7,100 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ?
ಬೆಂಗಳೂರು, ಜನವರಿ 25: ಕರ್ನಾಟಕದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಶೀಘ್ರವೇ ಸಿಹಿಸುದ್ದಿ ಸಿಗಲಿದೆ. 7,100 ಹುದ್ದೆಗಳ ನೇಮಕಾತಿ ಪ್ರಸ್ತಾವನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪದವಿ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯಭಾರಕ್ಕೆ ಅನುಗುಣವಾಗಿ ಹೆಚ್ಚುವರಿಯಾಗಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಮಾಡಲು ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಕೆ ಮಾಡಿದೆ.

ರಾಜ್ಯದಲ್ಲಿ ಈಗಾಗಲೇ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಪ್ರಗತಿಯಲ್ಲಿದೆ. ಇದರಿಂದಾಗಿ ವಾರ್ಷಿಕ 85 ಕೋಟಿ ರೂ. ವೇತನ ನೀಡಬೇಕಾಗುತ್ತದೆ. ಈಗ 7100 ಹುದ್ದೆಗಳ ನೇಮಕಾತಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಒಪ್ಪಿಗೆ ಸಿಗಲಿದೆಯೇ? ಎಂದು ಕಾದು ನೋಡಬೇಕಿದೆ.
ಅತಿಥಿ ಉಪನ್ಯಾಸಕರ ಅವಲಂಬನೆ; 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 102 ಪಾಲಿಟೆಕ್ನಿಕ್ ಕಾಲೇಜು ಮತ್ತು 16 ಇಂಜನಿಯರಿಂಗ್ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಕಾರ್ಯಭಾಗಕ್ಕೆ ಅನುಗುಣವಾಗಿ ಖಾಯಂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು ಇಲ್ಲ.
ಆದ್ದರಿಂದ ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದೆ. ಪದವಿ ಕಾಲೇಜುಗಳಿಗೆ 5,800 ಹುದ್ದೆ ಸೇರಿದಂತೆ ಒಟ್ಟು 7100 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಇದನ್ನು ಒಪ್ಪಿಗೆಗಾಗಿ ಆರ್ಥಿಕ ಇಲಾಖೆಗೆ ಸಲ್ಲಿಕೆ ಮಾಡಲಾಗಿದೆ.
ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿಯೇ ಇಲಾಖೆ ಹೊಸದಾಗಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ವೇತನ ಶ್ರೇಣಿ 52,000 ದಿಂದ 1.28 ಲಕ್ಷ ತನಕ ಇದೆ. ಹೊಸದಾಗಿ 7100 ಹುದ್ದೆಗಳ ನೇಮಕಾತಿ ನಡೆದರೆ ವಾರ್ಷಿಕ ವೇತನ ಪಾವತಿಯ ಹೆಚ್ಚುವರಿ ಹೊಣೆ ಸರ್ಕಾರದ ಮೇಲೆ ಬೀಳಲಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪ್ರಯತ್ನ ನಡೆಸಿರುವ ಕರ್ನಾಟಕ ಸರ್ಕಾರ ಇಷ್ಟು ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡುವ ಸಾಧ್ಯತೆ ಕಡಿಮೆ ಇದೆ.
ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಡಾ. ಎಂ. ಸಿ. ಸುಧಾಕರ್ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯ ಅಗತ್ಯಗಳನ್ನು ವಿವರಣೆ ನೀಡಿದ್ದಾರೆ. ಫೆಬ್ರವರಿ 16ರಂದು ಬಜೆಟ್ ಮಂಡನೆ ಮಾಡಲಿರುವ ಸಿದ್ದರಾಮಯ್ಯ ಈ ಕುರಿತು ಘೋಷಣೆ ಮಾಡಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.
ಇಲಾಖೆಯ ಮಾಹಿತಿಯಂತೆ 430 ಪದವಿ ಕಾಲೇಜುಗಳಿಗೆ 5,800, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ 1300 ಬೋಧಕ ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಮುಖ್ಯಮಂತ್ರಿಗಳ ಒಪ್ಪಿಗೆ ಬಾಕಿ ಇದೆ.












Click it and Unblock the Notifications