KPTCL Recruitment: ಸ್ಮರ್ಧಾತ್ಮಕ ಪರೀಕ್ಷೆ ಮೂಲಕ ಕೆಪಿಟಿಸಿಎಲ್ ನೇಮಕಾತಿ?
ಬೆಂಗಳೂರು, ನವೆಂಬರ್ 17: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ಮ್ಯಾನ್ ಹುದ್ದೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿನ 2,268 ಕಿರಿಯ ಪವರ್ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಕರೆದಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಲು 20/11/2024 ಕೊನೆಯ ದಿನವಾಗಿದೆ.
ಆದರೆ ಈ ನೇಮಕಾತಿಯ ನಿಯಮಗಳಲ್ಲಿ ಬದಲಾವಣೆ ಮಾಡಬೇಕು ಎಂದು ಬೇಡಿಕೆ ಇಡಲಾಗಿದೆ. ಸದ್ಯದ ನೇಮಕಾತಿ ಅಧಿಸೂಚನೆ ಪ್ರಕಾರ ಈ ನೇಮಕಾತಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು ಎಂಬ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಆದರೆ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಾಡಬೇಕು ಎಂಬುದು ಬೇಡಿಕೆಯಾಗಿದೆ.

ಲೈನ್ಮ್ಯಾನ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಬೇಕು. ಬೇರೆ ರಾಜ್ಯಗಳಲ್ಲಿಯೂ ಸಹ ಇದೆ ರೀತಿಯಾದ ನೇಮಕಾತಿ ಪ್ರಕ್ರಿಯೆ ಇರುವುದರಿಂದ ಕರ್ನಾಟಕವೂ ಸಹ ಇದೆ ಮಾದರಿಯನ್ನು ಅನುಸರಿಸಬೇಕು. ಸ್ಪರ್ದಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆದರೆ ಸಮರ್ಥ ಹಾಗೂ ಅರ್ಹ ಅಭ್ಯರ್ಥಿಗಳ ನೇಮಕ ಆಗುತ್ತದೆ ಎಂದು ಒತ್ತಾಯಿಸಲಾಗುತ್ತಿದೆ.
ಪ್ರತಾಪ್ ಸಿಂಹ ಒತ್ತಾಯ: ಮಾಜಿ ಸಂಸದ, ಬಿಜೆಪಿ ನಾಯಕ ಪ್ರತಾಪ್ ಸಿಂಹ ಸಹ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. 'KPTCL ಲೈನ್ ಮ್ಯಾನ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ಆಯ್ಕೆ ಮಾಡಿಕೊಳ್ಳುವ ಮೂಲಕ ಸರ್ಕಾರ ಪಾರದರ್ಶಕತೆ ಪ್ರದರ್ಶಿಸಬೇಕು. ಬೇರೆ ರಾಜ್ಯಗಳಲ್ಲಿಯೂ ಸಹ ಇದೆ ರೀತಿಯಾದ ನೇಮಕಾತಿ ಪ್ರಕ್ರಿಯೆ ಇರುವುದರಿಂದ ಕರ್ನಾಟಕವೂ ಸಹ ಇದೆ ಮಾದರಿಯನ್ನು ಅನುಸರಿಸಬೇಕು' ಎಂದು ಹೇಳಿದ್ದಾರೆ.
ಮತ್ತೊಂದು ಕಡೆ ಕರ್ನಾಟಕ ಸ್ಟೇಟ್ ಸ್ಟುಡೆಂಟ್ಸ್ ಅಸೋಶಿಯೇಷನ್ (ಆರ್) ಸಹ ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಅವರಿಗೆ ಮನವಿಯನ್ನು ಸಲ್ಲಿಕೆ ಮಾಡಿದೆ.
ಕರ್ನಾಟಕ ರಾಜ್ಯ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಂಘ ಸಹ ಈ ಕುರಿತು ಸರ್ಕಾರವನ್ನು ಒತ್ತಾಯಿಸಿದೆ. ಲೈನ್ಮ್ಯಾನ್ ಮತ್ತು ಸ್ಟೇಷನ್ ಅಟೆಂಡರ್ ಹುದ್ದೆಗಳ ಭರ್ತಿಗೆ ಕನಿಷ್ಠ ವಿದ್ಯಾರ್ಹತೆಯನ್ನು ಎಸ್ಎಸ್ಎಲ್ಸಿ ಬದಲಿಗೆ ಐಟಿಐ ಶಿಕ್ಷಣವನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದೆ.
ಈ ಕುರಿತು ಸಂಘದ ರಾಜ್ಯಾಧ್ಯಕ್ಷ ಎಸ್. ಎಂ. ನೆರಬೆಂಚಿ ಮಾತನಾಡಿದ್ದು, "ಇದೀಗ ಕೆಪಿಟಿಸಿಎಲ್ನಿಂದ 2,975 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ ಎಸ್ಎಸ್ಎಲ್ಸಿ ನಿಗದಿ ಮಾಡಿರುವುದು ಸರಿಯಲ್ಲ. ವಿದ್ಯುತ್ ನಿಗಮಗಳಲ್ಲಿನ ಕೆಲಸ ಅಪಾಯಕಾರಿಯಾಗಿದ್ದು, ಐಟಿಐ ಅಭ್ಯರ್ಥಿಗಳಿಗೆ ಈ ಬಗ್ಗೆ ತರಬೇತಿ ನೀಡಲಾಗಿರುತ್ತದೆ" ಎಂದು ಹೇಳಿದರು.
"ಎಸ್ಎಸ್ಎಲ್ಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳಿಗೆ ಈ ಬಗ್ಗೆ ಯಾವುದೇ ತರಬೇತಿ ಇರುವುದಿಲ್ಲ. 2016ರಿಂದಲೂ ಎಸ್ಎಸ್ಎಲ್ಸಿಯನ್ನು ಮಾನದಂಡವನ್ನಾಗಿಸಿಕೊಂಡು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ವಿದ್ಯುತ್ ಅವಘಡಕ್ಕೆ ಸಿಲುಕಿ ಜೀವ ಕಳೆದುಕೊಂಡವರ, ಅಂಗವಿಕಲರ ಸಂಖ್ಯೆ ಹೆಚ್ಚಾಗಲು ಇದು ಕಾರಣ" ಎಂದು ತಿಳಿಸಿದರು.
"ವಿದ್ಯುತ್ ಆಧಾರಿತ ಕೆಲಸಗಳ ಬಗ್ಗೆ ಜ್ಞಾನ ಹಾಗೂ ಕೌಶಲ ಹೊಂದಿರುವ ಐಟಿಯ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕು. ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.












Click it and Unblock the Notifications