ಕೆಎಸ್ಆರ್ಟಿಸಿ ಮೃತ ಸಿಬ್ಬಂದಿ ಅವಲಂಬಿತ 1000 ಮಂದಿಗೆ ನೌಕರಿ: Ramalinga Reddy
ಬೆಂಗಳೂರು, ಏಪ್ರಿಲ್ 27: ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಸೇರಿ ನಾಲ್ಕು ನಿಗಮಗಳ ಸಿಬ್ಬಂದಿ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಮೃತರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆ ಜಾರಿಗೆ ತಂದಿದ್ದೇವೆ. ಅಲ್ಲದೇ ಕೆಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದರು.
ಸಾರಿಗೆ ಸುರಕ್ಷಾ ಯೋಜನೆಯಡಿ ಮೃತ ಸಿಬ್ಬಂದಿಗೆ ಸಚಿವರು ಹಾಗೂ ಅಧಿಕಾರಿಗಳು ಶನಿವಾರ ಪರಿಹಾರ ಮೊತ್ತದ ಚೆಕ್ ವಿತರಣೆ ಮಾಡಿ ಮಾತನಾಡಿದರು. ಸಾರಿಗೆ ಸಿಬ್ಬಂದಿಗಳು ಹಗಲು ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿರುತ್ತದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿ ಆಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ 04 ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ತಿಳಿಸಿದರು.

ಸಿಬ್ಬಂದಿ ಅವಲಂಬಿತರು ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳ ವಿದ್ಯಾಬ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡದಂತೆ ಕಿವಿ ಮಾತು ಹೇಳಿದರು. ಹಣವಿದ್ದರೆ ಎಲ್ಲರು ನೆಂಟರೆ ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಲು ತಿಳಿಸಿದರು.
300ಕ್ಕೂ ಅಧಿಕ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ
ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ "ಕೆಎಸ್ ಆರ್ ಟಿಸಿ ಆರೋಗ್ಯ" ಯೋಜನೆಯನ್ನು ಕೂಡ ಜಾರಿಗೆ ತಂದಿದ್ದು, ರಾಜ್ಯಾದಾದ್ಯಂತ 300 ಕ್ಕೂ ಅಧಿಕ ಆಸ್ಪತ್ರೆಗಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದ್ದು, ಈವರೆಗೂ 56,000 ಕ್ಕೂ ಹೆಚ್ಚು ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿರುವುದಾಗಿ ತಿಳಿಸಿದರು.
ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಸುನಿಲ್ ಕುಮಾರ್ ಬಿ.ಡಿ., ಚಾಲಕ-ಕಂ-ನಿರ್ವಾಹಕ, ಬಿಲ್ಲೆ ಸಂಖ್ಯೆ. 1624, ಅರಕಲಗೂಡು ಘಟಕ, ಹಾಸನ ವಿಭಾಗ ರವರಿಗೆ ಪರಿಹಾರವಾಗಿ ರೂ.25.00 ಲಕ್ಷಗಳನ್ನು ವಿತರಿಸಲಾಯಿತು.

ಸುನೀಲ್ ಅವರಿಗೆ 25-03-24 ರಿಂದ 09-12-24 ರವರೆಗೆ 08 ತಿಂಗಳವರೆಗೆ ಐ.ಓ.ಡಿ ನೀಡಲಾಗಿದೆ. ಸಂಸ್ಥೆಯ ವತಿಯಿಂದ ಪೂರ್ಣ ವೈದ್ಯಕೀಯ ವೆಚ್ಚ ರೂ.4,85,762-00 ಗಳನ್ನು ಭರಿಸಲಾಗಿದೆ ಹಾಗೂ ಸದರಿ ನೌಕರರಿಗೆ ಲಘು ಹುದ್ದೆ ನೀಡಿ ತಾಂತ್ರಿಕ ಸಹಾಯಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ.
ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.
ಇದುವರೆವಿಗೂ 24 ಜನ ನೌಕರರ ಕುಟುಂಬದವರಿಗೆ ತಲಾ ರೂಪಾಯಿ 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 26 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟಾರೆ ರೂ.26 ಕೋಟಿ ಪರಿಹಾರ ನೀಡಲಾಗಿದೆ.
ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ
ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದೆ. ಈ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಪರಿಹಾರ ಮೊತ್ತವಾದ ರೂ.10 ಲಕ್ಷಗಳಿಗೆ ಈಗಾಗಲೇ ಹೆಚ್ಚಿಸಲಾಗಿದೆ. ಇದುವರೆವಿಗೂ 94 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ಧನ ನೀಡಲಾಗಿದೆ.
ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ಇದೇ ವೇಳೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್ ವಿತರಿಸಿದರು. ಈವರೆಗೆ 125 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟು ರೂ. 12.50 ಕೋಟಿಗಳ ಪರಿಹಾರ ನೀಡಲಾಗಿದೆ.
ಸಾರಿಗೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮಾತನಾಡಿ, ಸಾರಿಗೆ ಸಚಿವರು ಹೇಳಿದ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸುವಂತೆ ತಿಳಿಸಿದರು. ಹಣವನ್ನು ಸದುಪಯೋಗಪಡಿಸ ಕೊಳ್ಳಬೇಕು. ಯಾರನ್ನು ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ. ಸಂಸ್ಥೆ ಸದಾ ತಮ್ಮೊಡನೆ ಇದೆ ಎಂದರು.












Click it and Unblock the Notifications