ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿಗೆ ಕಲಬುರಗಿಯಲ್ಲಿ ಕೇಂದ್ರ ಆರಂಭ
ಕಲಬುರಗಿ, ಜನವರಿ 07: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೀಘ್ರವೇ ಸಿಹಿಸುದ್ದಿ ಸಿಗಲಿದೆ. ಪರೀಕ್ಷಾ ಪೂರ್ವ ತರಬೇತಿ ನೀಡುವ ಕೇಂದ್ರ ಕಲಬುರಗಿ ನಗರದಲ್ಲಿ ಆರಂಭವಾಗಲಿದೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಸಚಿವರು ಮಾತನಾಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, "ಕಲ್ಯಾಣ ಕರ್ನಾಟಕ ಭಾಗದ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ ನೀಡಲು ಕಲಬುರಗಿ ನಗರದ ವಾಜಪೇಯಿ ಬಡಾವಣೆಯಲ್ಲಿ ತರಬೇತಿ ಕೇಂದ್ರ ಆರಂಭವಾಗಲಿದೆ" ಎಂದರು.
"ಸಮಾಜ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ನೈಸ್ ಅಕಾಡೆಮಿ ಸ್ಥಾಪಿಸಲಾಗಿದೆ, ಶೀಘ್ರವೆ ತರಬೇತಿ ಕೇಂದ್ರ ಆರಂಭವಾಗಲಿದೆ. ಇದಕ್ಕೆ 10 ಕೋಟಿ ರೂ. ಅನುದಾನ ನೀಡಲಾಗುತ್ತದೆ" ಎಂದು ಸಚಿವರು ಮಾಹಿತಿ ನೀಡಿದರು.
"ರಾಜ್ಯದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ-ಖಾಸಗಿ ಸಂಸ್ಥೆ, ಕೈಗಾರಿಕೆಯಲ್ಲಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ತಮ್ಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರ ಜಂಟಿ ನೇತೃತ್ವದಲ್ಲಿ ಸ್ಕಿಲ್ ಅಡ್ವಾನ್ಸಡ್ ಕಮಿಟಿ ರಚಿಸಲಾಗಿದೆ" ಎಂದರು.
"ಫೆಬ್ರವರಿ ಮೊದಲ ವಾರದಲ್ಲಿ ಸಮಿತಿ ನೀಲಿ ನಕ್ಷೆ ಸಿದ್ದಪಡಿಸಲಿದೆ. ತದನಂತರ ನೀಲಿ ನಕ್ಷೆ ಆಧಾರದ ಮೇಲೆ ಇಡೀ ವಿಶ್ವಕ್ಕೆ ಮಾದರಿಯಾಗುವಂತಹ ಮಾನವ ಸಂಪನ್ಮೂಲ ಪೂರೈಕೆಗೆ ಯೋಜನೆ ರೂಪಿಸಲಾಗುವುದು" ಎಂದು ಸಚಿವರು ವಿವರಣೆ ನೀಡಿದರು.
"ನಮ್ಮ ಸರ್ಕಾರ ಯುವಕರಿಗೆ ಉದ್ಯೋಗ ನೀಡುವತ್ತ ಹೆಚ್ಚಿನ ಗಮನ ಹರಿಸಿದೆ. ಜನವರಿ ಅಂತ್ಯಕ್ಕೆ ಅಥವಾ ಫೆಬ್ರವರಿ ಮೊದಲನೇ ವಾರದಲ್ಲಿ ರಾಜಧಾನಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ತದನಂತರ ವಿಭಾಗ, ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು. ಹಿಂದಿಗಿಂತ ವಿಭಿನ್ನ ಉದ್ಯೋಗ ಮೇಳ ಇದಾಗಿರಲಿದೆ" ಎಂದು ಸಚಿವರು ಹೇಳಿದರು.
ಯುವನಿಧಿ ಯೋಜನೆ; "ಯುಜನರ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯುವ ನಿಧಿ ಯೋಜನೆ ಕೇವಲ ನಿರುದ್ಯೋಗಿಗಳಿಗೆ ಹಣ ನೀಡುವುದಷ್ಟೆ ಅಲ್ಲ, ಬದಲಾಗಿ ಅವರಿಗೆ ಉದ್ಯಮಶೀಲತೆ ಕಲ್ಪಿಸಿ ಉದ್ಯೋಗ ನೀಡುವುದು ನಮ್ಮ ಆದ್ಯತೆಯಾಗಿದೆ" ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
"ಎಲ್ಲಾ ಅರ್ಹ ಫಲಾನುಭವಿಗಳು ಹೆಸರು ನೋಂದಣಿ ಮಾಡಿ ಲಾಭ ಪಡೆಯಬೇಕು. ಮುಖ್ಯಮಂತ್ರಿ ಸಿದ್ದರಾಮಯ ಡಿ.26ಕ್ಕೆ ಈ ಯೋಜನೆಯಡಿ ನೋಂದಣಿಗೆ ಚಾಲನೆ ನೀಡಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳ ವರೆಗೆ ಯಾವುದೇ ಉದ್ಯೋಗ ಪಡೆಯದ, ಸ್ವಯಂ ಉದ್ಯೋಗಿಯಾಗಿರದ, ವ್ಯಾಸಂಗ ಮುಂದುವರಿಸದವರಿಗೆ ಹಾಗೂ ಕನಿಷ್ಠ 6 ವರ್ಷ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದವರಿಗೆ ಕ್ರಮವಾಗಿ 3,000 ರೂ. ಮತ್ತು 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತದೆ" ಎಂದರು.











Click it and Unblock the Notifications