KPSC: ಆ.27ರಂದು ಕೆಪಿಎಸ್ಸಿ ಪರೀಕ್ಷೆ, ಅಕ್ರಮ ತಡೆಯಲು ಕ್ರಮಗಳು
ಬೆಂಗಳೂರು, ಆಗಸ್ಟ್ 22: ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಆಗಸ್ಟ್ 27ರ ಮಂಗಳವಾರ ನಡೆಸಲಿದೆ. ಸುಮಾರು 2,10,910 ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ ನಡೆಯದಂತೆ ಆಯೋಗ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದೆ. ವೆಬ್ಸೈಟ್ಗೆ ಭೇಟಿ ನೀಡಿ ಅಭ್ಯರ್ಥಿಗಳು ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಕೆಎಎಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ನಿರ್ವಹಣೆ ಕಾರ್ಯ ಅತಿ ಸೂಕ್ಷ್ಮವಾದದ್ದು. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯಿಂದ, ಪ್ರಾಮಾಣಿಕವಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರೀಕ್ಷೆಯ ಕುರಿತು ಪೂರ್ವ ಸಿದ್ಧತಾ ಸಭೆಗಳನ್ನು ನಡೆಸಿದ್ದಾರೆ. ಯಾವುದೇ ಲೋಪದೋಷಗಳು ಬಾರದಂತೆ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಪರೀಕ್ಷಾ ಕೊಠಡಿಗಳಲ್ಲಿ ಅಭ್ಯರ್ಥಿಗಳಿಗೆ ಸೂಕ್ತ ಆಸನ, ಗಾಳಿ ಬೆಳಕಿನ ವ್ಯವಸ್ಥೆ ಇರಬೇಕು. ಮಳೆಗಾಲವಾದ್ದರಿಂದ ಕೊಠಡಿಗಳಲ್ಲಿ ಮಳೆ ನೀರಿನಿಂದ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ. ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಬಗ್ಗೆ ಈಗಾಗಲೇ ಮಾಹಿತಿಯನ್ನು ನೀಡಲಾಗಿದೆ.
ಅಕ್ರಮ ತಡೆಗೆ ಕ್ರಮಗಳು: ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ಬಂಡಲ್ಗಳನ್ನು ಕೊಂಡೊಯ್ಯಲು ನೇಮಿಸಿರುವ ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು, ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಿದ್ದಾರೆ. ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಓಎಂಆರ್ ಬಂಡಲ್ಗಳನ್ನು ಅಂಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿಕೊಡಲಿದ್ದಾರೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕಚೇರಿಗಳು ಓಎಂಆರ್ ಬಂಡಲ್ಗಳು ತಲುಪುವವರೆಗೂ ತಪ್ಪದೇ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಯಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ಮೊಬೈಲ್ ಜಾಮರ್ ಅಳವಡಿಸಲಾಗುತ್ತದೆ. ಪ್ರತಿ ಕೊಠಡಿಯ ಸಿಸಿಟಿವಿ ದೃಶ್ಯಗಳನ್ನು ವೀಕ್ಷಣೆ ಮಾಡಲು ಅನುಕೂಲ ಮಾಡಿಕೊಡಲಾಗುತ್ತದೆ. ಅಲ್ಲದೇ ಕೊಠಡಿ ಮೇಲ್ವಿಚಾರಕರಿಗೂ ಬಾಡಿ ಕ್ಯಾಮರಾ ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ಉಪಯೋಗಿಸಿ ಕೆಲವು ಅಭ್ಯರ್ಥಿಗಳು ಅಕ್ರಮ ಎಸಗಲು ಪ್ರಯತ್ನಿಸಿರುವುದು ಇದೆ. ಆದ್ದರಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಬೇಕು. ಲೋಕಸೇವಾ ಆಯೋಗ ನೀಡಿರುವ ಪರೀಕ್ಷಾ ಕೈಪಿಡಿಯ ಅನುಸಾರ ಪರೀಕ್ಷಾ ಕಾರ್ಯದಲ್ಲಿ ತೊಡಗಬೇಕು. ಕೊಠಡಿ ಮೇಲ್ವಿಚಾರಕರಿಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸರಿಯಾದ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಆಗಸ್ಟ್ 27ರಂದು ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಸೆಕ್ಷನ್ 114 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಕೇಂದ್ರಗಳ ಅಕ್ಕಪಕ್ಕದಲ್ಲಿ ಕಾರ್ಯನಿರ್ವಹಿಸುವ ಜೆರಾಕ್ಸ್, ಕಂಪ್ಯೂಟರ್ ಹಾಗೂ ಇಂಟರ್ನೆಟ್ ಸೆಂಟರ್ಗಳನ್ನು ಬಂದ್ ಮಾಡಲಾಗುತ್ತದೆ. ಒಂದು ವೇಳೆ ಯಾವುದಾದರು ಜೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್ ತೆರೆದಿದ್ದರೆ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ಕೊಡಲಾಗಿದೆ.
ಪೂರ್ವಭಾವಿ ಪರೀಕ್ಷೆಯು ಆಗಸ್ಟ್ 27ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿದೆ. ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷಾ ಮಾಹಿತಿ ಕೈಪಿಡಿ ಬಿಡುಗಡೆ ಮಾಡಿದೆ.












Click it and Unblock the Notifications