ಕೆಪಿಟಿಸಿಎಲ್ ನೇಮಕಾತಿ ರದ್ದು; ಅಭ್ಯರ್ಥಿಗಳ ಪ್ರತಿಭಟನೆ
ಬೆಂಗಳೂರು, ನವೆಂಬರ್ 23 : ನೇಮಕಾತಿ ಆದೇಶವನ್ನು ರದ್ದುಗೊಳಿಸಿದ ಕ್ರಮವನ್ನು ಖಂಡಿಸಿ ಅಭ್ಯರ್ಥಿಗಳು ಕೆಪಿಟಿಸಿಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕರ್ನಾಟಕ ಸರ್ಕಾರದ ಸೂಚನೆಯಂತೆ ಹಲವು ಇಲಾಖೆಗಳ ನೇಮಕಾತಿ ತಾತ್ಕಾಲಿಕವಾಗಿ ಸ್ಥಗಿತವಾಗಿದೆ, ಕೆಲವು ರದ್ದಾಗಿದೆ.
ಸೋಮವಾರ ಉದ್ಯೋಗಾಕಾಂಕ್ಷಿಗಳು ಬೆಂಗಳೂರಿನ ಕೆಪಿಟಿಸಿಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕೆಪಿಟಿಸಿಎಲ್ ಹಾಗೂ ರಾಜ್ಯದ ವಿದ್ಯುತ್ ವಿತರಣಾ ನಿಗಮದಲ್ಲಿನ 3,646 ಹುದ್ದೆಗಳ ನೇಮಕಾತಿಯನ್ನು ಏಕಾಏಕಿ ರದ್ದು ಮಾಡಲಾಗಿದೆ ಎಂದು ಆರೋಪಿಸಿದರು.
2019ರ ಏಪ್ರಿಲ್ನಲ್ಲಿಯೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಇದುವರೆಗೂ ಪರೀಕ್ಷೆಗಳನ್ನು ನಡೆಸಿಲ್ಲ. ಈಗ ನೇಮಕಾತಿ ಆದೇಶವನ್ನು ರದ್ದುಗೊಳಿಸಲಾಗಿದೆ. ಹಣಕೊಟ್ಟು ಸ್ಪರ್ಧಾತ್ಮಕ ಪರೀಕ್ಷೆಗಾಗಿ ಕೋಚಿಂಗ್ಗೆ ಹೋದವರು ಏನು ಮಾಡಬೇಕು? ಎಂದು ಅಭ್ಯರ್ಥಿಗಳು ಪ್ರಶ್ನಿಸಿದರು.

ನೇಮಕಾತಿ ಆದೇಶ ರದ್ದು ಮಾಡಿರುವ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು. ಶೀಘ್ರವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದರು. ಖಾಸಗಿ ಕಂಪನಿ ಕೆಲಸ ಬಿಟ್ಟು ಕೋಚಿಂಗ್ಗೆ ಹೋಗಿದ್ದೇವೆ. ನಮಗೆ ಆದ ನಷ್ಟಕ್ಕೆ ಹೊಣೆ ಯಾರು? ಎಂದು ಪ್ರಶ್ನಿಸಿದರು.
ನೇಮಕಾತಿ ರದ್ದು; ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 2018-19ನೇ ಸಾಲಿನ 1559 ಎಇ, ಜೆಇ ಹುದ್ದೆಗಳ ನೇರ ನೇಮಕಾತಿ ತಕ್ಷಣದಿಂದ ಜಾರಿಗೆ ಬರುವಂತೆ ರದ್ದಾಗಿದೆ. ಆಡಳಿತಾತ್ಮಕ ಕಾರಣಗಳಿಂದಾಗಿ ನೇಮಕಾತಿ ರದ್ದು ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಲಾಕ್ ಡೌನ್ ತೆರವುಗೊಳಿಸಿದ ಬಳಿಕ ಆರ್ಥಿಕ ಪರಿಸ್ಥಿತಿ ಮತ್ತು ವಿವಿಧ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಹಲವು ಇಲಾಖೆಗಳ ನೇಮಕಾತಿ ರದ್ದುಪಡಿಸಲಾಗಿದೆ. ಇದರಿಂದಾಗಿ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.











Click it and Unblock the Notifications