ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ; ಪದವೀಧರರು ಅರ್ಜಿ ಹಾಕಿ
ಬೆಂಗಳೂರು, ಡಿಸೆಂಬರ್ 06; ಕರೂರ್ ವೈಶ್ಯ ಬ್ಯಾಂಕ್ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಡಿಸೆಂಬರ್ 31ರ ತನಕ ಅರ್ಜಿ ಸಲ್ಲಿಸಬಹುದಾಗಿದೆ.
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯಗಳಿಂದ ಶೇ 50ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ನವೆಂಬರ್ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ಮತ್ತು ಗರಿಷ್ಠ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಸಿದ್ಧಪಡಿಸಿ ನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 18,000 ರೂ. ನಿಗದಿ ಮಾಡಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ಗೆ ಭೇಟಿ ನೀಡಬಹುದಾಗಿದೆ. ವೆಬ್ ಸೈಟ್ ವಿಳಾಸ https://www.kvb.co.in/
ಅಧಿಸೂಚನೆ ವಾಪಸ್; ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂಮಾಪಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಹೊರಡಿಸಿರುವ ಅಧಿಸೂಚನೆಯನ್ನು ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹಿಂಪಡೆಯಲಾಗಿದೆ. ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.
ಅರ್ಜಿ ಆಹ್ವಾನ; ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸಲು ಮಾಜಿ ಸೈನಿಕರಿಂದ ಅರ್ಜಿ ಕರೆಯಲಾಗಿದೆ. ಆಸಕ್ತ, ಅರ್ಹರು ತಮ್ಮ ಸೇವಾ ವಿವರಗಳೊಂದಿಗೆ ಡಿಸೆಂಬರ್ 15ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08182-220925 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಕೊಪ್ಪಳದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಕರೆಯಲಾಗಿತ್ತು. ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 8ರ ತನಕ ವಿಸ್ತರಣೆ ಮಾಡಲಾಗಿದೆ.
ಕೊಪ್ಪಳ ಜಿಲ್ಲಾ ಕಚೇರಿಯಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಅಭ್ಯರ್ಥಿಗೆ ಮಾಸಿಕ 15,000 ರೂ. ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿ ವಯಸ್ಸು 40 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯವರಾಗಿರಬೇಕು. ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
ಆಸಕ್ತರು ಅರ್ಜಿಯೊಂದಿಗೆ ತಮ್ಮ ಸ್ವವಿವರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ , ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 08539-220607.












Click it and Unblock the Notifications