ಅನುಕಂಪ ಆಧಾರಿತ ನೇಮಕಾತಿಗೆ ಸರ್ಕಾರದ ತಡೆ; ವಿವರಗಳು
ಬೆಂಗಳೂರು, ಆಗಸ್ಟ್ 07; ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅನುಕಂಪ ಆಧಾರಿತ ನೇಮಕಾತಿಗಳಿಗೆ ತಡೆ ಹಾಕಿದೆ. ಮುಂದಿನ ಆದೇಶದ ತನಕ ಈ ತಡೆ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದು, ಏಕೆ ತಡೆ? ಎಂದು ಸಹ ಆದೇಶದಲ್ಲಿ ವಿವರಣೆ ನೀಡಿದೆ.
ಬಾಲಪ್ಪ, ಸರ್ಕಾರದ ಅಧೀನ ಕಾರ್ಯದರ್ಶಿ (ಸೇವೆಗಳು-ಬಿ & ಸಿ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಆದೇಶ ಪ್ರಾದೇಶಿಕ ಆಯುಕ್ತರ ಕಛೇರಿಗಳಿಂದ ಸ್ವೀಕೃತವಾಗುತ್ತಿರುವ ಅನುಕಂಪದ ನೇಮಕಾತಿ ಪ್ರಸ್ತಾವನೆಗಳ ಕುರಿತು ಮು೦ದಿನ ನಿರ್ದೇಶನದವರೆಗೆ ಯಾವುದೇ ಕ್ರಮ ಕೈಗೊಳ್ಳದೇ ತಡೆಹಿಡಿಯುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ. ಸರ್ಕಾರದ ಪತ್ರ ದಿನಾಂಕ 20/02/2023 ಮತ್ತು ಸರ್ಕಾರದ ಪತ್ರ 22/02/2023 ಉಲ್ಲೇಖಿಸಿದ್ದಾರೆ.

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಛೇರಿಗಳಲ್ಲಿ ನೇರ ನೇಮಕಾತಿ ಕೋಟಾದಡಿ ಗಣನೀಯ ಪ್ರಮಾಣದ ಗ್ರೂಪ್-ಸಿ ಹುದ್ದೆಗಳು ಖಾಲಿ ಇರುವುದನ್ನು ಗಮನಿಸಿ, ಸದರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದನ್ನು ಗಮನಿಸಿ, ಎಲ್ಲಾ ಪ್ರಾದೇಶಿಕ ಆಯುಕ್ತರ ಕಛೇರಿಗಳಿಗೆ ಪತ್ರ ಬರೆಯಲಾಗಿದೆ.
ತಮ್ಮ ಕಛೇರಿಗಳಲ್ಲಿ ಅನುಕಂಪದ ನೇಮಕಾತಿ ಕುರಿತು ಬಾಕಿ ಇರುವ ಪ್ರಸ್ತಾವನೆಗಳ ಪೈಕಿ ಪ್ರ.ದ.ಸ, ಶೀಘ್ರಲಿಪಿಗಾರರು ಮತ್ತು, ದ್ವಿ.ದ.ಸ ಹುದ್ದೆಗಳಿಗೆ ಅನುಕಂಪದ ನೇಮಕಾತಿ ಪ್ರಸ್ತಾವನೆಗಳನ್ನು ಜಿಲ್ಲಾ ಪಂಚಾಯತ್ಗಳಲ್ಲಿ ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಹುದ್ದೆಗಳ ಎದುರು ನೇಮಕ ಮಾಡಲು ಅನುವಾಗುವಂತೆ ನೌಕರರ ಇಚ್ಛೆಗನುಗುಣವಾಗಿ ಸಂಬಂಧಿಸಿದ ಜಿಲ್ಲಾ ಪಂಚಾಯತ್ಗಳಿಗೆ ಕಳುಹಿಸುವಂತೆ ತಿಳಿಸಲಾಗಿತ್ತು ಎಂದು ಹೇಳಿದೆ.
ಎಲ್ಲಾ ಜಿಲ್ಲಾ ಪಂಚಾಯತ್ಗಳಿಗೆ ಬರೆದ ಪತ್ರದಲ್ಲಿ, ಅನುಕಂಪದ ನೇಮಕಾತಿ ಕುರಿತು, ಪ್ರಾದೇಶಿಕ ಆಯುಕ್ತರ ಕಛೇರಿಯಿಂದ ಪ್ರಸ್ತಾವನೆ ಸ್ವೀಕೃತವಾದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅನುಕಂಪದ ನೇಮಕಾತಿ ನಿಯಮಗಳ ಅನುಸಾರ ವಿವರವಾಗಿ ಪರಿಶೀಲಿಸಿ, ಅನುಕಂಪದ ನೇಮಕಾತಿಗೆ ಅರ್ಹವೆಂದು ಕಂಡು ಬರುವ ಅಭ್ಯರ್ಥಿಗಳನ್ನು ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಹುದ್ದೆಯ ಎದುರು ಪರಿಗಣಿಸಿ, ಅಂತಹ ಅಭ್ಯರ್ಥಿಯನ್ನು ನೇಮಕ ಮಾಡಲು ಕ್ರಮವಹಿಸಬಹುದೆಂದು ತಿಳಿಸಲಾಗಿತ್ತು ಎಂದು ತಿಳಿಸಿದೆ.
