GAIL Jobs: ಉದ್ಯೋಗ ಕಲ್ಪಿಸಲು 'ಗೈಲ್' ಜತೆ ಸರ್ಕಾರ ಮಾತುಕತೆ
ಬೆಂಗಳೂರು, ಫೆಬ್ರವರಿ 13: ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಸಕ್ರಿಯವಾಗಿದ್ದ ಜೆಬಿಎಫ್ ಕಂಪನಿಯು ಆರ್ಥಿಕ ತೊಂದರೆಗೆ ಸಿಲುಕಿದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿರುವ 34 ಉದ್ಯೋಗಿಗಳಿಗೆ ಉದ್ಯೋಗ ಕೊಡಿಸಲು ಸರ್ಕಾರ ಸಹಾಯ ಮಾಡಲಿದೆ.
ಮಂಗಳವಾರ ಈ ಕುರಿತು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ಕೇಳಿದ ಪ್ರಶ್ನೆಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಎಂಬಿ ಪಾಟೀಲ್ ಅವರು ಉತ್ತರ ನೀಡಿದರು.

'ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್' (GAIL) ನಲ್ಲಿ ಉದ್ಯೋಗ ಕೊಡಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಸರಕಾರದೊಂದಿಗೆ ನಿರಂತರವಾಗಿ ವ್ಯವಹರಿಸಲಾಗುತ್ತಿದೆ. ಜತೆಗೆ, ಗೈಲ್ ಸಂಸ್ಥೆಯ ಉನ್ನತಾಧಿಕಾರಿಗಳೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ನಿಯಮಗಳಂತೆ ಉದ್ಯೋಗ ಕೊಡಲಿಲ್ಲ
ಜಮೀನು ಪಡೆದ ಜೆಬಿಎಫ್ ಕಂಪನಿಯ ರಾಜ್ಯ ಸರಕಾರದ ನಿಯಮಗಳಂತೆ ಇಂಥ 115 ಮಂದಿಗೆ ಉದ್ಯೋಗ ನೀಡಬೇಕಿತ್ತು. 2012ರಲ್ಲಿ 81 ಜನರನ್ನು ಉದ್ಯೋಗಕ್ಕೆ ತೆಗೆದುಕೊಂಡ ಕಂಪನಿಯು 2017ರಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತು. ನಂತರ ಎನ್.ಸಿ.ಎಲ್.ಟಿ. ಪ್ರಕ್ರಿಯೆಯಡಿಯಲ್ಲಿ ಜೆಬಿಎಫ್ ಕಂಪನಿಯನ್ನು ಕೇಂದ್ರ ಸರ್ಕಾರ 'ಗೈಲ್'ಗೆ ವಹಿಸಿತು.
ಆ ಸಂಸ್ಥೆಯು ಇವರಿಗೆ 2023ರ ಮಾರ್ಚ್ ತನಕ ವೇತನ ನೀಡಿದೆ. ಆದರೆ, ನಂತರ ಅದು ಲಿಖಿತ ಮತ್ತು ಮೌಖಿಕ ಪರೀಕ್ಷೆಗಳನ್ನು ನಡೆಸಿ, ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿತು. ಇದರಿಂದ ಸಮಸ್ಯೆ ಉದ್ಭವಿಸಿದೆ ಎಂದು ಅವರು ತಿಳಿಸಿದರು.

ಜಮೀನು ಕೊಟ್ಟವರಿಗೆ ಉದ್ಯೋಗ ನೀಡಿಕೆ ಕಡ್ಡಾಯ
ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ.
ಇನ್ನೂ 2023ರ ನ.7ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೂಡ, ಇವರನ್ನೆಲ್ಲ ಉದ್ಯೋಗದಲ್ಲಿ ಮುಂದುವರಿಸಲು ಅಗತ್ಯ ಅನುಮೋದನೆ ಪಡೆದುಕೊಳ್ಳುವಂತೆ ಜಿಎಂಪಿಎಲ್ ಸಂಸ್ಥೆಯ ಸಿಇಒ ಅವರಿಗೆ ಸೂಚಿಸಲಾಗಿದೆ ಎಂದು ಪಾಟೀಲರು ತಿಳಿಸಿದರು.
ಮಂಗಳೂರು ತಾಲ್ಲೂಕಿನ ಇಪಿಎಪಿ 2ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ 104.28 ಎಕರೆ ಪ್ರದೇಶದಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಿಸಲಾಗುತ್ತಿದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವತಿಯಿಂದ 50:50ರ ಅನುಪಾತದಲ್ಲಿ ನಡೆಯುತ್ತಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಚಿವರು ಉತ್ತರಿಸಿದರು.
ಅಭಿನಂದನೆ ಸಲ್ಲಿಸಿದ ಭಂಡಾರಿ
ಕೈಗಾರಿಕಾ ಸಚಿವ ಪಾಟೀಲ್ ಅವರು ದಾವೋಸ್ ನ ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗವಹಿಸಿ, ರಾಜ್ಯಕ್ಕೆ ಸುಮಾರು ₹23000 ಕೋಟಿ ಬಂಡವಾಳ ತರುವ ಪ್ರಯತ್ನ ಮಾಡಲಾಗಿದೆ. ಈ ಕಾರ್ಯಸಾಧುವಾಗಿದ್ದಕ್ಕೆ ಅಭಿನಂದಿಸುತ್ತೇನೆ ಎಂದು ಭಂಡಾರಿ ಹೇಳಿದರು.












Click it and Unblock the Notifications