ಕಲಬುರಗಿ; 2,240 ಜನರಿಗೆ ಉದ್ಯೋಗ ಮೇಳದಲ್ಲಿ ನೇಮಕಾತಿ
ಕಲಬುರಗಿ, ಫೆಬ್ರವರಿ 27; ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 12ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು. ಒಟ್ಟು 2,240 ಜನರಿಗೆ ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಕ್ಕಿದೆ.
ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಈ ಕುರಿತು ಮಾಹಿತಿ ನೀಡಿದ್ದಾರೆ. ಒಂದು ದಿನದ ಈ ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಬಿಇ/ ಬಿಟೆಕ್ ಮತ್ತು ಎಂಟೆಕ್ ವಿದ್ಯಾರ್ಹತೆ ಹೊಂದಿರುವ ಒಟ್ಟು 8,670 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡು, ಸಂದರ್ಶನ ಎದುರಿಸಿದ್ದರು.
ಉದ್ಯೋಗ ಮೇಳದಲ್ಲಿ ಒಟ್ಟು 83 ಕಂಪನಿಗಳು ಭಾಗವಹಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿದ್ದವು. ಅಂತಿಮವಾಗಿ ಉದ್ಯೋಗ ದೊರಕಿಸಿಕೊಂಡಿರುವ ಅಭ್ಯರ್ಥಿಗಳಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಹತೆಯುಳ್ಳ 382, ಪಿಯುಸಿ ಮಟ್ಟದ 342, ಐಟಿಐ ವಿದ್ಯಾರ್ಹತೆಯುಳ್ಳ 520, ಡಿಪ್ಲೊಮಾ ಓದಿರುವ 343, ಪದವಿ ಓದಿರುವ 425, ಸ್ನಾತಕೋತ್ತರ ಶಿಕ್ಷಣ ಹೊಂದಿರುವ 72, ಬಿಇ/ ಬಿಟೆಕ್ ಓದಿರುವ 133 ಮತ್ತು ಎಂಟೆಕ್ ವಿದ್ಯಾಭ್ಯಾಸವುಳ್ಳ 23 ಮಂದಿ ಇದ್ದಾರೆ.

ಸಂದರ್ಶನವನ್ನು ಎದುರಿಸಿದ ಆಸಕ್ತರಲ್ಲಿ 298 ಮಂದಿಯನ್ನು ಮುಂದಿನ ಸುತ್ತಿಗೆ ಆಯ್ಕೆ ಮಾಡಲಾಗಿದೆ. ಇವರಿಗೆಲ್ಲ ಸೂಕ್ತ ಕೌಶಲ್ಯ ತರಬೇತಿ ನೀಡಿ, ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲಾಗುವುದು. ಇದಕ್ಕೆ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾಗಿಲ್ಲ. ಇದು ಸಂಪೂರ್ಣ ಉಚಿತವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮೇಳದಲ್ಲಿ ಸಿಂಪ್ಲಿಫೈ3ಎಕ್ಸ್, ಬಾಶ್, ಟೊಯೋಟಾ ಕಿರ್ಲೋಸ್ಕರ್, ಬೈಜೂಸ್, ಎನ್.ಟಿ.ಟಿ.ಎಫ್., ಗ್ರೀಟ್ ಟೆಕ್ನಾಲಜೀಸ್, ಟೆಕ್ ವೈಸ್ ಐಟಿ ಸೊಲ್ಯೂಶನ್ಸ್, ಸಿನಾಪ್ಟೆಕ್ಸ್, ಗ್ರಾಮ ವಿಕಾಸ ಸೊಸೈಟಿ, ಸಾಯಿ ಫಾರ್ಮಿಕಲ್ಚರ್, ಹಿಮಾಲಯ ವೆಲ್ನೆಸ್ ಕಂಪನಿ, ಪ್ರಾಣ ಹೆಲ್ತ್ ಕೇರ್, ಯೂನಿಬಿಕ್, ಅಜೀಂ ಪ್ರೇಂಜಿ ಫೌಂಡೇಶನ್, ಯೋನೆಕ್ಸ್ ಮುಂತಾದ ಕಂಪನಿಗಳು ಭಾಗವಹಿಸಿದ್ದವು.
