ದಾವಣಗೆರೆ; ಅಕ್ಟೋಬರ್ 16ರಂದು ಬೃಹತ್ ಉದ್ಯೋಗ ಮೇಳ
ದಾವಣಗೆರೆ, ಅಕ್ಟೋಬರ್ 12; ಉದ್ಯೋಗ ಹುಡುಕುತ್ತಿರುವ ಯುವಕ, ಯುವತಿಯರಿಗೆ ಸಿಹಿಸುದ್ದಿ. ದಾವಣಗೆರೆಯಲ್ಲಿ ಅಕ್ಟೋಬರ್ 16ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದು.
ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ .ಎಂ. ವಿ. ಈ ಕುರಿತು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 16ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್ ಗ್ರೌಂಡ್ ಹತ್ತಿರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಜಿಲ್ಲೆಯ ನಿರುದ್ಯೋಗಿ ಯುವಕ/ ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಮತ್ತು ರಾಜ್ಯ ಮಟ್ಟದ ಕಂಪನಿಗಳು ಪಾಲ್ಗೊಳ್ಳುತ್ತಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ವಿವಿಧ ಜಿಲ್ಲೆಗಳ ಹಾಗೂ ರಾಜ್ಯಮಟ್ಟದಿಂದ 100 ರಿಂದ 150 ಉದ್ಯೋಗದಾತರು ಪಾಲ್ಗೊಳ್ಳಲಿದ್ದಾರೆ. ಆಸಕ್ತ ಯುವಕ/ ಯುವತಿಯರು ಅಗತ್ಯ ದಾಖಲೆಗಳ ಜೊತೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಕಲಬುರಗಿಯಲ್ಲಿ ಉದ್ಯೋಗ ಮೇಳ; ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಲಬುರಗಿ ಜಿಲ್ಲೆಯ ಸೇಡಂನ ಮಿನಿ ವಿಧಾನಸೌಧದಲ್ಲಿ ಅಕ್ಟೋಬರ್ 13ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ.
7 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಮಿನಿ ವಿಧಾನಸೌಧದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಡಿಗ್ರಿ ಮತ್ತು ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವವರು ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಆಸಕ್ತ ಯುವಕ/ ಯುವತಿಯರು ಅಗತ್ಯ ದಾಖಲಾತಿಗಳೊಂದಿಗೆ, ರೆಸ್ಯೂಮ್ನ 10 ಪ್ರತಿಗಳೊಂದಿಗೆ ವಿವಿಧ ಕಂಪನಿಗಳು ನಡೆಸುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.
ಉದ್ಯೋಗ ಖಾತರಿ ನಡಿಗೆ ಅಭಿಯಾನ; ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಬಳ್ಳಾರಿ ಜಿಲ್ಲೆಯಲ್ಲಿ 'ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ' ಎಂಬ ಅಭಿಯಾನವನ್ನು ಆರಂಭಿಸಲಾಗಿದೆ.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು, "ಮಹಾತ್ಮ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನವನ್ನು ಅಕ್ಟೋಬರ್ 31ರವರೆಗೆ ಆಟೋ ಪ್ರಚಾರ ಮೂಲಕ ಎಲ್ಲಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ" ಎಂದರು.
"ಗ್ರಾಮದ ರೈತರಿಗೆ ವೈಯಕ್ತಿಕ ಕಾಮಗಾರಿ ಬೇಡಿಕೆಯನ್ನು ಹಾಗೂ ಗ್ರಾಮ ಪಂಚಾಯತಿಯಲ್ಲಿನ ಕಾಮಗಾರಿಗಳ ಬೇಡಿಕೆಗಳನ್ನು ಪೆಟ್ಟಿಗೆಯಲ್ಲಿ ಸಂಗ್ರಹಿಸಲಾಗುವುದು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮನೆ-ಮನೆಗೆ ಭೇಟಿ ಮಾಡಿ ಮಾಹಿತಿಯನ್ನು ಸಂಗ್ರಹಿಸಲು ತಂಡ ರಚನೆ ಮಾಡಲಾಗಿದೆ. ತಂಡವು ಪ್ರತಿ ದಿನ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಅಭಿಯಾನ ಕುರಿತು ಮಾಹಿತಿ ನೀಡುತ್ತಾರೆ" ಎಂದು ಹೇಳಿದರು.
"ನರೇಗಾ ಯೋಜನೆಯಡಿ ದೊರೆಯುವ ಕೂಲಿಯ ಮೊತ್ತ ಗಂಡು ಹೆಣ್ಣಿಗೆ ಸಮಾನವಾಗಿದೆ. ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆಯಡಿ ದೊರೆಯುವ ವೈಯಕ್ತಿಕ ಸೌಲಭ್ಯಗಳು, ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಶೇ.50ರಷ್ಟು ರಿಯಾಯಿತಿ, ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ" ಎಂದು ತಿಳಿಸಿದರು.
"ಅಕುಶಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಗೆ ನಿರ್ವಹಿಸುವ ಕೆಲಸಕ್ಕೆ/ ಕೂಲಿ ಕಾರ್ಮಿಕರುಗಳಿಗೆ ಹೆಚ್ಚುವರಿಯಾಗಿ ಶೇ.20ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುವ ಕುರಿತು ಹಾಗೂ ಮಹಿಳಾ ಭಾಗವಹಿಸುವಿಕೆಯನ್ನು ಕನಿಷ್ಟ ಶೇ.60 ಪ್ರತಿಶತಕ್ಕೆ ಹೆಚ್ಚಿಸುವುದರ ಕುರಿತು ಮಾಹಿತಿ ಒದಗಿಸುವುದು" ಈ ಅಭಿಯಾನದ ಉದ್ದೇಶವಾಗಿದೆ ಎಂದರು.












Click it and Unblock the Notifications