ಕರ್ನಾಟಕ ಬಜೆಟ್ 2025: ಉದ್ಯೋಗ ವಲಯಕ್ಕೆ ಸಿಕ್ಕ ಭರವಸೆಗಳು
ಬೆಂಗಳೂರು, ಮಾರ್ಚ್ 07: ಶುಕ್ರವಾರ ಕರ್ನಾಟಕದ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡಿಸಿದರು. 4,09,549 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಅವರು, ರಾಜ್ಯದಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮಾ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು 'ಯುವನಿಧಿ' ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.

ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಾಗುವುದು. ನಮ್ಮ ಸರ್ಕಾರದ ಹಿಂದಿನ ಆಡಳಿತಾವಧಿಯಲ್ಲಿ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಪ್ರಸ್ತುತ, ರಾಜ್ಯದ ಯುವಕರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು ಯೋಜನೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿ CMKKY 2.0 ಅನ್ನು ಜಾರಿಗೊಳಿಸಲಾಗುವುದು ಎಂದರು.
ಸಾಂಪ್ರದಾಯಿಕ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಘೋಷಣೆ ಮಾಡಿದರು.
* ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜರ್ಮನ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮೂಲಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು.
* ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು ನನ್ನ ವೃತ್ತಿ, ನನ್ನ ಆಯ್ಕೆ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಗುವುದು.
* ವಿಶ್ವ ಕೌಶಲ್ಯ, ಸ್ಪರ್ಧೆಯ ಪೂರ್ವಸಿದ್ಧತೆಗಾಗಿ ಅಯೋಜಿಸಲಾಗುವ ರಾಷ್ಟ್ರೀಯ ಮಟ್ಟದ India Skills-2026 ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುತ್ತದೆ. ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು 2,000 ಅಭ್ಯರ್ಥಿಗಳಿಗೆ ಅಗತ್ಯವಿರುವ ಟೂಲ್ಕಿಟ್ಗಳೊಂದಿಗೆ ಅಲ್ಪಾವಧಿ ತರಬೇತಿಯನ್ನು ನೀಡಲಾಗುವುದು. ಲಂಬಾಣಿ ಜನಾಂಗದ ಕಸೂತಿ ಕಲೆಯ ಬಗ್ಗೆ ತರಬೇತಿಯನ್ನು 1,000 ಅಭ್ಯರ್ಥಿಗಳಿಗೆ ದಾವಣಗೆರೆ ಮತ್ತು ಬೀದರ್ ಜಿಲ್ಲೆಗಳಲ್ಲಿನ ಕೌಶಲ್ಯ ತರಬೇತಿ ಕೇಂದ್ರಗಳಲ್ಲಿ ನೀಡಲಾಗುವುದು.
* ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ತ್ವರಿತ ಸಾಲ ಸೌಲಭ್ಯ ಒದಗಿಸಿ, ಆರ್ಥಿಕ ಅಗತ್ಯತೆಗಳ ಪೂರೈಕೆ ಮತ್ತು ಭದ್ರತೆ ಒದಗಿಸಿ, ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ 'ಅಕ್ಕ ಕೋ-ಆಪರೇಟಿವ್ ಸೊಸೈಟಿ' ಸ್ಥಾಪಿಸಲಾಗುವುದು. 'ಗೃಹಲಕ್ಷ್ಮಿ' ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರರಾಗಿ ಮಾಡಿ ರಾಜ್ಯಮಟ್ಟದ 'ಅಕ್ಕ ಕೋ-ಆಪರೇಟಿವ್ ಸೊಸೈಟಿ' ವ್ಯಾಪ್ತಿಗೆ ತರಲಾಗುವುದು.
* ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗಾಗಿ 'ವಾತ್ಸಲ್ಯ ಕೇಂದ್ರ'ಗಳನ್ನು ಸ್ಥಾಪಿಸಲಾಗುವುದು. ತಜ್ಞ ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುತ್ತಿರುವ ಬಡ ರೋಗಿಗಳು ಹಾಗೂ ಅವರ ಆರೈಕದಾರರಿಗಾಗಿ ವಿಶ್ರಾಂತಿ ಗೃಹಗಳನ್ನು ಸ್ಥಾಪಿಸಲಾಗುವುದು.
* ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆಯನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವ-ಸಹಾಯ ಸಂಘಗಳ ಮಹಿಳೆಯರ ಮೂಲಕ ನಿರ್ವಹಿಸುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ 10 ನಗರ ಪ್ರದೇಶಗಳಲ್ಲಿ ಪ್ರಾರಂಭಿಸಲಾಗುವುದು.
* ಪಿ.ಎಮ್. ಸ್ವನಿಧಿ ಯೋಜನೆಯಡಿ ಸಾಲದ ಗರಿಷ್ಠ ಮಿತಿಯನ್ನು ತಲುಪಿರುವ ಬೀದಿಬದಿ ವ್ಯಾಪಾರಿಗಳು, ತಮ್ಮ ವ್ಯಾಪಾರ ವಹಿವಾಟನ್ನು ವಿಸ್ತರಿಸಲು ಒಂದು ಲಕ್ಷದವರೆಗಿನ ಸಾಲ ಪಡೆದಲ್ಲಿ ಶೇ.8ರಷ್ಟು ಬಡ್ಡಿ ಸಹಾಯಧನವನ್ನು ಸರ್ಕಾರದಿಂದ ನೀಡಲಾಗುವುದು.












Click it and Unblock the Notifications