ಶೀಘ್ರದಲ್ಲೇ 12 ಸಾವಿರ ಪೋಲಿಸ್ ಹುದ್ದೆಗಳ ಭರ್ತಿ: ಮೈಸೂರಿನಲ್ಲಿ ಗೃಹ ಸಚಿವ ಭರವಸೆ
ಮೈಸೂರು, ನವೆಂಬರ್, 10: ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇವೆ. ಸದ್ಯ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮೈಸೂರಿನಲ್ಲಿ ತಿಳಿಸಿದರು.
ನಗರ ಪೊಲೀಸ್ ಘಟಕದಿಂದ ನಿರ್ಮಿಸಿರುವ ಹೆಬ್ಬಾಳು ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಲಾಯಿತು. ಈ ವೇಳೆ ಮಾತನಾಡಿದ ಅವರು, ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇವೆ. ಈಗ ಐದು ಸಾವಿರ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗಿದೆ. ಬಿಜೆಪಿ ಸರ್ಕಾರ ಬರುವ ಮುನ್ನ ಪೊಲೀಸ್ ಇಲಾಖೆಯಲ್ಲಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಸಾವಿರಾರು ಖಾಲಿ ಹುದ್ದೆ ಭರ್ತಿ ಮಾಡುವ ಮೂಲಕ ಇಲಾಖೆಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ.
ಮೈಸೂರಿನಲ್ಲಿ 8 ಕಿಲೋ ಮೀಟರ್ ಸೈಕಲ್ ಟ್ರ್ಯಾಕ್ ನಿರ್ಮಾಣ, ಮಾರ್ಗಗಳ ವಿವರ ಇಲ್ಲಿದೆ
ಕಳೆದ ಮೂರು ವರ್ಷಗಳಲ್ಲಿ ಶೇಕಡಾ 49ರಷ್ಟು ಪೊಲೀಸರಿಗೆ ಸರ್ಕಾರ ವಸತಿ ಗೃಹ ವ್ಯವಸ್ಥೆ ಕಲ್ಪಿಸಿದೆ. ಒಂದು ಕೋಣೆ ಬದಲು ಎರಡು ಕೋಣೆಯ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದೆಲ್ಲೆಡೆ 117 ಪೊಲೀಸ್ ಠಾಣೆ ನಿರ್ಮಿಸಲಾಗಿದೆ ಎಂದರು.
ಸ್ವಂತ ಕಟ್ಟಡವಿಲ್ಲದೇ ಸಮಸ್ಯೆ ಆಗಿತ್ತು
ನಂತರ ಶಾಸಕ ಎಲ್.ನಾಗೇಂದ್ರ ಮಾತನಾಡಿ, ಹೆಬ್ಬಾಳು ಪೊಲೀಸ್ ಠಾಣೆ ಹಲವು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿತ್ತು. ಚಾಮರಾಜ ಕ್ಷೇತ್ರ ವ್ಯಾಪ್ತಿಯ ಕೆಲ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡವಿಲ್ಲದೇ ಸಮಸ್ಯೆ ಆಗಿತ್ತು. ಇದರಿಂದ ಕರ್ತವ್ಯ ನಿರ್ವಹಿಸುವ ಪೊಲೀಸರೊಂದಿಗೆ ಸಾರ್ವಜನಿಕರಿಗೂ ಸಮಸ್ಯೆಯಾಗಿತ್ತು. ಈಗ ಹೊಸ ಕಟ್ಟಡ ನಿರ್ಮಿಸಿ ಕೊಟ್ಟಿರುವುದು ಸಂತಸ ತಂದಿದೆ ಎಂದರು.
ಸಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದರು?
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ರೂಪಾ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ, ಮೈಲ್ಯಾಕ್ ಅಧ್ಯಕ್ಷ ರಘು ಕೌಟಿಲ್ಯ, ಪಾಲಿಕೆ ಸದಸ್ಯರಾದ ಶ್ರೀನಿವಾಸ್, ಪ್ರೇಮಾ ಶಂಕರೇಗೌಡ, ಲಕ್ಷ್ಮೀ ಶಿವಣ್ಣ, ಕೆ.ವಿ.ಶ್ರೀಧರ್, ಮಾಜಿ ಪಾಲಿಕೆ ಸದಸ್ಯರಾದ ಎಂ.ಶಿವಣ್ಣ, ಮಹದೇವಪ್ಪ, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಕ್ರವರ್ತಿ, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಎಂ.ಎಸ್.ಗೀತ, ಎಸಿಪಿ ಶಿವಶಂಕರ್, ಹೆಬ್ಬಾಳು ಠಾಣೆ ಇನ್ಸ್ಪೆಕ್ಟರ್ ಕೆ.ಆರ್. ಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಾಯ್ಯಾಂಗ ಬಂಧನದಲ್ಲಿರುವ 107 ಜನರು
ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಂತಿಮ ವರದಿ ನೀಡಿದ ಮೇಲೆ ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ 107 ಜನರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಕುರಿತಂತೆ ತನಿಖೆ ನಡೆಯುತ್ತಿದೆ. ಅಕ್ರಮ ನೇಮಕಾತಿ ಕುರಿತು ಸಿಐಡಿ ಅಂತಿಮ ವರದಿ ನೀಡುವವರೆಗೆ ಪರೀಕ್ಷೆ ನಡೆಸುವ ಪ್ರಶ್ನೆಯೇ ಇಲ್ಲ,'' ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ
ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲಪಡಿಸಿ ಸುಧಾರಿಸಲು ಮತ್ತು ತ್ವರಿತಗತಿಯಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ಆನ್ಲೈನ್ನಲ್ಲಿ ದೂರು ದಾಖಲು 112 ಸಹಾಯವಾಣಿಗೆ ಕರೆ ಮಾಡಿದರೆ ನಗರ ಪ್ರದೇಶದಲ್ಲಿ 9 ನಿಮಿಷ, ಗ್ರಾಮಾಂತರ ಪ್ರದೇಶದಲ್ಲಿ 20 ನಿಮಿಷಕ್ಕೆ ಸಿಬ್ಬಂದಿ ಹಾಜರಾಗಿ ಕ್ರಮ ಕೈಗೊಳ್ಳಲಿದ್ದಾರೆ. ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆಯನ್ನು ಈಗಾಗಲೇ ತೆರೆಯಲಾಗಿದೆ. ಮಹಿಳಾ ಠಾಣೆಯಿದ್ದರೂ ಸಾಮಾನ್ಯ ಠಾಣೆಗಳಲ್ಲಿ ಮೂವರು ಮಹಿಳಾ ಸಿಬ್ಬಂದಿ ಇರುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.