KPSC: ಡಿಸೆಂಬರ್ನಲ್ಲಿ ಕೆಎಎಸ್ ನೇಮಕಾತಿ ಪೂರ್ವಭಾವಿ ಪರೀಕ್ಷೆ?
ಬೆಂಗಳೂರು, ಸೆಪ್ಟೆಂಬರ್ 29: ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಆಗಸ್ಟ್ 27ರಂದು ನಡೆಸಿತ್ತು. ಆದರೆ ಪ್ರಶ್ನೆ ಪತ್ರಿಕೆಯಲ್ಲಿನ ತಪ್ಪು ಕನ್ನಡದ ವಿಚಾರಕ್ಕೆ ಪರೀಕ್ಷೆ ಭಾರೀ ಸುದ್ದಿಯಾಗಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮರು ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದರು. ಲಕ್ಷಾಂತರ ಅಭ್ಯರ್ಥಿಗಳು ಈಗ ಮರು ಪರೀಕ್ಷೆ ಯಾವಾಗ? ಎಂದು ಕಾದು ಕುಳಿತಿದ್ದಾರೆ.
ಕೆಪಿಎಸ್ಸಿ ಡಿಸೆಂಬರ್ ತಿಂಗಳಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಮರು ಆಯೋಜಿಸಲು ಯೋಜನೆ ರೂಪಿಸಿದೆ. ಅಕ್ಟೋಬರ್ನಲ್ಲಿ ಹಬ್ಬದ ರಜೆಗಳು, ವಿವಿಧ ಬೇರೆ ಪರೀಕ್ಷೆಗಳು ನಿಗದಿಯಾಗಿವೆ. ಆದ್ದರಿಂದ ಡಿಸೆಂಬರ್ನಲ್ಲಿ ಪರೀಕ್ಷೆಗಳನ್ನು ನಡೆಸಲು ಯೋಜಿಸಲಾಗಿದೆ. ಈ ಕುರಿತು ದಿನಾಂಕ ಇನ್ನೂ ಅಂತಿಮಗೊಳ್ಳಬೇಕಿದೆ.

ಡಿಸೆಂಬರ್ ತಿಂಗಳಿನಲ್ಲಿ ಒಂದು ಭಾನುವಾರ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಕೆಪಿಎಸ್ಸಿ ತಯಾರಿ ನಡೆಸುತ್ತಿದೆ. ಆದ್ದರಿಂದ ಆಗ ಯುಪಿಎಸ್ಸಿ ಯಾವುದಾದರೂ ಬೇರೆ ಪರೀಕ್ಷೆಗಳನ್ನು ನಿಗದಿಗೊಳಿಸಿದೆಯೇ? ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಆಗಸ್ಟ್ನಲ್ಲಿ ಆದಂತೆ ಪರೀಕ್ಷೆ ದಿನಾಂಕ ಘೋಷಣೆ ಮಾಡಿ, ಮತ್ತೆ ಅದನ್ನು ಮುಂದೂಡುವ ಕೆಲಸ ಬೇಡ ಎಂದು ಒಂದೇ ದಿನಾಂಕ ನಿಗದಿಗೊಳಿಸಲು ಕೆಪಿಎಸ್ಸಿ ಮುಂದಾಗಿದೆ.
ಸಿದ್ದರಾಮಯ್ಯ ಸೂಚನೆ: ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಮೊದಲು ಆಗಸ್ಟ್ 25ರಂದು ನಿಗದಿ ಮಾಡಲಾಗಿತ್ತು. ಆದರೆ ಅಂದು ಬೇರೆ ಬೇರೆ ಕೇಂದ್ರಿಯ ಪರೀಕ್ಷೆಗಳು ಇದ್ದ ಕಾರಣ ಅದನ್ನು ಆಗಸ್ಟ್ 27ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಚರ್ಚೆಗೆ ಕಾರಣವಾಗಿತ್ತು.
ಕೆಪಿಎಸ್ಸಿ ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪು ಕನ್ನಡ ಅಭ್ಯರ್ಥಿಗಳ ಗೊಂದಲಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಮರು ಪರೀಕ್ಷೆ ನಡೆಸಬೇಕು ಎಂಬ ಕೂಗು ಜೋರಾಗಿತ್ತು. ಈ ವಿಚಾರ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮರು ಪರೀಕ್ಷೆಯನ್ನು ನಡೆಸಲು ಕೆಪಿಎಸ್ಸಿಗೆ ಸೂಚನೆ ನೀಡಿದ್ದರು. ಆದರೆ ಇನ್ನೂ ಮರು ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ.
ಯುಪಿಎಸ್ಸಿ ಯಾವುದೇ ಪರೀಕ್ಷೆ ದಿನವನ್ನು ನಿಗದಿ ಮಾಡದ ಭಾನುವಾರ ಡಿಸೆಂಬರ್ನಲ್ಲಿ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಕೆಪಿಎಸ್ಸಿ ಚಿಂತನೆ ನಡೆಸಿದೆ. ಅದಕ್ಕಾಗಿ ದಿನಾಂಕವನ್ನು ಹುಡುಕುತ್ತಿದೆ. ಪರೀಕ್ಷೆಗಳನ್ನು ನಡೆಸಲು ರಾಜ್ಯಾದ್ಯಂತ ಹಲವು ಕೇಂದ್ರಗಳು ಬೇಕಾಗುವ ಕಾರಣ, ಶಾಲಾ/ ಕಾಲೇಜುಗಳ ವೇಳಾಪಟ್ಟಿಯನ್ನು ಸಹ ನೋಡಿಕೊಳ್ಳಬೇಕಾಗುತ್ತದೆ. ಅಲ್ಲದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಯಾವುದಾದರೂ ಪರೀಕ್ಷೆಗಳನ್ನು ನಿಗದಿ ಮಾಡಿದಿಯೇ? ಎಂದು ಮಾಹಿತಿ ಪಡೆಯಬೇಕಿದೆ.
ಮರು ಪರೀಕ್ಷೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದ್ದೇನೆ' ಎಂದು ಹೇಳಿದ್ದರು.
'ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ' ಎಂದು ತಿಳಿಸಿದ್ದರು.
ಪೂರ್ವಭಾವೀ ಪರೀಕ್ಷೆ ಭಾರೀ ವಿವಾದಕ್ಕೆ ಕಾರಣವಾದ ಹಿನ್ನಲೆಯಲ್ಲಿ ಮರು ಪರೀಕ್ಷೆಯನ್ನು ಅತಿ ಎಚ್ಚರಿಕೆಯಿಂದ ನಡೆಸಲು ಕೆಪಿಎಸ್ಸಿ ತಯಾರಿಯನ್ನು ನಡೆಸುತ್ತಿದೆ. ಮೊದಲು ದಿನಾಂಕವನ್ನು ಅಂತಿಮಗೊಳಿಸಿಕೊಂಡು ಬಳಿಕ ಉಳಿದ ತಯಾರಿಯ ಕಡೆ ಗಮನಹರಿಸಲಿದೆ. 2 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಎಲ್ಲರೂ ಪರೀಕ್ಷೆ ದಿನಾಂಕ ಯಾವಾಗ ನಿಗದಿಯಾಗಲಿದೆ? ಎಂದು ಕಾದು ಕುಳಿತಿದ್ದಾರೆ.












Click it and Unblock the Notifications