KPSC recruitment; ಸಾಂಖ್ಯಿಕ ನಿರೀಕ್ಷಕ 105 ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಅಕ್ಟೋಬರ್ 18; ಕರ್ನಾಟಕ ಲೋಕಸೇವಾ ಆಯೋಗ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 17/11/2022 ಕೊನೆಯ ದಿನವಾಗಿದೆ.
ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯೋಗವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022 ರ ಉಳಿಕೆ ಮೂಲ ವೃಂದ ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಮತ್ತು ಅರ್ಹರು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿಲ್ಲ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು On-line ಮೂಲಕ ಮಾತ್ರ 19/10/2022ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 18/11/2022 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡುವುದು ಕಡ್ಡಾಯವಾಗಿದೆ. ಒಟ್ಟು ಮೂರು ಹಂತಗಳಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ವಿವರಗಳನ್ನು ಭರ್ತಿ ಮಾಡಬೇಕು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ಮಾಡುವ ಮನವಿಯನ್ನು ತಿರಸ್ಕಾರ ಮಾಡಲಾಗುವುದು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ವಯೋಮಿತಿಯ ವಿವರಗಳು
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 17/11/2022 ನಮೂದಿಸಿರುವ ಕನಿಷ್ಟ ವಯೋಮಿತಿಯನ್ನು ಅಭ್ಯರ್ಥಿಗಳು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35 ವರ್ಷ. ಪ್ರವರ್ಗ (2)ಎ, (2)ಬಿ, 3(ಎ), 3(ಬಿ) 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು 40 ವರ್ಷಗಳನ್ನು ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳಿಗೆ ಶೈಕ್ಷಣಿಕ ವಿದ್ಯಾರ್ಹತೆ
ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ನಮೂದಿಸಿರುವ ವಿದ್ಯಾರ್ಹತೆಯನ್ನು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪದವಿಯನ್ನು ಈ ವಿಷಯಗಳಲ್ಲಿ ಕಡ್ಡಾಯವಾಗಿ ಹೊಂದಿರಬೇಕು. 1. Economics 2. Statistics 3.Mathematics 4. Computer Science.

ಅರ್ಜಿ ಶುಲ್ಕದ ವಿವರಗಳು
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕ ಪಾವತಿ ಮಾಡದಿದ್ದರೆ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಒಮ್ಮೆ ಶುಲ್ಕ ಪಾವತಿ ಮಾಡಿದ ನಂತರ ಅದನ್ನು ವಾಪಸ್ ನೀಡಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕ ಪಾವತಿಸಬೇಕು. ಪ್ರವರ್ಗ (2)ಎ, (2)ಬಿ, 3(ಎ), 3(ಬಿ) ಅಭ್ಯರ್ಥಿಗಳು 300 ರೂ.ಗಳು, ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಶುಲ್ಕ ಕಟ್ಟಬೇಕು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳು 35 ರೂ. ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಕೆ, ಸಹಾಯವಾಣಿ
ಅರ್ಜಿಗಳನ್ನು ಸಲ್ಲಿಕೆ ಮಾಡಲು ಮತ್ತು ವಿವರವಾದ ಅಧಿಸೂಚನೆ ಪಡೆಯಲು ಅರ್ಹ ಅಭ್ಯರ್ಥಿಗಳು ಕೆಪಿಎಸ್ಸಿ ವೆಬ್ಸೈಟ್ಗೆ ಭೇಟಿ ನೀಡಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 27,650 ರಿಂದ 52,650 ರೂ. ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಕೇಂದ್ರ ಕಚೇರಿ ಮಾಹಿತಿ ಕೇಂದ್ರ 080-30574957/ 30574901. ಮೈಸೂರು 0821-2545956, ಬೆಳಗಾವಿ 0831-2475345.












Click it and Unblock the Notifications