KPTCL Recruitment: ಕೆಪಿಟಿಸಿಎಲ್ ನೇಮಕಾತಿಯಲ್ಲಿ ಆಗಲಿದೆ ಬದಲಾವಣೆ?
ಬೆಂಗಳೂರು, ಅಕ್ಟೋಬರ್ 20: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ಮ್ಯಾನ್ ಹುದ್ದೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿನ 2,268 ಕಿರಿಯ ಪವರ್ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 20/11/2024ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಈ ನೇಮಕಾತಿಗೆ ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಕೆಪಿಟಿಸಿಎಲ್ನ ಈ ನೇಮಕಾತಿ ಕುರಿತು ಈಗ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಅವರಿಗೆ ಮನವಿಯೊಂದು ಸಲ್ಲಿಕೆಯಾಗಿದೆ. ಆಲ್ ಕರ್ನಾಟಕ ಸ್ಟೇಟ್ ಸ್ಟುಡೆಂಟ್ಸ್ ಅಸೋಶಿಯೇಷನ್ (ಆರ್) ಈ ಮನವಿ ಸಲ್ಲಿಕೆ ಮಾಡಿದೆ.

ಮನವಿಯಲ್ಲಿ ಏನಿದೆ?; ಈ ಮನವಿಯು ಕೆಪಿಟಿಸಿಎಲ್ ಮತ್ತು ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ 2,975 ಹುದ್ದೆಗಳಿಗೆ ಎಸ್ಎಸ್ಎಲ್ಸಿ ಅಂಕಗಳು ಮತ್ತು ದೈಹಿಕ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ನೇರ ನೇಮಕಾತಿ ಮಾಡಿಕೊಳ್ಳಬೇಕೆಂಬ ಮನವಿ ಎಂಬ ವಿಷಯ ಒಳಗೊಂಡಿದೆ.
ಮನವಿ ಪತ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ 2,975 ಹುದ್ದೆಗಳನ್ನು ಎಸ್ಎಸ್ಎಲ್ಸಿ ಅಂಕಗಳು ಮತ್ತು ದೈಹಿಕ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 21ರಿಂದ ನವಂಬರ್ 20ರ ವರೆಗೆ ದಿನಾಂಕವನ್ನು ನಿಗದಿಗೊಳಿಸಲಾಗಿದೆ. ಈ ರೀತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೊರತುಪಡಿಸಿ ಅಂಕಗಳ ಆಧಾರದ ನೇಮಕಾತಿಯು ಎಲ್ಲಾ ಹುದ್ದೆ ಆಕಾಂಕ್ಷಿಗಳಿಗೂ ನ್ಯಾಯ ಒದಗಿಸುವ ಕ್ರಮವಲ್ಲ ಎಂಬುದನ್ನು ನಿಮ್ಮ ಗಮನಕ್ಕೆ ತರಲಾಗುತ್ತಿದೆ ಎಂದು ಹೇಳಿದೆ.
ಪ್ರಸ್ತುತ ಕಾಲಘಟ್ಟದಲ್ಲಿ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಇಂತಹ ಸಂದರ್ಭದಲ್ಲಿ ನ್ಯಾಯ ಸಮ್ಮತವಲ್ಲದ ಮತ್ತು ಪ್ರಾಮಾಣಿಕವಲ್ಲದ ನೇಮಕಾತಿ ಪ್ರಕ್ರಿಯೆಯು ನಿರುದ್ಯೋಗಿಗಳಲ್ಲಿ ಮತ್ತಷ್ಟು ಆಕ್ರೋಶವನ್ನು ಹೆಚ್ಚಿಸುತ್ತದೆ. ಈ ರೀತಿ ಎಸ್ಎಸ್ಎಲ್ಸಿ ಅಂಕಗಳ ಆಧಾರದ ಮೇಲಿನ ನೇಮಕಾತಿ ಪ್ರಕ್ರಿಯೆಯಿಂದ ಕರೋನ ನಂತರದ ವರ್ಷಗಳಲ್ಲಿನ ಅಭ್ಯರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ.
ಏಕೆಂದರೆ, ಕರೋನ ನಂತರದ ವರ್ಷಗಳಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳೇ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಇದರಿಂದ ಕರೋನ ಪೂರ್ವ ವರ್ಷಗಳಲ್ಲಿ ಎಸ್ಎಸ್ಎಲ್ಸಿ ಮುಗಿಸಿದ ಅಭ್ಯರ್ಥಿಗಳಿಗೆ ಮತ್ತು ಈಗಾಗಲೇ ಇದೇ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ.
ನಮ್ಮ ನೆರೆಹೊರೆ ರಾಜ್ಯಗಳಲ್ಲಿಯೂ ಕೂಡ ಇದೇ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ನೇಮಕಾತಿ ಮಾಡಲಾಗುತ್ತಿದೆ. ಆದ್ದರಿಂದ ನಮ್ಮ ರಾಜ್ಯದಲ್ಲಿಯೂ ಕೂಡ ಇದೇ ನಿಯಮಗಳನ್ನು ಅಳವಡಿಸಿಕೊಳ್ಳಬೇಕೆಂದು ಮನವಿ ಮಾಡುತ್ತಿದ್ದೇವೆ.
ಈಗಾಗಲೇ, ಮಾನ್ಯ ಸಚಿವರಿಗೆ ತಿಳಿದಿರುವಂತೆ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಪಿಯುಸಿ ಅಂಕಗಳ ಆಧಾರದ ನೇಮಕಾತಿ ಪ್ರಕ್ರಿಯೆಯನ್ನು ಕೈ ಬಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ನೇಮಕಾತಿ ಮಾಡಿ ಕೊಳ್ಳಲಾಗುತ್ತಿದೆ.
ಆದ್ದರಿಂದ, ಈಗ ಕೆಪಿಟಿಸಿಎಲ್ನಿಂದ ಅಧಿಸೂಚನೆ ಹೊರಡಿಸಿರುವ ಈ ಹುದ್ದೆಗಳಿಗೂ ಕೂಡ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ನೇಮಕಾತಿ ಮಾಡಿಕೊಳ್ಳಬೇಕೆಂದು ಲಕ್ಷಾಂತರ ಹುದ್ದೆ ಆಕಾಂಕ್ಷಿಗಳ ಪರವಾಗಿ ನಮ್ಮ ಸಂಘಟನೆಯ ವತಿಯಿಂದ ನಿಮ್ಮಲ್ಲಿ ವಿನಯ ಪೂರ್ವಕ ಮನವಿಯನ್ನು ಸಲ್ಲಿಸುತ್ತಿದ್ದೇವೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.












Click it and Unblock the Notifications