ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ
ಕಲಬುರಗಿ, ಜುಲೈ 05; ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರ್ಕಾರಿ ಕೆಲಸಕ್ಕೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಶಿಕ್ಷಣ ಸಚಿವರು ಸಿಹಿಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಕಲಬುರಗಿ ಜಿಲ್ಲೆ ಅಫಜಲಪೂರ ತಾಲೂಕಿನ ದೇವಲ ಗಾಣಗಾಪೂರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, "ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆಯಿದ್ದು, ಇದನ್ನು ನಿವಾರಿಸಲು ಪ್ರಸ್ತುತ ನೇಮಕಾತಿ ಹಂತದಲ್ಲಿರುವ 15 ಸಾವಿರ ಶಿಕ್ಷಕರ ಪೈಕಿ ಕಲ್ಯಾಣ ಕರ್ನಾಟಕ ಭಾಗದಿಂದಲೇ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುತ್ತಿದೆ" ಎಂದರು.
"ಒಂದು ವೇಳೆ ಪೂರ್ಣ ಪ್ರಮಾಣದ ಸಂಖ್ಯೆಯಲ್ಲಿ ಈ ಭಾಗದ ಶಿಕ್ಷಕರು ನೇಮಕಾತಿಯಾಗದಿದ್ದಲ್ಲಿ ಮತ್ತೊಮ್ಮೆ ತರಬೇತಿ ನೀಡಿ ಬರುವ ಡಿಸೆಂಬರ್ ಒಳಗೆ ಮತ್ತೆ ಸಿಇಟಿ ಪರೀಕ್ಷೆ ನಡೆಸಲಾಗುವುದು. 371ಜೆ ಮೀಸಲಾತಿಯಡಿ ಸ್ಥಳೀಯರು ನೇಮಕಾತಿ ಆಗುವುದರಿಂದ ಪ್ರದೇಶ ಬಿಟ್ಟು ಶಿಕ್ಷಕರು ಬೇರೆಡೆ ವರ್ಗಾವಣೆ ಆಗುವುದಿಲ್ಲ" ಎಂದು ತಿಳಿಸಿದರು.
"ರಾಜ್ಯದ್ಯಾಂತ 48 ಸಾವಿರ ಸರ್ಕಾರಿ ಶಾಲೆಗಳನ್ನು ನಡೆಸಲಾಗುತ್ತಿದೆ. ಇತರ ಪ್ರದೇಶದಲ್ಲಿ 30 ಮಕ್ಕಳಿಗೆ ಓರ್ವ ಶಿಕ್ಷರಿದ್ದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ 23 ಮಕ್ಕಳಿಗೆ ಒಬ್ಬ ಶಿಕ್ಣಕರಿದ್ದಾರೆ. ಈ ಭಾಗದಲ್ಲಿನ ಶಾಲಾ ಶಿಕ್ಷಕರ ಸಮಸ್ಯೆ ತಕ್ಕಮಟ್ಟಿಗೆ ನಿವಾರಿಸಲು ಕಲ್ಯಾಣ ಕರ್ನಾಟಕ ಭಾಗದಿಂದಲೇ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುತ್ತಿದೆ" ಎಂದು ಸಚಿವರು ಸ್ಪಷ್ಟಪಡಿಸಿದರು.

ಶಾಲಾ ಶಿಕ್ಷಕರ ಕೊರತೆ ನೀಗಿಸಲು ಕ್ರಮ
ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮಾಧ್ಯಮಗಳ ಜೊತೆ ಮಾತನಾಡಿ, "ಶಾಲಾ ಶಿಕ್ಷಕರ ಕೊರತೆ ನೀಗಿಸಲು ರಾಜ್ಯದಾದ್ಯಂತ 33,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಇತ್ತೀಚೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಗೌರವ ಸಂಭಾವನೆಯನ್ನು 7,500 ರೂ. ಗಳಿಂದ 10,000 ಸಾವಿರ ರೂ. ಗಳಿಗೆ ಮತ್ತು ಪ್ರೌಢ ಶಾಲಾ ಶಿಕ್ಷಕರ ಗೌರವ ಸಂಭಾವನೆಯನ್ನು 8,000 ರೂ. ಗಳಿಂದ 10,500 ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ" ಎಂದು ಹೇಳಿದರು.

