ನಿರೀಕ್ಷಿಸಿ; ಭರ್ತಿಯಾಗಲಿವೆ ವಿವಿಧ ಇಲಾಖೆಗಳ ಹುದ್ದೆ, ವಿವರ
ಬೆಂಗಳೂರು, ಜನವರಿ 01; ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ ಎಂಬುದು ಗುಟ್ಟಾಗಿ ಉಳಿದಿಲ್ಲ. 2024ರಲ್ಲಿ ಹಲವು ಇಲಾಖೆಗಳ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಆದ್ದರಿಂದ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರು ಪರೀಕ್ಷೆಗಳ ತಯಾರಿಯನ್ನು ಆರಂಭಿಸಬಹುದು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಹುದ್ದೆಗಳು ಖಾಲಿ ಇರುವ ಕುರಿತು ಚರ್ಚೆ ನಡೆದಿದೆ. ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಿ ಒಟ್ಟು 43 ಇಲಾಖೆಗಳಿವೆ ಎಂದು ಹೇಳಿದ್ದು, ಎಲ್ಲಾ ವೃಂದದ ಹುದ್ದೆಗಳು ಸೇರಿದಂತೆ ಇಲಾಖೆಗಳಿಗೆ ಮಂಜೂರಾಗಿರುವ ಹುದ್ದೆಗಳ ವಿವಿರಗಳನ್ನು ಕೊಟ್ಟಿದ್ದಾರೆ.

ಅಧಿಕಾರಿ ಹುದ್ದೆಗಳು 86,309, ಸಿಬ್ಬಂದಿ 6,85,716 ಮತ್ತು ಒಟ್ಟು ಮಂಜೂರಾಗಿರುವ ಹುದ್ದೆಗಳು 7,72,025 ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಹಲವು ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗಿದೆ. ಹಣಕಾಸು ಇಲಾಖೆ ಒಪ್ಪಿಗೆ ಸಿಕ್ಕ ನಂತರ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಲಿವೆ.
ಇಲಾಖೆಗಳಿಂದ ಮಾಹಿತಿ ಸಂಗ್ರಹ; ಕರ್ನಾಟಕ ಗೆಜೆಟೆಡ್ ಪ್ರೊಬೆಷನರ್ಗಳ ನೇಮಕಾತಿ (ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ) ನಿಯಮಗಳು 1997ರ ಷೆಡ್ಯೂಲ್ 1ರಲ್ಲಿ ನಿರ್ದಿಷ್ಟಪಡಿಸಿರುವ ಗ್ರೂಪ್-ಎ, ಗ್ರೂಪ್-ಬಿ ನೇಮಕಾತಿ ನಡೆಯಲಿದೆ. ಇದಕ್ಕಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈಗಾಗಲೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಸಂಗ್ರಹ ಮಾಡಿದೆ.
ಇಲಾಖೆವಾರು ಅಗತ್ಯಕ್ಕೆ ಅನುಗುಣವಾಗಿ ಗ್ರೂಪ್-ಎ, ಗ್ರೂಪ್-ಬಿ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ. ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದು, ಕೆಪಿಎಸ್ಸಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ, ಬಳಿಕ ಅಧಿಸೂಚನೆ ಪ್ರಕಟವಾಗುತ್ತದೆ. ಕೆಪಿಎಸ್ಸಿ ಸಹ 2024ರಲ್ಲಿ ಭರ್ತಿ ಮಾಡಬೇಕಾದ ವಿವಿಧ ಇಲಾಖೆಗಳ ಹುದ್ದೆಗಳ ಮಾಹಿತಿಯನ್ನು ಸಂಗ್ರಹ ಮಾಡಿದೆ.
ಸರ್ಕಾರದ ಮಾಹಿತಿಯಂತೆ 2,55,920 ಹುದ್ದೆಗಳು ಖಾಲಿ ಇವೆ. ಈ ಪೈಕಿ ತುರ್ತಾಗಿ ಭರ್ತಿ ಮಾಡಬೇಕಿರುವ ಇಲಾಖೆಗಳ ಹುದ್ದೆಗಳನ್ನು ಆದ್ಯತೆಯ ಮೇಲೆ ತುಂಬಲಾಗುತ್ತದೆ. ಗೃಹ ಇಲಾಖೆಯಲ್ಲಿ ಅಧಿಕಾರಿ ಸಿಬ್ಬಂದಿ ಸೇರಿ 22,069 ಹುದ್ದೆ ಖಾಲಿ ಇದೆ. ಉಳಿದಂತೆ ಪಶುಸಂಗೋಪನೆ, ಉನ್ನತ ಶಿಕ್ಷಣ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.
ಕರ್ನಾಟಕ ಸರ್ಕಾರ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಬೇಕಿದೆ. ಇಂತಹ ಸಮಯದಲ್ಲಿ ಹೊಸ ನೇಮಕಾತಿಗೆ ಚಾಲನೆ ನೀಡಿದರೆ ಸರ್ಕಾರದ ಮೇಲೆ ಹೊರೆ ಹೆಚ್ಚಲಿದೆ. ಆದರೆ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಇದು ಅನಿವಾರ್ಯವಾಗಿದೆ. ಹೊಸ ನೇಮಕಾತಿ ವಿಳಂಬಗೊಳಿಸಿ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವುದಕ್ಕೆ ಈಗಾಗಲೇ ಆಕ್ರೋಶ ವ್ಯಕ್ತವಾಗಿದೆ.
ಹುದ್ದೆಗಳು ಖಾಲಿ ಇರುವುದರಿಂದ ಇರುವ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚಾಗಿದೆ. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಲಿ ಇರುವ ಹುದ್ದೆಗಳಲ್ಲಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ.
ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿದೆ ಹಾಗೂ ಖಾಲಿ ಇರುವ ಮುಂಬಡ್ತಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳು ಲಭ್ಯವಾದಂತೆ ಕಾಲಕಾಲಕ್ಕೆ ಮುಂಬಡ್ತಿ ನೀಡುವ ಮೂಲಕ ಭರ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಣೆಯನ್ನು ಸಹ ನೀಡಿದ್ದಾರೆ.












Click it and Unblock the Notifications