ಕೊಪ್ಪಳ; ಸೆಪ್ಟೆಂಬರ್ 27ರಂದು ಕೊಪ್ಪಳದಲ್ಲಿ ಜಾಬ್ ಡ್ರೈವ್
ಕೊಪ್ಪಳ, ಸೆಪ್ಟೆಂಬರ್ 24; ಉದ್ಯೋಗ ಹುಡುಕುತ್ತಿರುವ ಯುವಕ, ಯುವತಿಯರಿಗೆ ಸಿಹಿಸುದ್ದಿ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜಾಬ್ ಡ್ರೈವ್ ಆಯೋಜನೆ ಮಾಡಿದೆ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ, ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದು.
ಸೆಪ್ಟೆಂಬರ್ 27ರಂದು ಬೆಳಗ್ಗೆ 10.30 ರಿಂದ 2.30 ರವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜಾಬ್ ಡ್ರೈವ್ ಆಯೋಜನೆ ಮಾಡಲಾಗಿದೆ. ಜಾಬ್ ಡ್ರೈವ್ನಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಈ ಜಾಬ್ ಡ್ರೈವ್ನಲ್ಲಿ ದೇಶಪಾಂಡೆ ಫೌಂಡೇಶನ್ ಹುಬ್ಬಳ್ಳಿ, ಫ್ಯೂಶನ್ ಮೈಕ್ರೋಫೈನಾನ್ಸ್ ಕೊಪ್ಪಳ ಮತ್ತು ಮುತ್ತೂಟ್ ಗ್ರೂಪ್ ಕೊಪ್ಪಳ ಇವರು ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಪಿಯುಸಿ, ತತ್ಸಮಾನ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜಾಬ್ಡ್ರೈವ್ನಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ಜಾಬ್ ಡ್ರೈವ್ನಲ್ಲಿ ಭಾಗವಹಿಸಿ, ಉದ್ಯೋಗದ ನೆರವು ಪಡೆಯಬಹುದಾಗಿದೆ ಎಂದು ಪ್ರಕಟಣೆ ಹೇಳಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ಮೊಬೈಲ್ ಸಂಖ್ಯೆ 8105693234, 6361143422.
ಕಾನೂನು ಕ್ರಮ, ನೇಮಕಾತಿ ರದ್ದು; ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 6 ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿಗಳಲ್ಲಿ 2022-23ನೇ ಸಾಲಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ದಿನಾಂಕ 19/09/2023ರಂದು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆ ಸಮಿತಿಯ ಅಧ್ಯಕ್ಷರಾದ ಧಾರವಾಡ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ವಯ ನೇಮಕಾತಿ ಪ್ರಕ್ರೀಯೆ ಕೈಗೊಂಡು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸೆಪ್ಟೆಂಬರ್ 19ರಂದು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಸದರಿ ಆಯ್ಕೆ ಕುರಿತಂತೆ ಹಣದ ಆಮಿಷ ಒಡ್ಡುತ್ತಿರುವ ದೂರುಗಳು ಕೇಳಿಬರುತ್ತಿದ್ದು, ಈ ನೇಮಕಾತಿಗಳನ್ನು ಇಲಾಖೆಯ ಮಾರ್ಗಸೂಚಿಯನ್ವಯ ನಿಗದಿಪಡಿಸಿದ ಅರ್ಹತೆ ಹಾಗೂ ಅಂಕಗಳ ಆಧಾರದ ಮೇಲೆ ಜಿಲ್ಲಾ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ನೇಮಕಾತಿಗೆ ಯಾವುದೇ ಮಧ್ಯವರ್ತಿಗಳಿಗಾಗಲಿ, ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗಾಗಲಿ ಮತ್ತು ಯಾವುದೇ ತರಹದ ವ್ಯಕ್ತಿಗಳಿಗೆ ಹಣ ನೀಡಬಾರದು ಹಾಗೂ ಒಂದು ವೇಳೆ ನೀಡಿದಲ್ಲಿ ಹಣ ನೀಡಿದವರ ಹಾಗೂ ಹಣ ಪಡೆದವರ ಮೇಲೆ ಕಾನೂನು ಕ್ರಮ ಕೈಗೊಂಡು ಸದರಿ ನೇಮಕಾತಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ವ್ಯಕ್ತಿ ಅಥವಾ ಸಿಬ್ಬಂದಿಗಳು ಹಣ ಕೇಳಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ದಾಖಲೆ ಸಮೇತ ದೂರು ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳ ಕಛೇರಿಯ ಪ್ರಕಟಣೆ ತಿಳಿಸಿದೆ.












Click it and Unblock the Notifications