ಏಪ್ರಿಲ್ 1 ಹಾಗೂ 2ರಂದು ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆ
ಮಂಡ್ಯ, ಮಾರ್ಚ್ 29; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಗ್ರೂಪ್ 'ಸಿ' ಹುದ್ದೆಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ. ಏಪ್ರಿಲ್ 1 ಹಾಗೂ 2 ರಂದು ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು ತಿಳಿಸಿದ್ದಾರೆ.
ಬುಧವಾರ ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಅವರು ಪರೀಕ್ಷಾ ಸಂಬಂಧ ಸಭೆ ನಡೆಸಿದರು. ಅಧಿಕಾರಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಯನ್ನು ಪಾಲನೆ ಮಾಡಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ, ಜೊತೆಗೆ ಯಾವುದೇ ಆಕ್ರಮಗಳು ನಡೆಯದಂತೆ ಕ್ರಮವಹಿಸಿ ಎಂದು ಸೂಚನೆ ನೀಡಿದರು.

ಏಪ್ರಿಲ್ 1ರಂದು ಬೆಳಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ, ಏಪ್ರಿಲ್ 2ರಂದು ಬೆಳಗ್ಗೆ 10 ಗಂಟೆಯಿಂದ 11.30 ಗಂಟೆವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಕೆಪಿಎಸ್ಸಿ ವೆಬ್ಸೈಟ್ನಲ್ಲಿ ಲಭ್ಯವಿದೆ.
ಮಂಡ್ಯ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಮೂವರು ಸದಸ್ಯ ಸಮಿತಿ ನೇಮಕಮಾಡಲಾಗಿದೆ. ಜೊತೆಗೆ ಮಾರ್ಗಾಧಿಕಾರಿ, ನಿರೀಕ್ಷಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಎಲ್ಲಾ ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯಲು ಎಲ್ಲಾ ಹಂತದಲ್ಲೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್ , ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಹಾಗೂ ಸೈಬರ್ ಅಂಗಡಿಗಳನ್ನು ಮುಚ್ಚಿಸಲು ಕ್ರಮವಹಿಸಲು ಸೂಚಿಸಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ದಂಡ ಪ್ರಕ್ರಿಯೆ ಸಂಹಿತೆ 1973ರ ಸೆಕ್ಷನ್ 107 ಮತ್ತು 110 ಅಡಿಯಲ್ಲಿ ಕ್ರಮವಹಿಸಲಾಗುತ್ತದೆ.












Click it and Unblock the Notifications