KSRTC Recruitment: ಅನುಕಂಪದ ಆಧಾರದಲ್ಲಿ ಹುದ್ದೆಗಳ ಭರ್ತಿ, ಆದೇಶ ವಿತರಣೆ: ರಾಮಲಿಂಗಾ ರೆಡ್ಡಿ
ಬೆಂಗಳೂರು, ಜುಲೈ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇತ್ತೀಚೆಗೆ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ. ಅಪಘಾತದಿಂದ ಮೃತಪಟ್ಟ ಸಿಬ್ಬಂದಿ ಕುಟುಂಬಸ್ಥರಿಗೆ ವಿಮೆ ಹಣ, ಪರಿಹಾರ ಹಣ ನೀಡುವ ಜೊತೆಗೆ ಅನುಕಂಪದ ಆಧಾರದಲ್ಲಿ ಒಟ್ಟು 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಶುಕ್ರವಾರ ಸಚಿವರ ರಾಮಲಿಂಗಾ ರೆಡ್ಡಿ ಅವರು ನೀಡಿದರು.
ನೇಮಕಾತಿ ಆದೇಶ ವಿತರಣೆ, ಪರಿಹಾರ ವಿತರಣೆ ಹಾಗೂ ಐದು ಐರಾವತ ಕ್ಲಬ್ ಕ್ಲಾಸ್ 2.0 ಹೊಸ ಬಸ್ಸುಗಳನ್ನು ರಾಮಲಿಂಗಾ ರೆಡ್ಡಿ ಅವರೊಂದಿಗೆ ನಿಗದಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಅವರು ಉದ್ಘಾಟನೆ ಮಾಡಿದರು.

ಈ ವೇಳೆ ಮಾತನಾಡಿದ ಸಚಿವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳಿಂದ ಅನುಕಂಪದ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯು ಸ್ಥಗಿತಗೊಂಡಿತ್ತು. ಇದೀಗ ಅನುಕಂಪದ ಆಧಾರದ ಮೇಲೆ ನೌಕರಿಗೆ ಪ್ರಕ್ರಿಯೆಯು ಪ್ರಾರಂಭಗೊಂಡಿದೆ. ಕಳದೆ 01 ವರ್ಷದ ಅವಧಿಯಲ್ಲಿ 271 ವಿವಿಧ ಹುದ್ದೆಗಳನ್ನು (ಕರಾಸಾ ಪೇದೆ-152, ಕಛೇರಿ ಸಹಾಯಕ (ಸ್ವಚ್ಛತೆ) 60, ತಾಂತ್ರಿಕ ಸಹಾಯಕ-37, ಚಾಲಕ ಕಂ ನಿರ್ವಾಹಕ-22) ಭರ್ತಿ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಇಂದಿನ ಕಾರ್ಯಕ್ರಮದಲ್ಲಿ 45 ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಪೇದೆ ಹುದ್ದೆಯ ನೇಮಕಾತಿ ಆದೇಶವನ್ನು ವಿತರಣೆ ಮಾಡಿದ್ದೇವೆ. ಇದರೊಂದಿಗೆ ಸಾರಿಗೆ ಸಿಬ್ಬಂದಿಗಳು ಹಗಲು, ಇರಳೆನ್ನದೇ ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿರುತ್ತದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.
ಸಾರಿಗೆ ಸುರಕ್ಷಾ ವಿಮಾ ಯೋಜನೆ
ಸಂಸ್ಥೆಯು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿ ಇಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆ ಜಾರಿಗೆ ತಂದಿದ್ದೇವೆ.

ಈ ಯೋಜನೆಯಡಿ ಇದುವರೆವರೆಗೆ 26 ಜನ ನೌಕರರ ಕುಟುಂಬದವರಿಗೆ ತಲಾ 1 ಕೋಟಿ ರೂಪಾಯಿ ಅಪಘಾತ ವಿಮಾ ಮೊತ್ತ ನೀಡಲಾಗಿದೆ. ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಓರ್ವ ಸಿಬ್ಬಂದಿಯ ಅವಲಂಬಿತರಿಗೆ 1 ಕೋಟಿ ರೂಪಾಯಿ ಚೆಕ್ ನೀಡಲಾಗಿದೆ. ಒಟ್ಟಾರೆ 27 ಸಿಬ್ಬಂದಿಗಳ ಅವಲಂಭಿತರಿಗೆ 27 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ.
ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ
ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಈ ಕಾಯಿಲೆ ಇಲ್ಲವೇ ಹಠಾತ್ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳು ಸರ್ಕಾರದ ಗಮನಕ್ಕಿದೆ. ಅವರಿಗೆ ಪರಿಹಾರ ಮೊತ್ತ 3 ಲಕ್ಷದಿಂದ 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಇಂತಹ 125 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ನೀಡಲಾಗಿದೆ.
ಇಂದು 26 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳಂತೆ ಒಟ್ಟು ರೂ.2.60 ಕೋಟಿ ಪರಿಹಾರದ ಚೆಕ್ ಅನ್ನು ವಿತರಿಸಲಾಯಿತು. ಈವರೆಗೂ 151 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟು ರೂ. 15.10 ಕೋಟಿಗಳ ಪರಿಹಾರ ನೀಡಿರುವುದಾಗಿ ಮಾಹಿತಿ ಕೊಟ್ಟರು. ವಿತರಿಸಿ ಪರಿಹಾರದ ಮೊತ್ತವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ಕುಟುಂಬಸ್ಥರಿಗೆ ಸಲಹೆ ನೀಡಿದರು.












Click it and Unblock the Notifications