Gram Panchayat; ಪಂಚಾಯತಿ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್
ಬೆಂಗಳೂರು, ಡಿಸೆಂಬರ್ 01: ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಒಂದು ಬಾರಿಗೆ ಜಿಲ್ಲಾ ಪಂಚಾಯಿತಿಯಿಂದ ಘಟನೋತ್ತರವಾಗಿ ಅನುಮೋದನೆ ನೀಡಲು ಆದೇಶಿಸಿದೆ.
ನಿರ್ದೇಶಕರು (ಆಡಳಿತ-1) ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ದಿನಾಂಕ 31/10/2017ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಜಿಲ್ಲಾ ಪಂಚಾಯತಿಯಿಂದ ಅನುಮೋದನೆಯಾಗದೇ ಸೇವೆ ಸಲ್ಲಿಸುತ್ತಿರುವ, ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಒಂದು ಬಾರಿಗೆ ಅನುಮೋದನೆ ನೀಡುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

ಪ್ರಸ್ತಾವನೆ ಏನು?; ಮಾನ್ಯ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ವಿವಿಧ ಸಂಘಗಳೊಂದಿಗೆ ಸದರಿ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಬೇಡಿಕೆಗಳ ಕುರಿತು ಸಭೆಯನ್ನು ದಿನಾಂಕ 21/07/2023ರಂದು ನಡೆಸಲಾಗಿದೆ.
ಸಭೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜಿಲ್ಲಾ ಪಂಚಾಯತಿ ಅನುಮೋದನೆಯಾಗದೇ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ವಿದ್ಯಾರ್ಹತೆ ಹೊರತುಪಡಿಸಿ, ಅದರಲ್ಲೂ ಜವಾನ, ಸ್ವಚ್ಛತಾಗಾರರು, ನೀರುಗಂಟಿಗಳಿಗೆ ವಿದ್ಯಾರ್ಹತೆ ಕೈಬಿಟ್ಟು ಸಭಾನಡವಳಿ, ವೇತನ ಪಾವತಿ, ಹಾಜರಾತಿ ಆಧಾರದಲ್ಲಿ ಒಂದು ಬಾರಿಗೆ ಅನುಮೋದನೆ ನೀಡಬೇಕಾಗಿ ಕೋರಿರುತ್ತಾರೆ.
ಅದರಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 18,672 ಸಿಬ್ಬಂದಿಗಳು ದಿನಾಂಕ 31/10/2017ರ ಪೂರ್ವದಲ್ಲಿ ಗ್ರಾಮ ಪಂಚಾಯತಿಯಲ್ಲಿ ನೇಮಕಗೊಂಡು ವಿವಿಧ ಕಾರಣಗಳಿಗಾಗಿ ಅನುಮೋದನೆಗೆ ಬಾಕಿ ಉಳಿದಿದ್ದು, ಇವರುಗಳಲ್ಲಿ ಒಟ್ಟು 11,543 ಸಿಬ್ಬಂದಿಗಳು ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಅನುಮೋದನೆಗಾಗಿ ಬಾಕಿ ಉಳಿದಿರುವುದು ಕಂಡುಬಂದಿರುತ್ತದೆ ಎಂದು ಹೇಳಿದೆ.
ಸದರಿ ಜಿಲ್ಲೆಗಳಿಂದ ಪಡೆದ ಮಾಹಿತಿಯಂತೆ ಗ್ರಾಮ ಪಂಚಾಯತಿಯಲ್ಲಿ ದಿನಾಂಕ 31/10/2017ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್, ಅಟೆಂಡರ್ ಹಾಗೂ ಸ್ವಚ್ಛತಾಗಾರರಾಗಿ ಒಟ್ಟು 11,170 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ ಸಿಬ್ಬಂದಿಗೆ ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ, ಅನುಮೋದನೆಗಾಗಿ ಬಾಕಿ ಇರುವುದು ಕಂಡುಬಂದಿರುತ್ತದೆ.
ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಅನುಮೋದನೆಗೆ ಬಾಕಿ ಇರುವ ಮೇಲಿನ ಒಟ್ಟು 11,170 ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಕನಿಷ್ಠ ವಿದ್ಯಾರ್ಹತೆಯನ್ನು ಹೊರತು ಪಡಿಸಿ (ಕೈಬಿಟ್ಟು) ಒಂದು ಬಾರಿಗೆ ಜಿಲ್ಲಾ ಪಂಚಾಯತಿಯಿಂದ ಘಟನೋತ್ತರವಾಗಿ ಅನುಮೋದನೆ ನೀಡಲು ಸರ್ಕಾರವು ತೀರ್ಮಾನಿಸಿರುತ್ತದೆ. ಅದರಂತೆ ಈ ಆದೇಶ ಹೊರಡಿಸಲಾಗಿದೆ.
ಆದೇಶ; ದಿನಾಂಕ 31/10/2017ರ ಪೂರ್ವದಲ್ಲಿ ಗ್ರಾಮ ಪಂಚಾಯತಿಯಿಂದ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ವಾಟರ್ ಆಪರೇಟರ್, ಅಟೆಂಡರ್ ಹಾಗೂ ಸ್ವಚ್ಛತಾಗಾರರಿಗೆ ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಅನುಮೋದನೆಗಾಗಿ ಬಾಕಿ ಇರುವ ಸಿಬ್ಬಂದಿಗಳಿಗೆ ಕನಿಷ್ಠ ವಿದ್ಯಾರ್ಹತೆಯನ್ನು ಹೊರತುಪಡಿಸಿ (ಕೈಬಿಟ್ಟು) ಸಭಾನಡವಳಿ, ವೇತನ ಪಾವತಿ, ಹಾಜರಾತಿ ಆಧಾರದ ಮೇಲೆ ಒಂದು ಬಾರಿಗೆ ಜಿಲ್ಲಾ ಪಂಚಾಯತಿಯಿಂದ ಘಟನೋತ್ತರವಾಗಿ ಅನುಮೋದನೆ ನೀಡಲು ಆದೇಶಿಸಿದೆ ಎಂದು ಹೇಳಿದೆ.












Click it and Unblock the Notifications