ಆ. 29ರಂದು ಚಿಕ್ಕಬಳ್ಳಾಪುರದಲ್ಲಿ ಉದ್ಯೋಗ ಮೇಳ, 900 ಹುದ್ದೆಗಳಿಗೆ ಸಂದರ್ಶನ
ಚಿಕ್ಕಬಳ್ಳಾಪುರ, ಆಗಸ್ಟ್ 24: ಜನರ ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯವಾಗಿದ್ದು ಕೊರೋನಾ ಹೊಡೆತದಿಂದ ಕಳೆದ ಒಂದೂವರೆ ವರ್ಷಗಳಿಂದ ಜನಜೀವನದಲ್ಲಿ ಸಾಕಷ್ಟು ಏರುಪೇರುಗಳಾಗಿತ್ತು. ಈ ನಿಟ್ಟಿನಲ್ಲಿ ಯುವ ಸಮುದಾಯಕ್ಕೆ ಜೀವನೋಪಾಯ ಕಲ್ಪಿಸಿಕೊಟ್ಟು ದುಡಿಯುವ ಆತ್ಮವಿಶ್ವಾಸ ಹೆಚ್ಚಿಸುವ ಹಿನ್ನೆಲೆಯಲ್ಲಿ ಆ.29ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಮಟ್ಟದ ಆನ್ಲೈನ್ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರದ ರಾಪ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ವಿವಿಧ ಜಿಲ್ಲೆಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ, ನೇರ ಸಂದರ್ಶನವನ್ನು ಆಯೋಜಿಸಲಾಗುತ್ತಿದೆ.
ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯ ಜನರನ್ನು ಕೊರೋನಾ ಹೊಡೆತದಿಂದ ತಪ್ಪಿಸಲು ಕೊರೋನಾ ಲಾಕ್ ಡೌನ್, ವೀಕೆಂಡ್ ಲಾಕ್ಡೌನ್ ಎಂದು ಕೊರೋನಾ ಮಾರ್ಗಸೂಚಿಗಳ ಅನ್ವಯ ನಿರ್ಬಂಧಿಸಲಾಗಿತ್ತು. ಇದರಿಂದ ಸಾಕಷ್ಟು ಆರ್ಥಿಕವಾಗಿ ಸಹ ಜನರಿಗೆ ತೊಂದರೆಯಾಗಿತ್ತು. ಆದರೆ ಜಿಲ್ಲೆಯಲ್ಲಿ ಇದೀಗ ಕೊರೋನಾ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು ಸಾರ್ವಜನಿಕ ಜನಜೀವನ ಮಾರ್ಗಸೂಚಿ ನಿಯಮಗಳ ಪಾಲನೆಯೊಂದಿಗೆ ಸಹಜ ಸ್ಥಿತಿಗೆ ಮರಳುತ್ತಿರುವುದು ಸಂತಸದ ವಿಷಯವಾಗಿದೆ.

ಜಿಲ್ಲೆಯ ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ದಿ ಕಛೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 29ರಂದು ಮಿನಿ ಉದ್ಯೋಗ ಮೇಳವನ್ನು ಚಿಕ್ಕಬಳ್ಳಾಪುರದ ಎಂಜಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗುತ್ತಿದೆ.
ಈ ಮೇಳದಲ್ಲಿ ವಿಸ್ಟ್ರಾನ್, ಮೀಶೋ, ಸ್ಪಂದನ ಸ್ಪೂರ್ತಿ, ಡೆಲಿವರಿ ಡಾಟ್ ಕಾಮ್, ಎಚ್.ಡಿ.ಎಪ್.ಸಿ, ಟಾಪೆ, ಮುತೂಟ್ ಪಿನ್ ಕಾರ್ಪ್, ಪ್ರೀಕಾಟ್, ಎಕ್ಸಟ್ರೀಮ್ ಸಾಪ್ಟೆಕ್, ಭಿಮಲ್. ಎಜಾಕ್ಸ್ ಎಂಜಿನಿಯರ್ಸ್, ಅಕ್ಸಾ ಇನ್ಪೂಟೆಕ್, ಸೇರಿದಂತೆ ಸುಮಾರು 15 ರಿಂದ 20 ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು ಸು. 900 ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿ.ಯು.ಸಿ/ಪದವಿ/ಐ.ಟಿ.ಐ/ ಡಿಪ್ಲೋಮೋ/ ಇಂಜಿನಿಯರಿಂಗ್/ ಸ್ನಾತಕೋತ್ತರ ಪದವಿ ಪಾಸಾದ 18 ರಿಂದ 35 ವರ್ಷ ಒಳಗಿರುವ ಯುವಕ ಯುವತಿಯರು ಬಯೋಡಾಟ, ಅಂಕಪಟ್ಟಿ, ಆಧಾರ್ ಕಾರ್ಡ್, ವೋಟರ್ ಐಡಿ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಿ ಉದ್ಯೋಗಮೇಳದ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಯುವ ಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಸೂಚನೆ: ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.(ಮಾಹಿತಿ ಕೃಪೆ: ಕರ್ನಾಟಕ ವಾರ್ತೆ)
ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಶೂನ್ಯಕ್ಕೆ ತರಲು ಜಿಲ್ಲಾಡಳಿತವು ಎಲ್ಲ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಂಡಿದೆ. ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶವನ್ನು ಜಿಲ್ಲಾಡಳಿತ ಹೊಂದಿದೆ. ಗ್ರಾಮೀಣ ಭಾಗದ ವಿದ್ಯಾವಂತ ಯುವಕ ಯುವತಿಯರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಉದ್ಯೋಗ ಮೇಳಗಳನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಉದ್ಯೋಗಾಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಲಸಿಕಾಕರಣವು ಪ್ರಗತಿಯಲ್ಲಿದ್ದು ಶಾಲೆ (9ನೇ ತರಗತಿ ಮೇಲ್ಪಟ್ಟ ) ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಪ್ಪಿಸಲು ಮತ್ತು ಕೊರೋನಾದಿಂದ ರಕ್ಷಣೆ ಪಡೆಯಲು ಎಲ್ಲ ಮಕ್ಕಳ ಪೋಷಕರಿಗೂ ಲಸಿಕೆ ನೀಡುವುದು ಕಡ್ಡಾಯವಾಗಿರುತ್ತದೆ.
ತೀವ್ರತರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಪೋಷಕರಿಗೆ ಆದ್ಯತೆ ಮೇಲೆ ಲಸಿಕೆಯನ್ನು ಹಾಕಬೇಕಾಗಿದ್ದು ಸಂಬಂಧಪಟ್ಟ ಇಲಾಖೆಗಳು ಇದರ ಬಗ್ಗೆ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕು. 9, 10,ನೇ ತರಗತಿ ಹಾಗೂ ಪಿಯು ಕಾಲೇಜುಗಳ ವಿದ್ಯಾರ್ಥಿಗಳು ಶಾಲೆ ಕಾಲೇಜುಗಳ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದು ಈ ಮಕ್ಕಳ ಪೋಷಕರಿಗೂ ಆದ್ಯತೆ ಮೇರೆಗೆ ಲಸಿಕೆ ಹಾಕಬೇಕಾಗಿರುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರಿಗೂ ಕಡ್ಡಾಯವಾಗಿ ಲಸಿಕೆ ಲಭ್ಯವಾದಂತೆ ಲಸಿಕೆ ನೀಡುವ ಹಿನ್ನೆಲೆಯಲ್ಲಿ ಕೊವಿಡ್ ಲಸಿಕಾಕರಣಕ್ಕೆ ವೇಗ ನೀಡಬೇಕೆಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications