12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ
ಬೆಂಗಳೂರು, ಮೇ 01: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ ಮಾಡಿದರು.
ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ- ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು ಬಂದಿದೆ. ಇಡೀ ವಿಶ್ವಕ್ಕೆ ದೊಡ್ಡ ಸೇವೆ ಮಾಡುವ ಕಾರ್ಮಿಕರ ದಿನವಿಂದು ಎಂದು ಶ್ಲಾಘಿಸಿದರು.
ಪುರದ ಹಿತ ಕಾಪಾಡುತ್ತಿರುವವರು ಪೌರ ಕಾರ್ಮಿಕರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಾವು ವಿರೋಧ ಪಕ್ಷದಲ್ಲಿದ್ದಾಗ ಹಾಗೂ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಪೌರ ಕಾರ್ಮಿಕರನ್ನು ಸರ್ಕಾರಿ ಕಾರ್ಮಿಕರನ್ನಾಗಿ ಮಾಡುವ ಮಾತು ಕೊಟ್ಟಿದ್ದೆವು. ನಾವುಗಳು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಪೌರ ಕಾರ್ಮಿಕರ ಮಕ್ಕಳೇ ಇಂದು ಈ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ, ಬುದ್ಧಿವಂತರಾಗಿ ದೊಡ್ಡ ಹುದ್ದೆ ಅಲಂಕರಿಸುವಂತೆ ಮಾಡಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದರು.
ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ. ಪೌರಕಾರ್ಮಿಕರನ್ನು ಕುವೆಂಪು ಅವರು ಶಿವನಿಗೆ ಹೋಲಿಸಿದ್ದರು. 'ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ. ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ. ಅಂಜದಿರು ಸೋದರನೇ ನಿಮ್ಮ ಜತೆ ನಾವಿದ್ದೇವೆ' ಎಂದು ಕುವೆಂಪು ಅವರು ಹೇಳಿದ್ದರು. ಇಂದು ನಿಮ್ಮ ಬದುಕು ಬದಲಾವಣೆಯಾಗುತ್ತಿರುವ ಬಹಳ ಪವಿತ್ರವಾದ ದಿನ. ಇಂದು ನೀವು ಸರ್ಕಾರಿ ನೌಕರರಾಗಿದ್ದೀರಿ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಮುನ್ಸಿಪಲ್ ಅಧ್ಯಕ್ಷರಾಗಿ ಜೀವನ ಆರಂಭಿಸಿದವರು. ಇಂದು ದೇಶದ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಮಹಾತ್ಮಾ ಗಾಂಧಿಜಿ, ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಲಂಕರಿಸಿದ ಹುದ್ದೆಯಲ್ಲಿದ್ದಾರೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿ ಮಾಡಿದ ಕೆಲಸಗಳು ದೇಶದ ಇತಿಹಾಸ ಪುಟ ಸೇರಿವೆ. ದೇಶದ ಉದ್ದಗಲದಲ್ಲಿ ಇಎಸ್ಐ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಅವರಿಂದಲೇ ಈ ಕಾರ್ಯಕ್ರಮ ಉದ್ಘಾಟಿಸಲು ತೀರ್ಮಾನಿಸಿದ್ದೇವೆ ಎಂದರು.
ಪೌರ ಕಾರ್ಮಿಕರ ಅಭಿವೃದ್ಧಿಗಾಗಿ ಪಾಲಿಕೆ ಬಜೆಟ್ ನಲ್ಲಿ ರೂ. 600 ಕೋಟಿ ಹಣ ಮೀಸಲಿಡಲಾಗಿದ್ದು, ಒಂದೇ ಒಂದು ರೂಪಾಯಿ ಲಂಚ ಪಡೆಯದೇ ನಿಮ್ಮನ್ನು ಖಾಯಂ ಮಾಡಲಾಗಿದೆ. ಸಿಂಧುತ್ವ ವಿಚಾರದಲ್ಲಿ ಕೆಲವು ಗೊಂದಲಗಳಿರುವ ಕಾರಣಕ್ಕೆ ಕೆಲವರ ಕೆಲಸ ಖಾಯಂ ಆಗಿಲ್ಲ. ಈ ಬಗ್ಗೆ ಪ್ರತ್ಯೇಕವಾಗಿ ಬೂತ್ ಆರಂಭಿಸಿ, ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿಸಿ ನಿಮ್ಮೆಲ್ಲರಿಗೂ ನ್ಯಾಯ ಒದಗಿಸಲಾಗುವುದು ಎಂದು ವಾಗ್ದಾನ ನೀಡಿದರು.
