ್ಲಿ ಎರಡು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಸಂಖ್ಯಾಶಾಸ್ತ್ರ ವಿಷಯದಲ್ಲಿ ಸ್ನಾತಕೋತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13ರಂದು ಬೆಳಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ವೆಬ್ಸೈಟ್ www.uasd.edu ಕ್ಕೆ ಭೇಟಿ ನೀಡಬಹುದು ಎಂದು ಕೃಷಿ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.












Click it and Unblock the Notifications