ಹಿಂದುಳಿದ ವರ್ಗಗಳ ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡಿ: ಸಿದ್ದರಾಮಯ್ಯ
ಬೆಂಗಳೂರು, ಜನವರಿ. 13 : ವಿವಿಧ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಿದ್ದು, ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಯವರು, ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರ ಗುರುತಿಸಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಆದೇಶ ಮಾಡಿದರು.
ಸಿಇಟಿ ಶುಲ್ಕ ಪಾವತಿಗೆ ಸೂಚನೆ: ಸರ್ಕಾರದ ಮಹತ್ವಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾಗಿರುವ ವಿದ್ಯಾಸಿರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ. ಪ್ರವರ್ಗ-1, 2-ಎ ವರ್ಗಕ್ಕೆ ಸೇರಿದ ಸಂಘ-ಸಂಸ್ಥೆಗಳು ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಿಗೂ ಈ ಯೋಜನೆಯನ್ನು ವಿಸ್ತರಿಸಿ ಎಂದು ತಿಳಿಸಿದರು.
ವೈದ್ಯ ಮತ್ತು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶುಲ್ಕವನ್ನು ಸಿಇಟಿಗೆ ವಿಳಂಬವಿಲ್ಲದೆ ಮರು ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
5ಲಕ್ಷ ನಿರ್ವಹಣಾ ಅನುದಾನ: ವಿವಿಧ ಸಂಘ ಸಂಸ್ಥೆಗಳು ನಡೆಸುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಕ್ಕೆ ತಲಾ ಐದು ಲಕ್ಷ ರೂ.ಗಳ ನಿರ್ವಹಣಾ ಅನುದಾನವನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಹೇಳಿದರು.
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಮುಂದಿನ ಬಜೆಟ್ ನಲ್ಲಿ ಹಣಕಾಸು ಸೌಲಭ್ಯ ಪಡೆಯಲು ಕ್ರಮ ಕೈಗೊಳ್ಳಿ.
ಇನ್ನು ಮುಂದೆ ಹಾಸ್ಟೆಲ್ಗಳಿಗೆ ಸ್ವಂತ ಕಟ್ಟಡ ನಿರ್ಮಿಸುವಾಗ ಲೈಬ್ರರಿಗೂ ಸ್ಥಳಾವಕಾಶ ಒದಗಿಸಿ. ಹಾಲಿ ಇರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಹಾಸ್ಟೆಲ್ಗಳಲ್ಲಿಯೂ ವಿದ್ಯಾರ್ಥಿಗಳಿಗೆ ಲೈಬ್ರರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
4ಸಾವಿರ ಹುದ್ದೆ ಭರ್ತಿಗೆ ಕ್ರಮ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳ ಭರ್ತಿ ಪ್ರಕ್ರಿಯೆಗೂ ಶೀಘ್ರ ಚಾಲನೆ ಕೊಡಿ. 6,500 ಹುದ್ದೆಗಳು ಖಾಲಿ ಇದ್ದು,
4 ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು. ನೇಮಕ ಸಂದರ್ಭದಲ್ಲಿ ಈಗಾಗಲೇ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಆದ್ಯತೆ ಕೊಡಿ ಎಂದರು.