ನಿರುದ್ಯೋಗ ಸಮಸ್ಯೆ ನಿವಾರಣೆ; ಫೆಬ್ರವರಿ 12ರಂದು ನಡೆದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ್ದ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ, "ಜಾಗತಿಕ ನವೋದ್ಯಮದಲ್ಲಿ ದೊಡ್ಡಣ್ಣ ಅಮೆರಿಕಾ ಮೊದಲು, ಚೀನಾ ದ್ವಿತೀಯ ಮತ್ತು ಮೂರನೇ ಸ್ಥಾನದಲ್ಲಿ ಭಾರತವಿದ್ದರೆ, ನಾಲ್ಕನೇ ಸ್ಥಾನ ಕರ್ನಾಟಕದ್ದಾಗಿದೆ. ಇದು ವಿಶ್ವಗುರುವಿನತ್ತ ಭಾರತದ ಗುರಿಗೆ ನವ ಕರ್ನಾಟಕ ತಳಹದಿಯಾಗಿದೆ" ಎಂದು ಹೇಳಿದ್ದರು.
"ಕಲ್ಯಾಣ ಕರ್ನಾಟಕ ಭಾಗದಲ್ಲಿನ ನಿರುದ್ಯೋಗ ಸಮಸ್ಯೆ ನಿವಾರಣೆ ನಮ್ಮ ಪ್ರಥಮಾದ್ಯತೆಯಾಗಿದೆ. ಇಂದಿನ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರಕದವರು ನಮ್ಮ ಗುರಿಯಾಗುತ್ತಾರೆ. ಮಾರುಕಟ್ಟೆಯಲ್ಲಿನ ಬೇಡಿಕೆ ಅಧಾರದಂತೆ ಐಟಿಐ ಕಾಲೇಜುಗಳಲ್ಲಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ 150 ಐಟಿಐ ಸಂಸ್ಥೆಗಳನ್ನು ವಿಶ್ವ ದರ್ಜೆಗೆ ಏರಿಸಲಾಗಿದೆ" ಎಂದು ತಿಳಿಸಿದ್ದರು.
"ರಾಜ್ಯದಲ್ಲಿ 21ನೇ ಶತಮಾನಕ್ಕೆ ಪೂರಕವಾಗಿ ಭವಿಷ್ಯದ ಕೌಶಲ್ಯವನ್ನು ಆಧಾರವಾಗಿಟ್ಟುಕೊಂಡು ಸ್ಮಾರ್ಟ್ ಕ್ಲಾಸ್ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪ್ರತಿ ವಿದ್ಯಾರ್ಥಿ ತಂತ್ರಜ್ಞಾನ ಅರಿಯುವುದು ತುಂಬಾ ಅವಶ್ಯಕವಾಗಿದೆ. ಇದಕ್ಕಾಗಿ 1200 ಹೊಸ ಭವಿಷ್ಯದ ಕೌಶಲ್ಯಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಪರಿಚಯಿಸಲಾಗುತ್ತಿದೆ" ಎಂದು ಸಚಿವರು ಹೇಳಿದ್ದರು.
"ದೇಶದಲ್ಲಿ ಶೈಕ್ಷಣಿಕ ಕ್ರಾಂತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ನಾಂದಿ ಹಾಡಲಿದೆ. ಹಿಂದೆ ಪ್ರತಿ ವಿಷಯಕ್ಕೆ ಪ್ರತ್ಯೇಕವಾಗಿ ಅಧ್ಯಯನ ಮಾಡಬೇಕಿತ್ತು. ಈ ನೀತಿ ಜಾರಿನಿಂದ ಸಮಗ್ರ ಶಿಕ್ಷಣ ಪಡೆಯುವುದು ಸುಲಭವಾಗಿದೆ. ಎನ್ಇಪಿ ಜಾರಿಗೆ ತಂದ ಮೊದಲ ರಾಜ್ಯ ನಮ್ಮದಾಗಿದೆ. ಸ್ವಾತಂತ್ರ್ಯ, ಸಮಾನತೆ ರೀತಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೆ ತಂತ್ರಜ್ಞಾನ ಆಧಾರಿತ ಮತ್ತು ಕೌಶಲ್ಯವುಳ್ಳ ಶಿಕ್ಷಣ ನೀಡುವ ಗುರಿ ನಮ್ಮದಾಗಿದೆ" ಎಂದು ತಿಳಿಸಿದ್ದರು.
ಮಲ್ಲೇಶ್ವರ ಉದ್ಯೋಗ ಮೇಳ; ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ 115 ಮಂದಿಗೆ ಉದ್ಯೋಗ ಸಿಕ್ಕಿದೆ. ಈ ಮೇಳದಲ್ಲಿ 44 ಕಂಪನಿಗಳು ಭಾಗವಹಿಸಿದ್ದು, ಒಟ್ಟು 1,085 ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು.












Click it and Unblock the Notifications