3000 ಪರವಾನಗಿ ಭೂಮಾಪಕರ ನೇಮಕಾತಿ ಆದೇಶ ವಾಪಸ್!
ಬೆಂಗಳೂರು, ಡಿಸೆಂಬರ್ 05; ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಪರವಾನಗಿ ಭೂಮಾಪಕ 3000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಕರ್ನಾಟಕ ಸರ್ಕಾರ ಈ ನೇಮಕಾತಿ ಆದೇಶವನ್ನು ವಾಪಸ್ ಪಡೆದಿದೆ.
ಶನಿವಾರ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂ ಮಾಪಕರುಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಅಧಿಸೂಚನೆಯನ್ನು ಹಿಂಪಡೆಯುವ ಬಗ್ಗೆ ಆದೇಶದಲ್ಲಿ ತಿಳಿಸಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಈ ಕಚೇರಿಯ ಪತ್ರದಲ್ಲಿ ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂ ಮಾಪಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಹೊರಡಿಸಿರುವ ಅಧಿಸೂಚನೆಯನ್ನು ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.

3 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು; ಒಟ್ಟು 3 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿತ್ತು. ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು.
ಡಿಸೆಂಬರ್ 10ರಂದು ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣಾ ನೀತಿ ಸಂಹಿತೆ ಡಿಸೆಂಬರ್ 16ರ ತನಕ ಜಾರಿಯಲ್ಲಿರುತ್ತದೆ. ಆದ್ದರಿಂದ ನೇಮಕಾತಿ ಆದೇಶ ವಾಪಸ್ ಪಡೆಯಲಾಗಿದೆ.
ನೇಮಕಾತಿ ಆದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ದಿಷ್ಟಪಡಿಸಿದ ಜಿಲ್ಲಾ ಕೇಂದ್ರಗಳಲ್ಲಿ 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷೆಯ ಖಚಿತ ದಿನಾಂಕವನ್ನು ವೆಬ್ಸೈಟ್ rdservices.karnataka.gov.in ಮತ್ತು ದಿನಪತ್ರಿಕೆಗಳಲ್ಲಿ 15 ದಿನ ಮುಂಚಿತವಾಗಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿತ್ತು.
ಒಬ್ಬ ಅಭ್ಯರ್ಥಿಯು ಆನ್ಲೈನ್ನಲ್ಲಿ ಒಂದು ಅರ್ಜಿಯನ್ನು ಸಲ್ಲಿಸುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಶುಲ್ಕ ರೂ.1000 ನಿಗದಿ ಮಾಡಲಾಗಿತ್ತು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಟ 18 ವರ್ಷ, ಗರಿಷ್ಟ 65 ವರ್ಷ ಮೀರಿರಬಾರದು ಎಂದು ತಿಳಿಸಲಾಗಿತ್ತು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಟ ವಿದ್ಯಾರ್ಹತೆ ಪದವಿಪೂರ್ವ ಶಿಕ್ಷಣ (ಪಿಯುಸಿ) ಅಥವಾ ಕೇಂದ್ರ ಪ್ರೌಢಶಿಕ್ಷಣ ಮಂಡಳಿ ಜರುಗಿಸುವ 12 ನೇ ತರಗತಿ ಸಿಬಿಎಸ್ಸಿ ಅಥವಾ ಐಸಿಎಸ್ಇ ಇವುಗಳಲ್ಲಿ ವಿಜ್ಞಾನ ವಿಷಯ ಪಡೆದು ಗಣಿತ ವಿಷಯದಲ್ಲಿ ಶೇ.60 ಕ್ಕಿಂತ ಕಡಿಮೆ ಇಲ್ಲದೆಂತೆ ಅಂಕ ಪಡೆದು ಉತ್ತೀರ್ಣರಾಗಿರಬೇಕು ಎಂದು ಹೇಳಿತ್ತು ಅಥವಾ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ(ಸಿವಿಲ್)/ಅಥವಾ ಬಿ.ಟೆಕ್(ಸಿವಿಲ್)/ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಲಾಗಿತ್ತು.
ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೇಯಲ್ಲಿ ಪದವಿಪೂರ್ವ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುಬೇಕು. ಅಥವಾ ರಾಜ್ಯ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ನಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕೇಂದ್ರ ಅಥವಾ ರಾಜ್ಯ ಸರ್ಕಾರಿ ವಲಯಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಟ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಿರುತ್ತಾರೆ ಎಂದು ತಿಳಿಸಲಾಗಿತ್ತು.
ಅರ್ಹತಾ ಷರತ್ತುಗಳು, ಆಯ್ಕೆಯ ವಿಧಾನ, ತರಬೇತಿ ಸೇರಿದಂತೆ ಇತರೆ ಸೂಚನೆಗಳಿಗೆ ಇಲಾಖಾ ವೆಬ್ಸೈಟ್ನಲ್ಲಿ ಮಾಹಿತಿ ಪಡೆಯಬಹುದು ಎಂದು ಆಯುಕ್ತರು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ, ಬೆಂಗಳೂರು ಪ್ರಕಟಣೆ ತಿಳಿಸಿತ್ತು. ಈಗ ನೇಮಕಾತಿ ಆದೇಶವನ್ನು ವಾಪಸ್ ಪಡೆಯಲಾಗಿದೆ. ಪುನಃ ಅಧಿಸೂಚನೆ ಪ್ರಕಟವಾಗುವ ತನಕ ಅಭ್ಯರ್ಥಿಗಳು ಕಾಯಬೇಕಾಗಿದೆ.












Click it and Unblock the Notifications