ಕೋವಿಡ್ ಪರಿಣಾಮ ಕಲಿಕೆ
"ಕೋವಿಡ್ ಕಾರಣ ಕಳೆದ ಎರಡು ವರ್ಷ ಸರಿಯಾಗಿ ಶಾಲಾ ತರಗತಿಗಳು ನಡೆಯದ ಕಾರಣ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದೆ. ಆದ್ದರಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಕಲಿಕಾ ಚೇತರಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕಲಿಕಾ ಚೇತರಿಕೆ ಕೋರ್ಸ್ ಬೋಧಿಸಿದ ನಂತರವೇ ಪಠ್ಯ ಬೋಧನೆ ಮಾಡಲಾಗುವುದು" ಎಂದು ಸಚಿವ ಬಿ. ಸಿ. ನಾಗೇಶ ಸ್ಪಷ್ಟಪಡಿಸಿದರು.

ಸಂಪೂರ್ಣ ಕಲಿಕೆ ಅಸಾಧ್ಯ
"ಕೋವಿಡ್ ಕಾರಣ ಮಕ್ಕಳ ಶಿಕ್ಷಣ ಮಟ್ಟ ಕುಂಠಿತಗೊಂಡಿದೆ. ಹಲವಾರು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳ ಜೊತೆ ಸಂವಾದ ನಡೆಸಿದಾಗಲೇ ಇದು ನನ್ನ ಅರಿವಿಗೆ ಬಂದಿದೆ. ಇ-ಲರ್ನಿಂಗ್ನಿಂದಲೇ ಸಂಪೂರ್ಣ ಕಲಿಕೆ ಅಸಾಧ್ಯ ಎಂದು ಮಕ್ಕಳು ಸ್ಪಷ್ಠಪಡಿಸಿದ್ದಾರೆ. ಹೀಗಾಗಿ ಪ್ರಸ್ತುತ ಸಾಲಿನಲ್ಲಿ ಪಠ್ಯ ಬೋಧನೆ ಮುನ್ನ ಕಲಿಕಾ ಚೇತರಿಕೆ ಕೋರ್ಸ್ ಬೋಧಿಸಲಾಗುತ್ತಿದೆ" ಎಂದು ಸಚಿವರು ಹೇಳಿದರು.

ನಮ್ಮ ಸರ್ಕಾರದ ಮೊದಲ ಆದ್ಯತೆ
"ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಹಣೆಪಟ್ಟಿ ಕೊನೆಗೊಳಿಸುವುದು ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಹೀಗಾಗಿ ಈ ಭಾಗಕ್ಕೆ ಹೆಚ್ಚಿನ ಆರ್ಥಿಕ ಅನುದಾನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವು ಸಹ ಈ ಭಾಗದ ಜಿಲ್ಲೆಗಳನ್ನು ಮಹತ್ವಕಾಂಕ್ಷೆ ಜಿಲ್ಲೆಯಲ್ಲಿ ಸೇರಿಸಿ ಅಭಿವೃದ್ಧಿಪಡಿಸುತ್ತಿದೆ. ಈ ಭಾಗದಲ್ಲಿನ ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಹಲವರ ವಿರೋಧದ ನಡುವೆಯೂ ಮೊಟ್ಟೆ ವಿತರಿಸಿದ್ದು, ಸದರಿ ಕಾರ್ಯಕ್ರಮದ ಪ್ರಗತಿ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ"ಎಂದು ಸಚಿವರು ವಿವರಿಸಿದರು.












Click it and Unblock the Notifications