ಇದ್ದಾಗ ರೊಟ್ಟಿ ಕೊಟ್ಟರೆ, ಸತ್ತಾಗ ಸ್ವರ್ಗ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ನಮ್ಮ ಸರ್ಕಾರ ನಿಮ್ಮ ಸರ್ಕಾರ. ಬೆಂಗಳೂರಿನ ಕಾಂಗ್ರೆಸ್ ಶಾಸಕರು ಸದಾ ನಿಮ್ಮನ್ನು ಖಾಯಂ ಮಾಡುವ ಬಗ್ಗೆ ನನ್ನ ಮೇಲೆ ಒತ್ತಡ ಹಾಕುತ್ತಿದ್ದರು. ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ಈ ಕೆಲಸ ಮಾಡಿದ್ದೇವೆ. ಇದು ನಮ್ಮ ಸಂಕಲ್ಪ. ಸಮಾಜ ಎನ್ನುವ ಚಕ್ರದಲ್ಲಿ ಕೆಳಗಿರುವವರು ಮೇಲಕ್ಕೆ ಹೋಗುತ್ತಾರೆ, ಮೇಲಿರುವವರು ಕೆಳಗೆ ಹೋಗುತ್ತಾರೆ ಎಂದು ವಿವೇಕಾನಂದ ಅವರು ಹೇಳಿದ್ದಾರೆ. ಅದೇ ರೀತಿ ನಿಮಗೆ ಸಮಾನತೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಬಸವಲಿಂಗಪ್ಪ, ಐಪಿಡಿ ಸಾಲಪ್ಪ ಅವರ ಜತೆ ನಾನು ರಾಜಕೀಯವಾಗಿ ಕೆಲಸ ಮಾಡಿದ್ದು, ಅವರನ್ನು ಸ್ಮರಿಸುತ್ತೇನೆ. ಅವರು ನಿಮ್ಮ ಬದುಕಿನ ಕಲ್ಯಾಣಕ್ಕೆ ಹೋರಾಟ ಮಾಡಿದ್ದಾರೆ. ಡಿ.ಸಾಲಪ್ಪ ಅವರು ನಿಮ್ಮ ಬಗ್ಗೆ ವರದಿ ನೀಡಿದ್ದಾರೆ. ಆ ವರದಿಯನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ. ನಿಮ್ಮ ಮಕ್ಕಳ ಭವಿಷ್ಯ ಗಟ್ಟಿಗೊಳಿಸಲು ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ 700 ಕೋಟಿ ಮೀಸಲಿಡಲಾಗಿದೆ. ನೀವು ನಿವೃತ್ತಿಯಾದಾಗ 10 ಲಕ್ಷ ಹಣವನ್ನು ಡೆಪಾಸಿಟ್ ಮಾಡಿ 6 ಸಾವಿರ ಪಿಂಚಣಿ ದೊರೆಯುವಂತೆ ಯೋಜನೆ ರೂಪಿಸಿದ್ದೇವೆ. ನಿಮಗೆ ಆರೋಗ್ಯ, ಮಕ್ಕಳ ಶಿಕ್ಷಣ, ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. 2017ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 10 ಸಾವಿರ ಪೌರ ಕಾರ್ಮಿಕರನ್ನು ನೇರ ನೇಮಕ ಮಾಡಿತ್ತು.
ರಾಜ್ಯದಾದ್ಯಂತ ನಿಮಗಾಗಿ 7.70 ಲಕ್ಷ ಮನೆ ನಿರ್ಮಿಸಲಾಗಿತ್ತು. 1 ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗಿದೆ. 2024-25ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ವಿಮೆ ಘೋಷಿಸಿದ್ದಾರೆ" ಎಂದು ಸರ್ಕಾರದ ಕಾರ್ಯಕ್ರಮಗಳನ್ನು ವಿವರಿಸಿದರು. ಕೋವಿಡ್ ಸಂದರ್ಭದಲ್ಲಿ ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ವಾರಿಯರ್ ನಂತೆ ಇಡೀ ರಾಜ್ಯವನ್ನು ಕಾಪಾಡಿದ್ದನ್ನು ನಾವು ಮರೆಯಲು ಸಾಧ್ಯವಿಲ್ಲ. ಪೌರ ಕಾರ್ಮಿಕರನ್ನು ಯಾರೂ ಕೀಳಾಗಿ ಕಾಣುವಂತಿಲ್ಲ. ನಾವು ಆಯುಕ್ತರಿಗೆ ನೀಡುವ ಗೌರವವನ್ನು ಪೌರಕಾರ್ಮಿಕರಿಗೂ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಕೆ ಹೆಚ್ ಮುನಿಯಪ್ಪ ಅವರು ಮಾತನಾಡಿ, ಸ್ವತಂತ್ರ ಭಾರತದಲ್ಲಿ ಈ ಮಹತ್ತ್ವದ ಕಾರ್ಯಕ್ರಮ ಆಯೋಜಿಸುವ ಮೂಲಕ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣೆ ನೀಡುತ್ತಿರುವುದು ಇದೇ ಮೊದಲು ಅದು ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ರವರ ನೇತೃತ್ವದ ನಮ್ಮ ಸರ್ಕಾರ ಎಂದು ಹೇಳಿದರು.
ವಿಶೇಷವಾಗಿ ನಮ್ಮ ಸಚಿವರಾದ ಡಿಕೆ.ಶುವಕುಮಾರ್ ರವರ ನೇತೃತ್ವದಲ್ಲಿ ಸುಮಾರು 12600 ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣೆಯಲ್ಲಿ ಮಹತ್ತದ ಪಾತ್ರ ವಹಿಸಿ ಈ ಕಾರ್ಯಕ್ರಮದಲ್ಲಿ ಅವರಿಗೆ ವಿತರಿಸಿರುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಈ ದೇಶದಲ್ಲಿ ಹಲವಾರು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳಿದ್ದರು ಸಹಾ ಇಂತಹ ವಿಶೇಷವಾದ ಕಾರ್ಯಕ್ರಮದ ಮೂಲಕ ಬಡವರಿಗೆ ಅದರಲ್ಲೂ ನಗರದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕ ರ ಪರವಾದ ಕಾರ್ಯಕ್ರಮ ಆಯೋಜನೆ ಮಾಡಲು ಸಾದ್ಯವಾಗಿಲ್ಲ. ಅದು ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರದ ವತಿಯಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.
ಇಂದಿರಾಗಾಂಧಿ ಮತ್ತು ಮಹಾತ್ಮ ಗಾಂಧೀಜಿಯವರ ತತ್ವ ಸಿದ್ದಾಂತಗಳನ್ನು ಬಳಸಿಕೊಂಡಿರು ನಮ್ಮ ಕಾಂಗ್ರೆಸ್ ಪಕ್ಷ ಈ ಪಕ್ಷಕ್ಕೆ ಶೋಷಿತರಲ್ಲಿ ಶೋಷಿತ ಸಮುದಾಯದವರು ವಿಶ್ವಾಸಹೊಂದಿದ್ದು ಪೌರಕಾರ್ಮಿಕ ರು ನಗರ ಆರೋಗ್ಯ ವನ್ನು ಕಾಪಾಡುವ ಮಹತ್ತದ ಕೆಲಸ ಮತ್ತು ಜನರಿಗೆ ನೆಮ್ನದಿ ಆರೋಗ್ಯ ವನ್ನು ಕಾಪಾಡುವ ಸಲುವಾಗಿ ಮಹತ್ವದ ಕೆಲಸವನ್ನು ಮಾಡುತ್ತಾರೆ ಅವರಿಗೆ ನಾವು ಈ ಒಂದು ನೇಮಕಾತಿ ಪತ್ರ ವಿತರಿಸಿರುವುದು ನಮಗೆ ಹೆಮ್ಮೆಯ ವಿಚಾರವಾಗಿದೆ ಎಂದರು.
ಇನ್ನೂ ಈ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ರಹೀಮ್ ಖಾನ್, ಕೆ.ಹೆಚ್. ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಶಾಸಕರಾದ ರಿಜ್ವಾನ್ ಆರ್ಶದ್, ಎಸ್.ಟಿ. ಸೋಮಶೇಖರ್, ಆನೇಕಲ್ ಶಿವಣ್ಣ, ಎಂ.ಸಿ. ಶ್ರೀನಿವಾಸ್, ಎಂಎಲ್ಸಿ ಎಸ್ ರವಿ, ಯು.ಬಿ. ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications