ಕೆಪಿಎಸ್ಸಿ ಸದಸ್ಯರ ನೇಮಕಾತಿ ರದ್ದು ಕೋರಿ ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್
ಬೆಂಗಳೂರು, ಏಪ್ರಿಲ್ 13; ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸುವಂತೆ ಅರ್ಜಿ ಸಲ್ಲಿಕೆಯಾಗಿತ್ತು. ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಕೆಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ನೇಮಿಸಿದ ಆದೇಶ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಶಶಿ ಪ್ರಸಾದ್ ಗಾಂಧಿ ಮತ್ತು 11 ಮಂದಿ ಕೆಪಿಎಸ್ಸಿ ಸದಸ್ಯರ ನೇಮಕಾತಿ ಪ್ರಶ್ನಿಸಿ ಟಿ. ನರಸಿಂಹ ಮೂರ್ತಿ ಸಲ್ಲಿಸಿದ್ದ ಪಿಐಎಲ್ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ನೇತೃತ್ವದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತು.
ಅರ್ಜಿದಾರರ ಪರ ವಕೀಲರು, ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ನಿರ್ದಿಷ್ಟ ನಿಯಮಗಳನ್ನು ರೂಪಿಸಬೇಕು. ಆ ನಿಯಮಗಳನ್ನು ರೂಪಿಸುವವರೆಗೆ ಕೇಂದ್ರ ಲೋಕಸೇವಾ ಆಯೋಗದ ನಿವೃತ್ತ ಅಧ್ಯಕ್ಷ ಹೋಟಾ ಅವರ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಮಾಗಸೂರ್ಚಿಗಳನ್ನು ಪಾಲಿಸಬೇಕು ಎಂದು 2016ರಲ್ಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು ಎಂದು ಕೋರ್ಟ್ಗೆ ಮಾಹಿತಿ ನೀಡಿದರು.

ಆದರೆ, ಹೋಟಾ ಸಮಿತಿ ಮಾರ್ಗಸೂಚಿಯಂತೆ ಶೋಧನಾ ಸಮಿತಿ ರಚಿಸದೆ ಮತ್ತು ಯಾವುದೇ ನಿಯಮ ರೂಪಿಸದೆ ರಾಜ್ಯ ಸರ್ಕಾರವು ಕೆಪಿಎಸ್ಸಿಗೆ ಸದಸ್ಯರನ್ನು ನೇಮಿಸಿದೆ. ಹಾಗಾಗಿ, ಕೆಪಿಎಸ್ಸಿ ಸದಸ್ಯರನ್ನು ನೇಮಕಾತಿ ಆದೇಶ ರದ್ದುಪಡಿಸಬೇಕು ಮತ್ತು ಹೋಟಾ ಸಮಿತಿ ಅನುಸಾರ ಹೊಸದಾಗಿ ಸದಸ್ಯರನ್ನು ನೇಮಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.
ಅಧ್ಯಕ್ಷರ ನೇಮಕ; 2021ರಲ್ಲಿ ಕರ್ನಾಟಕ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ರನ್ನು ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದ ಶಿವಶಂಕರಪ್ಪ 2019ರ ಸೆಪ್ಟೆಂಬರ್ 3ರಂದು ಸದಸ್ಯರಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ನಿವೃತ್ತಿ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಕೆಪಿಎಸ್ಸಿ ಅಧ್ಯಕ್ಷರಾಗಿದ್ದರು.
ಈ ವರ್ಷ ಸರ್ಕಾರ ಕೆಪಿಎಸ್ಸಿ ಸದಸ್ಯರ ಸಂಖ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಸದಸ್ಯರ ಸಂಖ್ಯೆಯನ್ನು 14 ರಿಂದ 16ಕ್ಕೆ ಏರಿಕೆ ಮಾಡಿತ್ತು. ಆದರೆ ಸದಸ್ಯರ ಸಂಖ್ಯೆಯನ್ನು 8ಕ್ಕೆ ಇಳಿಕೆ ಮಾಡುವಂತೆ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್ ಅಧ್ಯಕ್ಷತೆಯ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿತ್ತು.
ಕರ್ನಾಟಕ ಸರ್ಕಾರ ಕೆಪಿಎಸ್ಸಿ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಕರ್ನಾಟಕ ಲೋಕಸೇವಾ ಆಯೋಗ (ಸೇವಾ ಷರತ್ತುಗಳು) ನಿಯಂತ್ರಣಗಳು-1957ಕ್ಕೆ ತಿದ್ದುಪಡಿ ಮಾಡಿ ಮಾರ್ಚ್ 15ರಂದು ಅಧಿಸೂಚನೆ ಪ್ರಕಟಿಸಿತ್ತು. ಅಲ್ಲದೇ ಹಾವೇರಿಯ ಶಕುಂತಲಾ ಎಸ್. ದುಂಡಿಗೌಡರ್ರನ್ನು ಅಧಿಕಾರೇತರ ವರ್ಗದಿಂದ ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿತ್ತು.
ಆಡಳಿತ ಸುಧಾರಣಾ ಆಯೋಗ ಫೆಬ್ರವರಿ 3ರಂದು ಮುಖ್ಯಮಂತ್ರಿಗಳಿಗೆ ಸಲ್ಲಿಕೆ ಮಾಡಿದ್ದ ವರದಿಯಲ್ಲಿ ಕೆಪಿಎಸ್ಸಿ ಸದಸ್ಯರ ಸಂಖ್ಯೆಯನ್ನು ಇಳಿಕೆ ಮಾಡುವಂತೆ ಶಿಫಾರಸು ಮಾಡಿತ್ತು. ಉತ್ತರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಸದಸ್ಯರ ಸಂಖ್ಯೆ 8 ಅಥವ ಅದಕ್ಕಿಂತ ಕಡಿಮೆ ಇದೆ. ಆಯೋಗದ ಅಧ್ಯಕ್ಷ ಸೇರಿ ಒಟ್ಟೂ ಸದಸ್ಯರ ಸಂಖ್ಯೆ ಇಳಿಕೆ ಮಾಡಬಹುದು ಎಂದು ಶಿಫಾರಸು ಮಾಡಲಾಗಿತ್ತು.
ಕೆಪಿಎಸ್ಸಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಕುರಿತು 1957ರ ಡಿಸೆಂಬರ್ 12ರಂದು ಹೊರಡಿಸಿದ್ದ ಅಧಿಸೂಚನೆಗೆ ಎರಡು ಬಾರಿ ತಿದ್ದುಪಡಿ ಮಾಡಲಾಗಿದೆ. 2014ರ ಜುಲೈ 16ರಂದು ತಿದ್ದುಪಡಿ ಮಾಡಿ ಸದಸ್ಯರ ಸಂಖ್ಯೆಯನ್ನು ಅಧ್ಯಕ್ಷರೂ ಸೇರಿ 14 ಸದಸ್ಯರಿಗೆ ಏರಿಕೆ ಮಾಡಲಾಗಿತ್ತು. 2023ರಲ್ಲಿ ಮತ್ತೊಮ್ಮೆ ತಿದ್ದುಪಡಿ ಮಾಡಲಾಗಿದೆ.












Click it and Unblock the Notifications