ಏಕೆ ನೇಮಕಾತಿಗೆ ತಡೆ?; ಇತ್ತೀಚಿನ ಬೆಳವಣಿಗೆಯಂತೆ, ಪ್ರಾದೇಶಿಕ ಆಯುಕ್ತರ ಕಛೇರಿಗಳಿಂದ ಸ್ವೀಕೃತವಾಗುವ ಅನುಕಂಪದ ನೇಮಕಾತಿ ಪ್ರಸ್ತಾವನೆಗಳನ್ನು ಆಧರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾ ಪಂಚಾಯತ್ಗಳು ಅನುಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಹೀಗೆ ಮುಂದುವರೆದಲ್ಲಿ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಛೇರಿಗಳಲ್ಲಿ ನೇರ-ನೇಮಕಾತಿ ಖೋಟಾದಡಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಅನುಕಂಪದ ಆಧಾರದ ಮೇಲೆಯೇ ಭರ್ತಿ ಮಾಡಬಹುದಾದ ಸಂದರ್ಭ ಉಂಟಾಗುತ್ತದೆ.
ಈ ರೀತಿ ಆದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಛೇರಿಗಳ ಕಾರ್ಯನಿರ್ವಹಣೆಯ ಗುಣಮಟ್ಟ ಕುಸಿಯುವ ಸಾಧ್ಯತೆ ಇರುವುದಲ್ಲದೇ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ಗಳಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಮರಣ ಹೊಂದುವ ನೌಕರರ ಕುಟುಂಬದ ಸದಸ್ಯರಿಗೆ ನೇಮಕಾತಿ ನೀಡಲು ಹುದ್ದೆಗಳು ಲಭ್ಯವಾಗದ ಸನ್ನಿವೇಶ ನಿರ್ಮಾಣವಾಗುತ್ತದೆ ಎಂದು ವಿವರಣೆ ನೀಡಲಾಗಿದೆ.
ಈ ಅಂಶಗಳನ್ನು ಗಮನಿಸಿ, ಪ್ರಾದೇಶಿಕ ಆಯುಕ್ತರ ಕಛೇರಿಯಿಂದ ಸ್ವೀಕೃತವಾಗುವ ಪ್ರಸ್ತಾವನೆಗಳನ್ನು ಆಧರಿಸಿ ಮಾಡುವ ಅನುಕಂಪದ ನೇಮಕಾತಿಯನ್ನು ಒಂದು ನಿರ್ದಿಷ್ಟ ಪ್ರಮಾಣಕ್ಕೆ ಸೀಮಿತಗೊಳಿಸುವುದು ಅಗತ್ಯವೆಂದು ನಿರ್ಣಯಿಸಿ, ಈ ಸಂಬಂಧದ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ.
ಆದ್ದರಿಂದ ಈ ವಿಷಯದ ಕುರಿತು ಸರ್ಕಾರದಿಂದ ಮುಂದಿನ ನಿರ್ದೇಶನ ನೀಡುವವರೆಗೆ ಪ್ರಾದೇಶಿಕ ಆಯುಕ್ತರ ಮುಖಾಂತರ ಸ್ವೀಕೃತವಾಗಿರುವ/ ಕೃತವಾಗುವ ಅನುಕಂಪದ ನೇಮಕಾತಿ ಪ್ರಸ್ತಾವನೆಗಳ ಕುರಿತು ಯಾವುದೇ ಕ್ರಮ ವಹಿಸದಂತೆ ಹಾಗೂ ಈಗಾಗಲೇ ಪರಿಶೀಲನೆಯಲ್ಲಿರುವ ಪ್ರಸ್ತಾವನೆಗಳನ್ನು ಯಾವ ಹಂತದಲ್ಲಿದೆಯೋ ಅದೇ ಹಂತಕ್ಕೆ ಬಾಕಿ ಇಡುವಂತೆ ತಿಳಿಸಲಾಗಿದೆ.












Click it and Unblock the Notifications