ಕೆಪಿಎಸ್ಸಿ ನೇಮಕಾತಿ; ಸಹಾಯಕ ಕಾರ್ಯಪಾಲಕ ಇಂಜಿನಿಯರ್ 18 ಹುದ್ದೆಗಳು
ಬೆಂಗಳೂರು, ಸೆಪ್ಟೆಂಬರ್ 08: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್-1 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 17/10/2022 ಕೊನೆಯ ದಿನವಾಗಿದೆ.
ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022ರ ಅನ್ವಯ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್ 'ಎ' ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಭರ್ತಿ ಮಾಡಲಾಗುತ್ತಿರುವ ಒಟ್ಟು ಹುದ್ದೆಗಳ ಸಂಖ್ಯೆ 18. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಅರ್ಜಿಯಲ್ಲಿನ ವಿವರ ತಿದ್ದುಪಡಿ/ ಸೇರ್ಪಡೆ ಮಾಡುವಂತೆ ಸಲ್ಲಿಸುವ ಮನವಿಯನ್ನು ಸ್ವೀಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯೊಂದಿಗೆ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಅಪ್ಲೋಡ್ ಮಾಡಬೇಕು. ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ಬಳಿಕ ಶುಲ್ಕವನ್ನು ಪಾವತಿ ಮಾಡಬೇಕು. ಶುಲ್ಕ ಪಾವತಿ ಮಾಡದ, ಅಪೂರ್ಣ, ಅಸ್ಪಷ್ಟ ಮಾಹಿತಿ ಇರುವ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವಾಗ ಸೂಚನೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್-1 ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ.
ಅಭ್ಯರ್ಥಿಗಳು ಮೂರು ಹಂತಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು. ಅರ್ಜಿ ಸಲ್ಲಿಕೆ ಮಾಡುವಾಗ ಗುರುತು ಇರುವ ಅಂಕಣಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. ಅಭ್ಯರ್ಥಿಗಳು ಮೊದಲ ಹಂತದಲ್ಲಿ profile creation/ updation, ಎರಡನೇ ಹಂತದಲ್ಲಿ application submission ಮತ್ತು ಮೂರನೇ ಹಂತದಲ್ಲಿ Fee payment ಹಂತಗಳನ್ನು ಅನುಸರಿಬೇಕಿದೆ.

ಅರ್ಜಿ ಶುಲ್ಕಗಳ ಮಾಹಿತಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ ಬಳಿಕ Pay Now ಲಿಂಕ್ ಕ್ಲಿಕ್ ಮಾಡಿದರೆ ಆನ್ಲೈನ್ ಪೇಮೆಂಟ್ ಆಯ್ಕೆ ಸಿಗುತ್ತದೆ. ಅರ್ಜಿ ಶುಲ್ಕ ಪಾವತಿ ಮಾಡಲು 18/10/2022 ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. ಆದರೆ ಎಲ್ಲಾ ವರ್ಗದ ಅಭ್ಯರ್ಥಿಗಳು 35 ರೂ. ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು.
ಅಭ್ಯರ್ಥಿಗಳು ಕಡ್ಡಾಯವಾಗಿ ನಿಗದಿ ಮಾಡಿದ ಶುಲ್ಕವನ್ನು ಪಾವತಿಸಬೇಕು. ಪಾವತಿಯಾದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ವಾಪಸ್ ನೀಡಲಾಗುವುದಿಲ್ಲ. ಆಯೋಗ ನಡೆಸುವ ಇತರ ಪರೀಕ್ಷೆ ಅಥವ ನೇಮಕಾತಿಗಳಿಗೆ ಹೊಂದಿಸಿಕೊಳ್ಳುವುದಿಲ್ಲ. ಶುಲ್ಕ ಸಂದಾಯ ಮಾಡದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕನ್ನಡ ಪರೀಕ್ಷೆ ಕಡ್ಡಾಯವಾಗಿದೆ
ಈ ಹುದ್ದೆಗಳನ್ನು ಇಲಾಖೆಯ ಪ್ರಸ್ತಾವನೆ ಅನ್ವಯ ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮ 5 (ಇ) ಪ್ರಕಾರ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನ್ವಯ ಆಯ್ಕೆ ನಡೆಸಲಾಗುತ್ತದೆ ಎಂದು ಅಧಿಸೂಚನೆ ಹೇಳಿದೆ.
ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಉಪ ನಿಯಮ 7ರಲ್ಲಿ ನಿಗದಿಪಡಿಸಲಾದಂತೆ ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ. ಈ ಪರೀಕ್ಷೆ ಗರಿಷ್ಠ 150 ಅಂಕಗಳ ಒಂದು ಪತ್ರಿಕೆಯನ್ನು ಒಳಗೊಂಡಿದೆ. ಕನಿಷ್ಠ 50 ಅಂಕಗಳನ್ನುಗಳಿಸಿದ ಅಭ್ಯರ್ಥಿ ಪರೀಕ್ಷೆಯಲ್ಲಿ ಅರ್ಹತೆ ಹೊಂದಲು ಅರ್ಹ. ಕನ್ನಡ ಪರೀಕ್ಷೆ ಪ್ರಶ್ನೆ ಪತ್ರಿಕೆಯನ್ನು ಎಸ್ಎಸ್ಎಲ್ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವಾಗಿಟ್ಟುಕೊಂಡು ರಚನೆ ಮಾಡಲಾಗುತ್ತದೆ.
ಸ್ಮರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ವಸ್ತು ನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ. ಅಭ್ಯರ್ಥಿ ಅರ್ಹತೆಗಾಗಿ ಸ್ಮರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇಕಡಾ 35ರಷ್ಟು ಅಂಕಗಳನ್ನುಗಳಿಸುವುದು ಕಡ್ಡಾಯ.

ವೇತನ ಮತ್ತು ವಿದ್ಯಾರ್ಹತೆ ವಿವರಗಳು
ಆಯ್ಕೆಯಾದ ಅಭ್ಯರ್ಥಿಗಳಿಗೆ 52,650-97,100 ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷದ ಗರಿಷ್ಠ ವಯೋಮಿತಿ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್, ಸಹಾಯವಾಣಿ
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್ಸಿ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡುವಾಗ ತೊಂದರೆ ಉಂಟಾದರೆ ಸಹಾಯವಾಣಿ 18005728707.
ಉಳಿದಂತೆ ಸಹಾಯವಾಣಿ ಸಂಖ್ಯೆಗಳು ಮೈಸೂರು 0821-2545956, ಬೆಳಗಾವಿ 0831-2475345, ಶಿವಮೊಗ್ಗ 08182-228099, ಕಲಬುರಗಿ 08472-227944 ಕರೆ ಮಾಡಬಹುದಾಗಿದೆ.












Click it and Unblock the Notifications