Government Jobs; ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿಗೆ ತಡೆ
ಬೆಂಗಳೂರು, ಡಿಸೆಂಬರ್ 05: ಕರ್ನಾಟಕ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಆದೇಶವನ್ನು ಹೊರಡಿಸಿತ್ತು. ಆದರೆ ಈ ಆದೇಶಕ್ಕೆ ಈಗ ತಡೆ ನೀಡಲಾಗಿದ್ದು, ವಿಶೇಷ ರಾಜ್ಯಪತ್ರದ ಮೂಲಕ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ನೀಡುವ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗಿತ್ತು.
ಈ ಕುರಿತು ವೀರಭದ್ರ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ವಿಶೇಷ ರಾಜ್ಯ ಪತ್ರದಲ್ಲಿ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ 18.09.20240 ಅಧಿಸೂಚನೆ ಅನ್ವಯ ಯಾವುದೇ ಕುಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಆದೇಶದ ವಿವರ: ದಿನಾಂಕ 18.09.2024ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ಪಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಪ್ರತಿಯೊಂದು ಪವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃಂದ ಬಲದಲ್ಲಿ ಶೇಕಡ 2% ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ ಎಂದು ಹೇಳಿದೆ.
ಆದರೆ, ಸರ್ಕಾರವು 18.09.20240 ಅಧಿಸೂಚನೆಯನ್ವಯ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 19770 ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ 18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ 2ರಷ್ಟು ಮೀಸಲಾತಿ ನೀಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು. ಬಳಿಕ ಈ ಕುರಿತು ರಾಜ್ಯಪತ್ರದಲ್ಲಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿತ್ತು. ಯಾವ ಕ್ರೀಡೆಗಳು, ಅರ್ಹತೆಗಳು, ನಿಯಮಗಳ ಮಾಹಿತಿ ನೀಡಲಾಗಿತ್ತು.
ಆದೇಶದಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಪ್ರತಿ ಇಲಾಖೆಯ ಮಂಜೂರಾದ ವೃಂದ ಬಲದ ಶೇಕಡಾ ಶೇ 2ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕ ಅಭ್ಯರ್ಥಿಗಳಿಗೆ ಮೀಸಲಿರಿಸತಕ್ಕದ್ದು ಎಂದು ಕರ್ನಾಟಕ ಸರ್ಕಾರ ಹೇಳಿತ್ತು.
ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಪ್ರತಿ ನೇಮಕಾತಿ ಪ್ರಾಧಿಕಾರ ಗ್ರೂಪ್-ಎ, ಬಿ, ಸಿ ಮತ್ತು ಡಿ ವೃಂದಗಳ ನೇರ ನೇಮಕಾತಿಯ ಅರ್ಜಿಯಲ್ಲಿ ಕ್ರೀಡಾ ಸಾಧಕ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪ್ರತ್ಯೇಕ ಕಾಲಂ ಅನ್ನು ಒದಗಿಸಬೇಕು. ಸೂಕ್ತ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಭ್ಯವಾಗದಿದ್ದಲ್ಲಿ, ಅಂಥ ರಿಕ್ತ ಸ್ಥಾನಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಇತರ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು.
ಮೀಸಲಾತಿ ನೀಡುವ ಸಂದರ್ಭದಲ್ಲಿ ಒಬ್ಬ ಅಭ್ಯರ್ಥಿಯು ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಅಥವಾ ಆಟಗಳಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಕ್ರೀಡೆಗಳು ಅಥವಾ ಆಟಗಳ ಸದಸ್ಯರಾಗಿ ಭಾಗವಹಿಸಿದ್ದರೆ ಮಾತ್ರ ಅವರನ್ನು ಪ್ರತಿಭಾವಂತ ಕ್ರೀಡಾಪಟು ಎಂದು ಪರಿಗಣಿಸತಕ್ಕದ್ದು ಎಂದು ಸ್ಪಷ್ಟಪಡಿಸಿತ್ತು.












Click it and Unblock the Notifications