ಅತಿಥಿ ಉಪನ್ಯಾಸಕರ ನೇಮಕಾತಿ; ಜ. 21ರ ತನಕ ಅರ್ಜಿ ಹಾಕಿ
ಬೆಂಗಳೂರು, ಜನವರಿ 18; ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಜನವರಿ 21 ಕೊನೆಯ ದಿನವಾಗಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಈ ಕುರಿತು ಸೋಮವಾರ ಆದೇಶ ಹೊರಡಿಸಿದ್ದಾರೆ. 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಇಷ್ಟದ 10 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಆಯ್ಕೆಯಾದವರಿಗೆ ಈ ಕಾಲೇಜುಗಳಲ್ಲೇ ಕಾರ್ಯ ನಿರ್ವಹಣೆ ಮಾಡಲು ಆದಷ್ಟು ಮಟ್ಟಿಗೆ ಅವಕಾಶ ನೀಡಲಾಗುತ್ತದೆ.

ಒಂದು ವೇಳೆ ಆ ಕಾಲೇಜುಗಳಲ್ಲಿ ವಾರಕ್ಕೆ 15 ಗಂಟೆ ಕಾರ್ಯಭಾರ ಇಲ್ಲದಿದ್ದಲ್ಲಿ ಮಾತ್ರ ಬೇರೆ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಿ ಕೊಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿರುವವರಿಗೆ ನೇಮಕಾತಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ವಿದ್ಯಾರ್ಹತೆ, ಸೇವಾ ವಿವರ ಸೇರಿದಂತೆ ವಿವಿಧ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರು ಮಾಡಲಾಗುತ್ತದೆ.
100 ಅಂಕಗಳು; ಅತಿಥಿ ಉಪನ್ಯಾಸಕರ ನೇಮಕಾತಿಗೆ 100 ಅಂಕಗಳನ್ನು ನಿಗದಿ ಮಾಡಲಾಗಿದೆ. ಇದರಲ್ಲಿ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯ ಎರಡು ವರ್ಷಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಪೈಕಿ ಶೇ 15ರಷ್ಟನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಇದಕ್ಕೆ ಗರಿಷ್ಠ 25 ಅಂಕಗಳನ್ನು ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ಗೆ ಭೇಟಿ ನೀಡಬಹುದಾಗಿದೆ. ವೆಬ್ ಸೈಟ್ ವಿಳಾಸ
https://dce.karnataka.gov.in/
ಸ್ನಾತಕೋತ್ತರ ಪದವಿ ಹೊರತುಪಡಿಸಿ ಪಿಎಚ್ಡಿ, ನೆಟ್, ಕೆ-ಸೆಟ್, ಎಂಫಿಲ್ ಹೆಚ್ಚುವರಿ ವಿದ್ಯಾರ್ಹತೆ ಎಂದು ನಿಗದಿ ಮಾಡಲಾಗಿದೆ. ಅವುಗಳಿಗೆ ಕ್ರಮವಾಗಿ 12, 9 ಮತ್ತು 6 ಅಂಕಗಳನ್ನು ನೀಡಲಾಗುತ್ತದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಒಂದು ವರ್ಷಕ್ಕೆ (ಗರಿಷ್ಠ 16 ವರ್ಷಗಳಿಗೆ ಮಾತ್ರ ಅನ್ವಯವಾಗುವಂತೆ 48 ಅಂಕ) 3 ಅಂಕಗಳನ್ನು ನೀಡಲಾಗುತ್ತದೆ.
ಶೈಕ್ಷಣಿಕ ವರ್ಷದ ಒಂದು ಸೆಮಿಸ್ಟರ್ನಲ್ಲಿ ಮಾತ್ರ ಕರ್ತವ್ಯ ನಿರ್ವಹಣೆ ಮಾಡಿದ್ದರೆ 1.5 ಅಂಕ ನೀಡಲಾಗುತ್ತದೆ. ಅಂಗವಿಕಲ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಆಹ್ವಾನ; ಕರ್ನಾಟಕ ಕೌಶಲ್ಯ ಅಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ಉದ್ಯಾನಪಾಲಕ ಹಾಗೂ ನರ್ಸರಿ ಗಿಡಗಳ ಪೋಷಣೆ ಕುರಿತು ಉಚಿತ ತರಬೇತಿ ನೀಡಲಾಗುತ್ತದೆ.
ತರಬೇತಿಯು ಶಿವಮೊಗ್ಗ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ನಡೆಯಲಿದೆ. 18 ರಿಂದ 35 ವರ್ಷದೊಳಗಿನ, ಕನಿಷ್ಟ 7ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು https://skillconnect.kaushalkar.com/app/nurseryWorker ಮೂಲಕ ಜನವರಿ 25 ರೊಳಗೆ ಅರ್ಜಿ ಸಲ್ಲಿಸಬೇಕು.
ದೂರದಿಂದ ಬರುವ ಅಭ್ಯರ್ಥಿಗಳಿಗೆ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉಚಿತ ವಸತಿ ಕಲ್ಪಿಸಲಾಗುವುದು. ತರಬೇತಿಯು ಒಂದು ತಿಂಗಳ ಪೂರ್ಣಾವಧಿ ಹೊಂದಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08182-255294/9019485688 ಕರೆ ಮಾಡಬಹುದಾಗಿದೆ.
ಕಳೆದ ವಾರ ಕರ್ನಾಟಕ ಸರ್ಕಾರ 1,727 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಿತ್ತು. ಸಹಶಿಕ್ಷಕರು, ದೈಹಿಕ ಶಿಕ್ಷಕರು ಸೇರಿದಂತೆ ಪ್ರೌಢಶಾಲಾ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು.












Click it and Unblock the Notifications