KSRTC: ಹಂತ-ಹಂತವಾಗಿ ಖಾಲಿಯಿರುವ 4 ನಿಗಮಗಳ ಹುದ್ದೆಗಳು ಭರ್ತಿ: ಸಚಿವ ರಾಮಲಿಂಗಾರೆಡ್ಡಿ ಭರವಸೆ
ದಾವಣಗೆರೆ, ಆಗಸ್ಟ್, 23: 2016 ರಿಂದ ಇಲ್ಲಿಯವರೆಗೆ ಸುಮಾರು 16 ಸಾವಿರ ಸಿಬ್ಬಂದಿ ನಿವೃತ್ತರಾಗಿದ್ದು, ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಇದರಿಂದ ಹೆಚ್ಚುವರಿ ಬಸ್ಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ಹಂತಹಂತವಾಗಿ ಖಾಲಿ ಇರುವ ನಾಲ್ಕು ನಿಗಮಗಳ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ದಾವಣಗೆರೆಯಲ್ಲಿ ತಿಳಿಸಿದರು.
ನಗರದ ಪಿ.ಬಿ.ರಸ್ತೆಯಲ್ಲಿ ನಿರ್ಮಾಣಗುತ್ತಿರುವ ಬಸ್ ನಿಲ್ದಾಣ ಕಾಮಗಾರಿಯನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರೊಂದಿಗೆ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆ 4,000 ಬಸ್ಗಳ ಖರೀದಿಗೆ ಟೆಂಡರ್ ಆಗಿದ್ದು, ಇದರೊಂದಿಗೆ ಈಗ 1,000 ಬಸ್ಗಳನ್ನು ಖರೀದಿ ಸೇರಿ ಒಟ್ಟು 5 ಸಾವಿರ ಬಸ್ಗಳನ್ನು ಖರೀದಿಸಲಾಗುತ್ತಿದೆ. ಇದರಲ್ಲಿ ಎಲೆಕ್ಟ್ರಿಕ್ ಬಸ್ಗಳು ಇರಲಿವೆ. ನಗರ, ಗ್ರಾಮೀಣ ಸಾರಿಗೆಗೆ ಎಲೆಕ್ಟ್ರಿಕ್ ಬಸ್ಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದರು.

ಬಸ್ಗಳ ಖರೀದಿಗೆ 1,700 ಕೋಟಿ ನೀಡಲಾಗಿದೆ
ಸರ್ಕಾರ ಶಕ್ತಿ ಯೋಜನೆ ಸೇರಿದಂತೆ ಬಸ್ಗಳ ಖರೀದಿಗೆ 1,700 ಕೋಟಿ ರೂಪಾಯಿ ನೀಡಿದ್ದು, ಶಕ್ತಿ ಯೋಜನೆಯ ಎಲ್ಲಾ ಅಂಕಿ ಅಂಶಗಳನ್ನು ನೀಡಿದ ನಂತರ ನಿಗಮಗಳಿಗೆ ಅನುದಾನ ಬಿಡುಗಡೆಯಾಗಲಿದೆ ಎಂದರು.
ದಾವಣಗೆರೆಯಲ್ಲಿ 120 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕವಾದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದ್ದು, ಡಿಸೆಂಬರ್ ಅಂತ್ಯದ ವೇಳೆ ಇದರ ಉದ್ಘಾಟನೆ ನೆರವೇರಿಸಲು ಉದ್ದೇಶಿಸಲಾಗಿದೆ. 120 ಕೋಟಿ ರೂಪಾಯಿ ವೆಚ್ಚದ ಅತ್ಯಾಧುನಿಕ ಸೌಲಭ್ಯವುಳ್ಳ ಬಸ್ ನಿಲ್ದಾಣ ಇದಾಗಿದ್ದು, ಆರೂವರೆ ಹೆಕ್ಟೇರ್ ಜಾಗದಲ್ಲಿ ನಿರ್ಮಾಣವಾಗುತ್ತಿದೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಶೇಕಡಾ 75ರಷ್ಟು ಅನುದಾನ ಮತ್ತು ಕೆ.ಎಸ್.ಆರ್.ಟಿ.ಸಿ.ಯಿಂದ ಶೇಕಡಾ 25ರಷ್ಟು ಅನುದಾನದಲ್ಲಿ ನಿಲ್ದಾಣ ನಿರ್ಮಾಣವಾಗುತ್ತಿದೆ. 3 ಮಾಲ್ಗಳು, ಹೋಟೆಲ್, ಥಿಯೇಟರ್ ಸೇರಿದಂತೆ ಪ್ರಯಾಣಿಕರಿಗೆ ಅಗತ್ಯವಿರುವ ತತ್ಕ್ಷಣದ ಸೌಲಭ್ಯಗಳು ಇಲ್ಲಿ ಕಲ್ಪಿಸಲಾಗುತ್ತದೆ. ಅಲ್ಲದೆ ಏಕಕಾಲದಲ್ಲಿ 41 ಬಸ್ಗಳು ಹೋಗಲು ಸ್ಥಳಾವಕಾಶ ಕಲ್ಪಿಸಲಾಗಿದೆ. ಜೊತೆಗೆ ಕಾರ್ ಪಾರ್ಕಿಂಗ್ ವ್ಯವಸ್ಥೆಯು ಇಲ್ಲಿರಲಿದೆ ಎಂದು ಮಾಹಿತಿ ನೀಡಿದರು.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿ ನೂತನ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣವು ಎಲ್ಲಾ ನಾಗರೀಕ ಸೌಲಭ್ಯವನ್ನು ಹೊಂದಲಿದ್ದು ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಇಲ್ಲಿರಲಿದೆ. ನಗರದಲ್ಲಿ ಟ್ರಕ್ ಟರ್ಮಿನಲ್ ಅಗತ್ಯವಿದ್ದು ಸ್ಥಳದ ಬಗ್ಗೆ ಸಭೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸ್ಥಳಾವಕಾಶ ಕಲ್ಪಿಸಿ ಟರ್ಮಿನಲ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ವೇಳೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಕೆಎಸ್ಆರ್ ಟಿಸಿ ಎಂ.ಡಿ. ಅನ್ಬುಕುಮಾರ್ ಸೇರಿದಂತೆ ಮತ್ತತರರು ಉಪಸ್ಥಿತರಿದ್ದರು.












Click it and Unblock the Notifications