KPSC Recruitment; ಸಹಾಯಕ ಉದ್ಯೋಗಾಧಿಕಾರಿ ಹುದ್ದೆ, ವಿವರ
ಬೆಂಗಳೂರು, ಸೆಪ್ಟೆಂಬರ್ 12; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕಲ್ಯಾಣ ಕರ್ನಾಟಕ ವೃಂದದ ನೇಮಕಾತಿ ಇದಾಗಿದೆ. ಆಸಕ್ತ, ಅರ್ಹರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 7/10/2023 ಕೊನೆಯ ದಿನವಾಗಿದೆ.
ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರ ಅನ್ವಯ ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್ 'ಸಿ' ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ (ಉದ್ಯೋಗ ವಿಭಾಗ)ದ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಕೆ ಮಾಡುವಾಗ ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಓದಿ, ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು.
ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಬೇಕು. ಅರ್ಜಿ ಶುಲ್ಕವನ್ನು ಪಾವತಿಸದ ಹಾಗೂ ಸರಿಯಾದ ದಾಖಲೆ ಅಪ್ಲೋಡ್ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.
ವೇತನ, ವಿದ್ಯಾರ್ಹತೆ; ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಪದವಿ ಅಥವ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 35 ವರ್ಷಗಳು. ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ 30,350 ರೂ. ನಿಂದ 58,250 ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರ; ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು, ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂತಿರುಗಿಸಲಾಗುವುದಿಲ್ಲ ಅಥವಾ ಅದನ್ನು ಆಯೋಗವು ನಡೆಸುವ ಇತರೆ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ.
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಶುಲ್ಕ 600 ರೂ.ಗಳು. ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ.ಗಳು. ಮಾಜಿ ಸೈನಿಕರಿಗೆ 50 ರೂ.ಗಳು. ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಉಪನಿಯಮ (7)ರನ್ವಯ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಕಡ್ಡಾಯವಾಗಿದ್ದು, ಸದರಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು, ಆಯ್ಕೆಗೆ ಅರ್ಹರಾಗುವುದಿಲ್ಲ, ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು SSLCಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು.
ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾದ ನಂತರ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022ರ ಉಪ ನಿಯಮ 5(ಡಿ)ರಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಹೊಂದಲು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಠ ಪಕ್ಷ ಶೇಕಡ 35ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ.
ಅರ್ಹ ಮತ್ತು ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್ಸಿ ವೆಬ್ಸೈಟ್ಗೆ ಭೇಟಿ ನೀಡಬಹುದು.












Click it and Unblock the Notifications